ADVERTISEMENT

ಬಿತ್ತನೆ ಬೀಜ ಖರೀದಿ: ಎಚ್ಚರ ವಹಿಸಿ

​ಪ್ರಜಾವಾಣಿ ವಾರ್ತೆ
Published 23 ಜೂನ್ 2021, 16:17 IST
Last Updated 23 ಜೂನ್ 2021, 16:17 IST

ಕೋಲಾರ: ಜಿಲ್ಲೆಯಲ್ಲಿ ಆಗಾಗ್ಗೆ ಮಳೆಯಾಗುತ್ತಿದ್ದು, ರೈತರು ಅಧಿಕೃತ ಬಿತ್ತನ ಬೀಜ ಮಾರಾಟಗಾರರಿಂದ ಬಿತ್ತನೆ ಬೀಜ ಖರೀದಿಸಬೇಕು ಎಂದು ತೋಟಗಾರಿಕೆ ಇಲಾಖೆ ಉಪ ನಿರ್ದೇಶಕಿ ಗಾಯತ್ರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರೈತರು ಬಿತ್ತನೆ ಬೀಜ ಖರೀದಿಸುವಾಗ ಕೆಲ ಅಂಶಗಳನ್ನು ಗಮನಿಸಬೇಕು. ಬಿತ್ತನೆ ಬೀಜ ಖರೀದಿ ಸಂಬಂಧ ಅಧಿಕೃತ ರಸೀದಿ ಪಡೆಯಬೇಕು. ರಸೀದಿಯಲ್ಲಿ ಲಾಟ್‌ ನಂಬರ್ ನಮೂದು ಆಗಿದೆಯೇ ಎಂಬುದನ್ನು ಪರಿಶೀಲಿಸಬೇಕು. ಚೀಲದ ಮೇಲೆ ನಮೂದಿಸಿರುವಂತೆ ತೂಕದ ಪ್ರಮಾಣ ಸರಿಯಿದೆಯೇ ಮತ್ತು ಚೀಲವನ್ನು ಯಂತ್ರೋಪಕರಣದಿಂದ ಹೊಲಿಯಲಾಗಿದೆಯೇ ಎಂದು ಪರಿಶೀಲನೆ ಮಾಡಬೇಕು ಎಂದು ಹೇಳಿದ್ದಾರೆ.

ಬಿತ್ತನೆ ಬೀಜದ ಉತ್ಪಾದಕರು ಮತ್ತು ಮಾರಾಟಗಾರರ ವಿಳಾಸ ಗಮನಿಸಬೇಕು. ಬಿತ್ತನೆ ಬೀಜವು ಸಂಬಂಧಪಟ್ಟ ಪ್ರಾಧಿಕಾರದಿಂದ ಪರೀಕ್ಷೆಗೆ ಒಳಪಟ್ಟು ಗುಣಮಟ್ಟ ದೃಢೀಕರಿಸಲಾಗಿದೆಯೇ ಎಂಬುದನ್ನು ಖಾತ್ರಿಪಡಿಸಿಕೊಳ್ಳಬೇಕು. ಬಿತ್ತನೆಗೆ ಮುಂಚೆ ಬೀಜ ಮೊಳೆಯುವಿಕೆ ಪ್ರಮಾಣ ಪರೀಕ್ಷಿಸಿಕೊಳ್ಳಬೇಕು. ಬಿತ್ತನೆ ಬೀಜವನ್ನು ಕೀಟನಾಶಕಗಳಿಂದ ಉಪಚರಿಸಲಾಗಿದೆಯೇ ಎಂಬುದನ್ನು ಗಮನಿಸಬೇಕು ಎಂದು ಸೂಚಿಸಿದ್ದಾರೆ.

ADVERTISEMENT

ಬಿತ್ತನೆ ಬೀಜದ ಚೀಲ, ಸ್ವಲ್ಪ ಪ್ರಮಾಣದ ಬಿತ್ತನೆ ಬೀಜ, ದೃಢೀಕರಣದ ಬಗ್ಗೆ ಲಗತ್ತಿಸಿರುವ ಟ್ಯಾಗ್‌ಗಳನ್ನು ಬೆಳೆ ಕಟಾವು ಆಗುವವರೆಗೂ ಸುರಕ್ಷಿತವಾಗಿ ಕಾಯ್ದಿಟ್ಟುಕೊಳ್ಳಬೇಕು. ನಮೂದಿಸಿರುವ ಉತ್ಪಾದನಾ ದಿನಾಂಕ ಮತ್ತು ಅವಧಿ ಮುಗಿಯುವ ದಿನಾಂಕವನ್ನು ಗಮನಿಸಬೇಕು. ಈ ಅಂಶಗಳು ಮುಂದೆ ಆಗಬಹುದಾದ ಬೆಳೆ ನಷ್ಟದ ಬಗ್ಗೆ ಜಾಗೃತಿ ಮೂಡಿಸುತ್ತವೆ. ಹೆಚ್ಚಿನ ಮಾಹಿತಿಗೆ 7829512236 ಮೊಬೈಲ್‌ ಸಂಖ್ಯೆ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.