ADVERTISEMENT

ಎಸ್ಸೆಸ್ಸೆಲ್ಸಿ ಶೈಕ್ಷಣಿಕ ಜೀವನದ ಬುನಾದಿ

ವಿದ್ಯಾರ್ಥಿಗಳಿಗೆ ಜಿಲ್ಲಾ ಪರೀಕ್ಷಾ ನೋಡಲ್ ಅಧಿಕಾರಿ ನಾಗೇಂದ್ರಪ್ರಸಾದ್‌ ಕಿವಿಮಾತು

​ಪ್ರಜಾವಾಣಿ ವಾರ್ತೆ
Published 2 ಏಪ್ರಿಲ್ 2021, 11:58 IST
Last Updated 2 ಏಪ್ರಿಲ್ 2021, 11:58 IST
ಎಸ್ಸೆಸ್ಸೆಲ್ಸಿ ಜಿಲ್ಲಾ ಪರೀಕ್ಷಾ ನೋಡಲ್ ಅಧಿಕಾರಿ ಎ.ಎನ್.ನಾಗೇಂದ್ರಪ್ರಸಾದ್‌ ಕೋಲಾರ ತಾಲ್ಲೂಕಿನ ಅರಾಭಿಕೊತ್ತನೂರು ಸರ್ಕಾರಿ ಪ್ರೌಢ ಶಾಲೆ ವಿದ್ಯಾರ್ಥಿಗಳೊಂದಿಗೆ ಗುರುವಾರ ಸಂವಾದ ನಡೆಸಿದರು.
ಎಸ್ಸೆಸ್ಸೆಲ್ಸಿ ಜಿಲ್ಲಾ ಪರೀಕ್ಷಾ ನೋಡಲ್ ಅಧಿಕಾರಿ ಎ.ಎನ್.ನಾಗೇಂದ್ರಪ್ರಸಾದ್‌ ಕೋಲಾರ ತಾಲ್ಲೂಕಿನ ಅರಾಭಿಕೊತ್ತನೂರು ಸರ್ಕಾರಿ ಪ್ರೌಢ ಶಾಲೆ ವಿದ್ಯಾರ್ಥಿಗಳೊಂದಿಗೆ ಗುರುವಾರ ಸಂವಾದ ನಡೆಸಿದರು.   

ಕೋಲಾರ: ‘ಎಸ್ಸೆಸ್ಸೆಲ್ಸಿ ಮುಖ್ಯ ಪರೀಕ್ಷೆಗೆ ದಿನಗಣನೆ ಆರಂಭವಾಗಿದ್ದು, ಶ್ರದ್ಧೆ, ಏಕಾಗ್ರತೆ ಇಲ್ಲವಾದರೆ ಸಾಧನೆ ಅಸಾಧ್ಯ. ಮೊದಲ ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಸಾಧನೆ ಕಳಪೆಯಾಗಿದ್ದು, ಓದಿನತ್ತ ಹೆಚ್ಚು ಗಮನಹರಿಸಿ’ ಎಂದು ಎಸ್ಸೆಸ್ಸೆಲ್ಸಿ ಜಿಲ್ಲಾ ಪರೀಕ್ಷಾ ನೋಡಲ್ ಅಧಿಕಾರಿ ಎ.ಎನ್.ನಾಗೇಂದ್ರಪ್ರಸಾದ್‌ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ತಾಲ್ಲೂಕಿನ ಅರಾಭಿಕೊತ್ತನೂರು ಸರ್ಕಾರಿ ಪ್ರೌಢ ಶಾಲೆಯಲ್ಲಿ ಗುರುವಾರ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳೊಂದಿಗೆ ನಡೆದ ಸಂವಾದದಲ್ಲಿ ಮಾತನಾಡಿ, ‘ಎಸ್ಸೆಸ್ಸೆಲ್ಸಿಯು ವಿದ್ಯಾರ್ಥಿಗಳ ಶೈಕ್ಷಣಿಕ ಜೀವನದ ಬುನಾದಿ. ಕಲಿಕೆಯಲ್ಲಿ ಆಸಕ್ತಿ ವಹಿಸಿ. ಶ್ರದ್ಧೆಯಿಂದ ಓದಿದರೆ ಉತ್ತಮ ಜೀವನ ರೂಪಿಸಿಕೊಳ್ಳಬಹುದು’ ಎಂದರು.

‘ಎಸ್ಸೆಸ್ಸೆಲ್ಸಿ ಪರೀಕ್ಷೆ ಬಗ್ಗೆ ಭಯ ಬೇಡ. ಶ್ರದ್ಧೆಯಿಂದ ಓದಿನಲ್ಲಿ ತೊಡಗಿದರೆ ಆತ್ಮಸ್ಥೈರ್ಯ ಬರುತ್ತದೆ. ಕೋವಿಡ್‌ ಆತಂಕದ ನಡುವೆಯೂ ಹಿಂದಿನ ವರ್ಷ ಯಶಸ್ವಿಯಾಗಿ ಪರೀಕ್ಷೆ ನಡೆಸಿದ್ದೇವೆ. ಈ ಬಾರಿಯೂ ಯಾವುದೇ ಸಮಸ್ಯೆಯಾಗದಂತೆ ಪರೀಕ್ಷೆ ನಡೆಸುತ್ತೇವೆ’ ಎಂದು ಭರವಸೆ ನೀಡಿದರು.

ADVERTISEMENT

‘ಪ್ರತಿ ಪಠ್ಯ ವಿಷಯಕ್ಕೂ ಆದ್ಯತೆ ನೀಡಿ ಓದಿ. ಇಲಾಖೆ ಸಂಪನ್ಮೂಲ ವ್ಯಕ್ತಿಗಳ ನೆರವಿನಿಂದ ಮುಂದಿನ ವಾರ ನನ್ನನ್ನೊಮ್ಮೆ ಗಮನಿಸಿ ಮಾದರಿ ಪಶ್ನೋತ್ತರ ಕೋಠಿ ಓದಗಿಸುತ್ತದೆ. ಆರು ಸೆಟ್ ಮಾದರಿ ಪ್ರಶ್ನೆಪತ್ರಿಕೆಗಳು ಸಿಗಲಿದ್ದು, ಇದರ ಸದುಪಯೋಗ ಪಡೆಯಿರಿ’ ಎಂದು ಸಲಹೆ ನೀಡಿದರು.

‘ಈ ಬಾರಿ ಪ್ರಶ್ನೆಪತ್ರಿಕೆ ಸುಲಭವಾಗಿರುತ್ತದೆ. ಶೇ 10ರಷ್ಟು ಮಾತ್ರ ಕಠಿಣತೆ ಇರುತ್ತದೆ. ಉತ್ತಮ ಅಂಕ ಸಾಧನೆಗೆ ಇದು ಒಳ್ಳೆಯ ಅವಕಾಶ. ಆರೋಗ್ಯದ ಕಡೆ ಹೆಚ್ಚಿನ ಗಮನಹರಿಸಿ. ಆರೋಗ್ಯವಂತ ಶರೀರದಲ್ಲಿ ಆರೋಗ್ಯಕರ ಮನಸ್ಸಿರುತ್ತದೆ. ಶಾಲೆಯಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಿ ಮತ್ತು ಅಂತರ ಕಾಪಾಡಿಕೊಳ್ಳಿ’ ಎಂದರು.

ಆತ್ಮವಿಶ್ವಾಸ ಮುಖ್ಯ

‘ಪರೀಕ್ಷೆಯಲ್ಲಿ ಬರವಣಿಗೆ ಸುಂದರವಾಗಿರಲಿ. ಯಾವುದೇ ಕಾರ್ಯಕ್ಕೆ ಆತ್ಮವಿಶ್ವಾಸ ಮುಖ್ಯ. ನಕಾರಾತ್ಮಕ ಭಾವನೆ ಬಿಟ್ಟು ಸಕಾರಾತ್ಮಕ ಭಾವನೆ ರೂಢಿಸಿಕೊಳ್ಳಿ. ಉತ್ತೀರ್ಣನಾಗುತ್ತೇವೆ ಎಂಬ ಆತ್ಮವಿಶ್ವಾಸದಿಂದ ಅಭ್ಯಾಸ ಮಾಡಿ. ಶಿಕ್ಷಕರು ಮಕ್ಕಳ ಕಲಿಕೆ ದೃಢೀಕರಣಕ್ಕೆ ಗಮನ ನೀಡಿ’ ಎಂದು ಹೇಳಿದರು.

‘ಪಠ್ಯಪುಸ್ತಕ ಅಧ್ಯಯನದಿಂದ ಪರೀಕ್ಷೆಯಲ್ಲಿ ಎಲ್ಲಾ ಪ್ರಶ್ನೆಗಳಿಗೂ ಉತ್ತರಿಸಬಹುದು. ಕಠಿಣ ವಿಷಯಗಳಾದ ಇಂಗ್ಲೀಷ್, ಗಣಿತ ಹಾಗೂ ವಿಜ್ಞಾನಕ್ಕೆ ಹೆಚ್ಚಿನ ಒತ್ತು ಕೊಡಿ. ನಿರಂತರ ಅಭ್ಯಾಸದಿಂದ ಈ ವಿಷಯಗಳು ಸುಲಭವೆನಿಸುತ್ತವೆ. ಗಣಿತ ವಿಷಯಕ್ಕೆ ಅಭ್ಯಾಸ ಬಹಳ ಮುಖ್ಯ. ಸೂತ್ರಗಳನ್ನು ನೆನಪಿಸಿಕೊಂಡು ತಪ್ಪಿಲ್ಲದೆ ಬರೆಯುವುದನ್ನು ಅಭ್ಯಾಸ ಮಾಡಿ’ ಎಂದು ಸೂಚಿಸಿದರು.

ಶಾಲೆಯ ಮುಖ್ಯ ಶಿಕ್ಷಕ ಸಿ.ಎನ್.ಪ್ರದೀಪ್‌ಕುಮಾರ್‌, ಶಿಕ್ಷಕರಾದ ಸಚ್ಚಿದಾನಂದಮೂರ್ತಿ, ಭವಾನಿ, ಶ್ವೇತಾ, ಲೀಲಾ, ಸುಗುಣಾ, ಫರೀದಾ, ವೆಂಕಟರೆಡ್ಡಿ, ಶ್ರೀನಿವಾಸಲು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.