ಕೋಲಾರ: ‘ವಿದ್ಯಾರ್ಥಿಗಳು ಸಹಪಠ್ಯ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ. ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗೆ ಕ್ರೀಡಾ ಚಟುವಟಿಕೆ ಪೂರಕ’ ಎಂದು ಸೈನಿಕ್ ಪಬ್ಲಿಕ್ ಶಾಲೆ ಕಾರ್ಯದರ್ಶಿ ವೈ.ಸಿ.ಮುನೇಗೌಡ ಹೇಳಿದರು.
ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಪ್ರಥಮ ಸ್ಥಾನ ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುವ ವಿದ್ಯಾರ್ಥಿಗಳಿಗೆ ಶಾಲೆಯಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿ, ‘ಕ್ರೀಡಾಸಕ್ತಿಯು ವ್ಯಕ್ತಿಯನ್ನು ಸದಾ ಚಟುವಟಿಕೆಯಿಂದ ಇರುವಂತೆ ಮಾಡುತ್ತದೆ’ ಎಂದು ಅಭಿಪ್ರಾಯಪಟ್ಟರು.
‘ಕ್ರೀಡೆಯಲ್ಲಿ ಸೋಲು ಗೆಲುವು ಸಾಮಾನ್ಯ. ಹೀಗಾಗಿ ಕ್ರೀಡಾಪಟುಗಳು ಸೋಲು ಮತ್ತು ಗೆಲುವು ಸಮನಾಗಿ ಸ್ವೀಕರಿಸಬೇಕು. ಕ್ರೀಡೆಯಲ್ಲಿ ಉತ್ತಮ ಪ್ರದರ್ಶನ ನೀಡಲು ಪ್ರಯತ್ನಿಸಬೇಕು. ಉತ್ತಮ ಪ್ರಯತ್ನ ಗೆಲುವಿನ ಹಾದಿಯಲ್ಲಿ ಕರೆದೊಯ್ಯುತ್ತದೆ. ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಉತ್ತಮ ಸಾಧನೆ ಮಾಡಿ ಜಿಲ್ಲೆಗೆ ಕೀರ್ತಿ ತನ್ನಿ’ ಎಂದು ಶಾಲೆಯ ಮುಖ್ಯ ಶಿಕ್ಷಕ ಪಿ.ಬಾಲಕೃಷ್ಣಪ್ಪ ಆಶಿಸಿದರು.
ಶಾಲೆಯ 6ನೇ ತರಗತಿ ವಿದ್ಯಾರ್ಥಿನಿ ಎಸ್.ಚಿನ್ಮಯಿ ಹಾಗೂ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಎಸ್.ಮೋಹಿತ್ ಕುಸ್ತಿ ಪಂದ್ಯದಲ್ಲಿ, ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಜಿ.ವಿ.ಶ್ಯಾಮು ಕರಾಟೆ ಸ್ಪರ್ಧೆಯಲ್ಲಿ ಹಾಗೂ 8ನೇ ತರಗತಿ ವಿದ್ಯಾರ್ಥಿ ಸುನಿಲ್ಕುಮಾರ್ ಜೂಡೋ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾರೆ. ಶಾಲೆ ಟ್ರಸ್ಟಿಗಳಾದ ಸುನಿತಾ, ಶಾಂತಮ್ಮ, ಶಿಕ್ಷಕರಾದ ಸಿ.ಮಂಜುನಾಥ್, ಜಿ.ವಿ.ಮಂಜುನಾಥ್ ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.