ಕೋಲಾರ: ತಾಲ್ಲೂಕಿನ ಅರಾಭಿಕೊತ್ತನೂರು ಗ್ರಾಮದಲ್ಲಿ ಶನಿವಾರ ಸೋಮೇಶ್ವರಸ್ವಾಮಿ ಬ್ರಹ್ಮ ರಥೋತ್ಸವ ವೈಭವದಿಂದ ನಡೆಯಿತು.
ಗ್ರಾಮಸ್ಥರು ರಥೋತ್ಸವದ ದಾರಿಯುದ್ದಕ್ಕೂ ಮಜ್ಜಿಗೆ, ಪಾನಕ, ಹೆಸರು ಬೇಳೆ ವಿತರಿಸಿದರು. ರಥೋತ್ಸವದ ಅಂಗವಾಗಿ ಗ್ರಾಮದ ಸಮುದಾಯ ಭವನದಲ್ಲಿ ಅನ್ನ ಸಂತರ್ಪಣೆ ನಡೆಸಲಾಯಿತು. ಸುತ್ತಮುತ್ತಲ ಗ್ರಾಮಗಳ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡರು.
ಗ್ರಾಮದ ಸೋಮನಾಥೇಶ್ವರ ಸ್ವಾಮಿ, ಲಕ್ಷ್ಮೀ ವೆಂಕಟೇಶ್ವರಸ್ವಾಮಿ, ವೀರಭದ್ರ ಸ್ವಾಮಿ, ಆಂಜನೇಯ ಸ್ವಾಮಿ, ಗಣಪತಿ, ಕರಗದಮ್ಮ, ರೇಣುಕಾ ಯಲ್ಲಮ್ಮ, ಶನೇಶ್ವರ ಸ್ವಾಮಿ, ಪಟಾಲಮ್ಮ ದೇವಿ, ಕುಂಟ ಗಂಗಮ್ಮ ಮತ್ತು ಸಿದ್ದೇಶ್ವರ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ನಡೆಯಿತು. ಲಕ್ಷ್ಮೀ ವೆಂಕಟೇಶ್ವರಸ್ವಾಮಿ ಕಲ್ಯಾಣೋತ್ಸವ ನಡೆಸಲಾಯಿತು.
ವೀರಗಾಸೆ ಕುಣಿತ, ಗಾರುಡಿ ಗೊಂಬೆ, ತಮಟೆ ವಾದ್ಯ, ಡೊಳ್ಳು ಮತ್ತು ಕೀಲುಕುದುರೆ ಕುಣಿತ, ಹಗಲು ವೇಷ ಕಲಾ ತಂಡಗಳು ರಥೋತ್ಸವಕ್ಕೆ ಮೆರುಗು ನೀಡಿದವು.
ಮಕರ ಸಂಕ್ರಾಂತಿ ಆಚರಿಸದ ಈ ಗ್ರಾಮದ ಜನ ಬ್ರಹ್ಮ ರಥೋತ್ಸವಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಾರೆ. ಈ ಹಿಂದೆ ಸುತ್ತಮುತ್ತಲಿನ ಬೆಟ್ಟಗಳಿಂದ ಚಿರತೆಗಳನ್ನು ಬೋನಿನಲ್ಲಿ ಸೆರೆ ಹಿಡಿದು ತಂದು ಗ್ರಾಮದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಮಾಡಿ ವಿಶಿಷ್ಟ ರೀತಿಯಲ್ಲಿ ರಥೋತ್ಸವ ಆಚರಿಸುತ್ತಿದ್ದರು. ಸರ್ಕಾರ ಹಾಗೂ ಅರಣ್ಯ ಇಲಾಖೆ ಕಾನೂನಿನ ಕಾರಣಕ್ಕೆ ಗ್ರಾಮಸ್ಥರು ಚಿರತೆ ಸೆರೆ ಹಿಡಿಯುವುದನ್ನು ಬಿಟ್ಟು ರಥೋತ್ಸವ ಮುಂದುವರಿಸಿಕೊಂಡು ಹೋಗುತ್ತಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.