ಕೋಲಾರ: ಎಸ್ಸೆಸ್ಸೆಲ್ಸಿ ರಾಜ್ಯ ಮಟ್ಟದ ಪೂರ್ವ ಸಿದ್ಧತಾ ಪರೀಕ್ಷೆ ಸೋಮವಾರ (ಫೆ.17) ಆರಂಭವಾಗಲಿದ್ದು, ಪಬ್ಲಿಕ್ ಪರೀಕ್ಷೆ ಮಾದರಿಯಲ್ಲೇ ಪರೀಕ್ಷೆ ನಡೆಸುವಂತೆ ಸೂಚಿಸಿರುವ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್.ನಾಗರಾಜಗೌಡ ಪರೀಕ್ಷಾ ಕೇಂದ್ರಗಳಿಗೆ ವೀಕ್ಷಕರನ್ನು ನೇಮಿಸಿದ್ದಾರೆ.
ತಾಲ್ಲೂಕಿನ 101 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಮಕ್ಕಳಿಗೆ ವಾರ್ಷಿಕ ಪಬ್ಲಿಕ್ ಪರೀಕ್ಷೆಯ ಭಯ ಹೋಗಲಾಡಿಸಲು ಪೂರ್ವಸಿದ್ಧತಾ ಪರೀಕ್ಷೆಯನ್ನು ಅದೇ ಮಾದರಿಯಲ್ಲಿ ನಡೆಸಲು ಬಿಇಒ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ.
ಪರೀಕ್ಷೆಯಲ್ಲಿ ಯಾವುದೇ ಗೊಂದಲವಾಗದಂತೆ ಇಲಾಖೆ ವತಿಯಿಂದ ಬಿಆರ್ಸಿ, ಬಿಆರ್ಪಿ, ಇಸಿಒ, ಸಿಆರ್ಪಿಗಳನ್ನು ತಲಾ 4 ಕೇಂದ್ರಕ್ಕೆ ಒಬ್ಬರಂತೆ ವೀಕ್ಷಕರಾಗಿ ನೇಮಿಸಲಾಗಿದೆ. ಸಮಯ ಪಾಲನೆ, ಪ್ರಶ್ನೆಪತ್ರಿಕೆ ಲಕೋಟೆ ತೆರೆಯಲು, ಉತ್ತರಪತ್ರಿಕೆ ಲಕೋಟೆ ಸಿದ್ಧಪಡಿಸುವ ಕ್ರಮ ಪಾಲಿಸಬೇಕು ಎಂದು ಬಿಇಒ ಇಲಾಖೆ ಸಿಬ್ಬಂದಿಗೆ ತಿಳಿಸಿದ್ದಾರೆ.
ಆಯಾ ಶಾಲಾ ಮುಖ್ಯ ಶಿಕ್ಷಕರು ಪರೀಕ್ಷೆಗೆ ಬರುವ ಮಕ್ಕಳಿಗೆ ಡೆಸ್ಕ್, ಕುಡಿಯುವ ನೀರು ಸೌಲಭ್ಯ ಒದಗಿಸಬೇಕು. ಕೊಠಡಿಗಳಲ್ಲಿ ಬೆಳಕಿನ ವ್ಯವಸ್ಥೆ ಇರಬೇಕು. ಮಕ್ಕಳಲ್ಲಿ ಪರೀಕ್ಷಾ ಭಯ ಹೋಗಲಾಡಿಸಬೇಕು ಎಂದು ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.