ADVERTISEMENT

ಕೋಲಾರ: ಜಿಲ್ಲೆಯಲ್ಲೇ ಮೊಕ್ಕಾಂ ಹೂಡಿ; ಎಂ.ಟಿ.ಬಿ.ನಾಗರಾಜ್‌ಗೆ ನಾರಾಯಣಸ್ವಾಮಿ ಮನವಿ

ಉಸ್ತುವಾರಿ ಸಚಿವರಿಗೆ ವಿಧಾನ ಪರಿಷತ್ ಸದಸ್ಯ ವೈಎಎನ್‌ ಮನವಿ

​ಪ್ರಜಾವಾಣಿ ವಾರ್ತೆ
Published 2 ಮೇ 2021, 16:23 IST
Last Updated 2 ಮೇ 2021, 16:23 IST

ಕೋಲಾರ: ಜಿಲ್ಲಾ ಉಸ್ತುವಾರಿ ಸಚಿವರಾಗಿ ನೇಮಕಗೊಂಡಿರುವ ಎಂ.ಟಿ.ಬಿ.ನಾಗರಾಜ್‌ ಅವರು ಕೋವಿಡ್ ಪರಿಸ್ಥಿತಿ ನಿರ್ವಹಣೆಯನ್ನು ಗಂಭೀರವಾಗಿ ಪರಿಗಣಿಸಿ ಜಿಲ್ಲೆಯಲ್ಲೇ ಮೊಕ್ಕಾಂ ಹೂಡಿ ಸೋಂಕು ತಡೆಗೆ ಪ್ರಾಮಾಣಿಕ ಪ್ರಯತ್ನ ಮಾಡಬೇಕೆಂದು ವಿಧಾನ ಪರಿಷತ್ ಸದಸ್ಯ ವೈ.ಎ.ನಾರಾಯಣಸ್ವಾಮಿ ಮನವಿ ಮಾಡಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪ ಅವರು ತಮ್ಮ ಮನವಿಗೆ ಸ್ಪಂದಿಸಿ ಎಂ.ಟಿ.ಬಿ.ನಾಗರಾಜ್‌ ಅವರನ್ನು ಜಿಲ್ಲೆಗೆ ಉಸ್ತುವಾರಿ ಸಚಿವರಾಗಿ ನೇಮಿಸಿದ್ದಾರೆ. ಸಚಿವ ನಾಗರಾಜ್‌ ಅವರು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಜೀವ ರಕ್ಷಣೆಗೆ ಅಗತ್ಯವಾದ ಮೂಲಸೌಕರ್ಯಗಳ ವೃದ್ಧಿಗೆ ಶಕ್ತಿಮೀರಿ ಪ್ರಯತ್ನಸಬೇಕು ಎಂದು ನಾರಾಯಣಸ್ವಾಮಿ ಪತ್ರಿಕಾ ಪ್ರಕಟಣೆಯಲ್ಲಿ ಕೋರಿದ್ದಾರೆ.

ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇದಿನೇ ಏರಿಕೆಯಾಗುತ್ತಿದೆ. ಮತ್ತೊಂದೆಡೆ ಸೋಂಕಿತರ ಸಾವಿನ ಪ್ರಮಾಣ ಹೆಚ್ಚಳವಾಗಿದೆ. ಆಸ್ಪತ್ರೆಗಳಲ್ಲಿ ಬೆಡ್, ವೈದ್ಯಕೀಯ ಆಮ್ಲಜನಕ, ವೆಂಟಿಲೇಟರ್ ಸಮಸ್ಯೆ ಕಾಡುತ್ತಿದೆ, ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಿಗೆ ಹೆಚ್ಚಿನ ಹೊಣೆಯಿದೆ ಎಂದು ತಿಳಿಸಿದ್ದಾರೆ.

ADVERTISEMENT

ಕೋವಿಡ್ ಅಟ್ಟಹಾಸಕ್ಕೆ ಜಿಲ್ಲೆಯ ಜನ ಬೆಚ್ಚಿಬಿದ್ದಿದ್ದಾರೆ. ಆಸ್ಪತ್ರೆಗಳಲ್ಲಿ ಬೆಡ್, ವೆಂಟಿಲೇಟರ್ ಸಿಗದೆ ಹಲವು ಸೋಂಕಿತರು ಮೃತಪಟ್ಟಿದ್ದಾರೆ. ಮತ್ತೆ ಕೆಲ ಪ್ರಕರಣಗಳಲ್ಲಿ ವೈದ್ಯಕೀಯ ಆಮ್ಲಜನಕದ ನಿರ್ವಹಣೆಯಲ್ಲಿನ ವೈಫಲ್ಯದಿಂದ ಸೋಂಕಿತರು ಅಸುನೀಗಿದ್ದಾರೆ. ಸಚಿವರು ಈ ಸಂಗತಿಯನ್ನು ಗಂಭೀರವಾಗಿ ಪರಿಗಣಿಸಿ ಕೋವಿಡ್‌ ಪರಿಸ್ಥಿತಿ ನಿರ್ವಹಣೆಯನ್ನು ಸರಿ ದಾರಿಗೆ ತರಬೇಕು ಎಂದು ಹೇಳಿದ್ದಾರೆ.

ವೇತನ ಹೆಚ್ಚಿಸಿ: ಆಸ್ಪತ್ರೆಗಳಲ್ಲಿ ವೈದ್ಯಕೀಯ ಸಿಬ್ಬಂದಿ ಕೊರತೆ ನೀಗಿಸಬೇಕು. ವೈದ್ಯರು, ಶುಶ್ರೂಷಕಿಯರು, ಪ್ಯಾರಾ ಮೆಡಿಕಲ್ ಸಿಬ್ಬಂದಿಯ ವೇತನ, ಭತ್ಯೆ ಹೆಚ್ಚಿಸುವ ಮೂಲಕ ಉತ್ಸಾಹ ತುಂಬಿ ಜನರ ಜೀವ ಉಳಿಸಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು. ಖಾಸಗಿ ಆಸ್ಪತ್ರೆಗಳು, ವೈದ್ಯಕೀಯ ಕಾಲೇಜು ಆಸ್ಪತ್ರೆಗಳನ್ನು ಪೂರ್ಣ ಪ್ರಮಾಣದಲ್ಲಿ ಕೊರೊನಾ ಸೋಂಕಿತರ ಚಿಕಿತ್ಸೆಗೆ ಬಳಸಿಕೊಳ್ಳಲು ಜಿಲ್ಲಾಧಿಕಾರಿ ಮೂಲಕ ಕ್ರಮ ವಹಿಸಬೇಕು ಎಂದು ಸಲಹೆ ನೀಡಿದ್ದಾರೆ.

ಎಸ್‌ಎನ್‌ಆರ್‌ ಜಿಲ್ಲಾ ಆಸ್ಪತ್ರೆಯಲ್ಲಿರುವ ವೆಂಟಿಲೇಟರ್‌ಗಳು ಸಮರ್ಪಕವಾಗಿ ಬಳಕೆ ಆಗುವಂತೆ ಮಾಡಬೇಕು. ಜತೆಗೆ ವೆಂಟಿಲೇಟರ್‌ಗಳ ಸಂಖ್ಯೆ ಹೆಚ್ಚಿಸಿ ಜನರ ಜೀವ ಉಳಿಸಲು ಪೂರಕ ವಾತಾವರಣ ಸೃಷ್ಟಿ ಮಾಡಬೇಕು. ಜಿಲ್ಲೆಗೆ ಅಗತ್ಯ ಪ್ರಮಾಣದಲ್ಲಿ ಕೋವಿಡ್ ಲಸಿಕೆ ಪೂರೈಕೆಯಾಗುವಂತೆ ಮಾಡಿ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ಸೌಲಭ್ಯ ಕಲ್ಪಿಸಬೇಕು ಎಂದು ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.