ಕೋಲಾರ: ಕೋವಿಡ್ ಮತ್ತು ಲಾಕ್ಡೌನ್ ಹಿನ್ನೆಲೆಯಲ್ಲಿ ವಲಸೆ ಕಾರ್ಮಿಕರು, ವಸತಿ ಶಾಲೆಗಳಲ್ಲಿ ಉಳಿದುಕೊಂಡಿದ್ದ ಮಕ್ಕಳು ತಮ್ಮ ಸ್ವಂತ ಊರುಗಳಿಗೆ ತೆರಳಿದ್ದರೆ ಅಲ್ಲಿಯೇ ಪರೀಕ್ಷೆ ಬರೆಯಲು ರಾಜ್ಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಅವಕಾಶ ಕಲ್ಪಿಸಿದೆ ಎಂದು ಜಿಲ್ಲಾ ಪರೀಕ್ಷಾ ನೋಡಲ್ ಅಧಿಕಾರಿ ಎ.ಎನ್.ನಾಗೇಂದ್ರಪ್ರಸಾದ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸ್ವಂತ ಊರುಗಳಿಗೆ ಹಿಂದಿರುಗಿರುವ ವಿದ್ಯಾರ್ಥಿಗಳು ಸಂಬಂಧಪಟ್ಟ ಶಾಲೆಗಳ ಮುಖ್ಯ ಶಿಕ್ಷಕರನ್ನು ಸಂಪರ್ಕಿಸಬೇಕು. ಜತೆಗೆ ತಾವು ಇರುವ ಜಾಗದಲ್ಲೇ ಹತ್ತಿರದ ಪರೀಕ್ಷಾ ಕೇಂದ್ರದಲ್ಲಿ ಹೆಸರು ನೋಂದಾಯಿಸಿದರೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗುತ್ತದೆ ಎಂದು ಹೇಳಿದ್ದಾರೆ.
ಇಂತಹ ಮಕ್ಕಳು ಪರೀಕ್ಷಾ ಕೇಂದ್ರ ಆಯ್ಕೆ ಮಾಡಿಕೊಂಡಲ್ಲಿ ಅವರಿಗೆ ಆಸನ ವ್ಯವಸ್ಥೆ, ಪ್ರಶ್ನೆಪತ್ರಿಕೆ ಒದಗಿಸಲು ರಾಜ್ಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ತಂತ್ರಾಂಶದಲ್ಲಿ ಮಾಹಿತಿ ಒದಗಿಸಬೇಕಿದೆ. ಹೀಗಾಗಿ ಸರ್ಕಾರಿ, ಮಾನ್ಯತೆ ಪಡೆದಿರುವ ಖಾಸಗಿ ಅನುದಾನಿತ ಮತ್ತು ಅನುದಾನರಹಿತ ಶಾಲೆಗಳ ಮುಖ್ಯ ಶಿಕ್ಷಕರು ಅವರ ಶಾಲೆಗಳಲ್ಲಿನ ವಲಸೆ ಕಾರ್ಮಿಕರ ಮಕ್ಕಳು, ವಸತಿ ಶಾಲೆ, ಹಾಸ್ಟೆಲ್ ವಿದ್ಯಾರ್ಥಿಗಳನ್ನು ದೂರವಾಣಿ ಮೂಲಕ ಸಂಪರ್ಕಿಸಬೇಕು ಎಂದು ಸೂಚಿಸಿದ್ದಾರೆ.
ಮುಖ್ಯ ಶಿಕ್ಷಕರು ವಿದ್ಯಾರ್ಥಿಗಳು ಮೂಲ ಪರೀಕ್ಷಾ ಕೇಂದ್ರದ ಬದಲಿಗೆ ಅವರು ಇರುವ ಜಿಲ್ಲೆ, ತಾಲ್ಲೂಕಿನ ಕೇಂದ್ರದಲ್ಲಿ ಪರೀಕ್ಷೆ ಬರೆಯಲು ಇಚ್ಛಿಸಿದ್ದಾರೆಯೇ ಎಂಬ ಮಾಹಿತಿ ಪಡೆದು ಶಾಲಾ ಲಾಗಿನ್ನಲ್ಲಿ ಆನ್ಲೈನ್ ಮೂಲಕ ಜೂನ್ 25ರೊಳಗೆ ದಾಖಲು ಮಾಡಬೇಕು ಎಂದು ಸೂಚನೆ ನೀಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.