ಕೋಲಾರ: ‘ವಿದ್ಯಾರ್ಥಿಗಳು ನಿರಂತರವಾಗಿ ಶಾಲೆಗೆ ಬರಬೇಕು. ಶಾಲೆ, ತರಗತಿ ಹಾಗೂ ವೈಯುಕ್ತಿಕ ಸ್ವಚ್ಛತೆಗೆ ಹೆಚ್ಚು ಗಮನಹರಿಸಿ ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಆಸಕ್ತಿ ಬೆಳೆಸಿಕೊಳ್ಳಬೇಕು’ ಎಂದು ಪ್ರೇರಣಾ ಕಾರ್ಯಕ್ರಮದ ಜಿಲ್ಲಾ ಉಸ್ತುವಾರಿ ಅಧಿಕಾರಿ ಆರ್.ಸುಬ್ರಮಣಿ ಕಿವಿಮಾತು ಹೇಳಿದರು.
ತಾಲ್ಲೂಕಿನ ಹರಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಪ್ರೇರಣಾ ಕಾರ್ಯಕ್ರಮದ ಪ್ರಗತಿ ಪರಿಶೀಲಿಸಿ ಮಾತನಾಡಿ, ‘ವಿದ್ಯಾರ್ಥಿಗಳಿಗೆ ಶಿಕ್ಷಣದಷ್ಟೇ ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳು ಮುಖ್ಯ’ ಎಂದು ತಿಳಿಸಿದರು.
‘ಸುಮೇರು, ಸುವೇಗ, ರೈನ್ ಬೋ ಅಭ್ಯಾಸ ಪುಸ್ತಕಗಳನ್ನು ಅಭ್ಯಾಸ ಮಾಡುವುದರಿಂದ ವಿದ್ಯಾರ್ಥಿಗಳಲ್ಲಿ ಸಹಕಾರ ಮನೋಭಾವ ಬೆಳೆಯುತ್ತದೆ. ಜತೆಗೆ ಜವಾಬ್ದಾರಿ ಹಂಚಿಕೆ, ನಿರ್ವಹಣೆ ಹಾಗೂ ನಾಯಕತ್ವ ಗುಣ ಬೆಳೆಸಬಹುದು’ ಎಂದು ಸಲಹೆ ನೀಡಿದರು.
‘ಪ್ರೇರಣಾ ಕಾರ್ಯಕ್ರಮದಿಂದ ಸಹಕಾರ ಮನೋಭಾವ, ನಿರ್ಭಯ ವಾತಾವರಣ ಸುಲಭವಾದ ಕಲಿಕೆ ಪಡೆಯಬಹುದು. ಪ್ರತಿಯೊಬ್ಬ ವಿದ್ಯಾರ್ಥಿಯು ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿರುವುದು ಸಂತಸದ ವಿಚಾರ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
‘ಹಿಂದಿನ ವರ್ಷದಂತೆಯೇ ಈ ವರ್ಷವೂ ಶಿಕ್ಷಣ ಪ್ರತಿಷ್ಠಾನದ ಮೂಲಕ ಜಿಲ್ಲೆಯ ಎಲ್ಲಾ ಶಾಲೆಗಳಲ್ಲೂ ಪ್ರೇರಣಾ ಕಾರ್ಯಕ್ರಮ ಜಾರಿಯಾಗಿದೆ. 15 ದಿನಗಳಲ್ಲಿ ಜಿಲ್ಲೆ ಹಾಗೂ ತಾಲ್ಲೂಕು ಮಟ್ಟದ ನೋಡಲ್ ಅಧಿಕಾರಿಗಳ ಜತೆ ಸಮಾಲೋಚನೆ ನಡೆಸಿ ನಂತರ ಜಿಲ್ಲಾ ಹಂತದಲ್ಲೂ ಜಾರಿಗೊಳಿಸಲಾಗುತ್ತದೆ’ ಎಂದು ವಿವರಿಸಿದರು.
ಹರಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯಶಿಕ್ಷಕ ಜಿ.ಶ್ರೀನಿವಾಸ್, ಸಮೂಹ ಸಂಪನ್ಮೂಲ ವ್ಯಕ್ತಿ ಗಂಗಾಧರ್, ಶಿಕ್ಷಕರಾದ ಪಿ.ಎಂ.ಗೋವಿಂದಪ್ಪ, ಆರ್.ಮಂಜುಳಾ, ಎಚ್.ಮುನಿಯಪ್ಪ, ಕೆ.ಮಮತಾ ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.