
ಬೇತಮಂಗಲ: ಹೋಬಳಿಯ ಕಮ್ಮಸಂದ್ರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಗಶೆಟ್ಟಿಹಳ್ಳಿ ಗ್ರಾಮದ ದಲಿತ ಕಾಲೊನಿಗೆ ಹೋಗುವ ದಾರಿಗೆ ಇದ್ದ ಸಮಸ್ಯೆಗಳನ್ನು ಪಂಚಾಯಿತಿ ಅಧಿಕಾರಿಗಳು ಭೇಟಿ ನೀಡಿ ಬಗೆಹರಿಸಿದ್ದಾರೆ.
ನಾಗಶೆಟ್ಟಿಹಳ್ಳಿಯ ಎಸ್ಸಿ ಕಾಲೊನಿ ಹಾಗೂ ಸುತ್ತಮುತ್ತಲಿನ ಮನೆಗಳಿಗೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಗೆ ಅಡ್ಡಲಾಗಿ ವ್ಯಕ್ತಿಯೊಬ್ಬರು ಕಳ್ಳಿ ಬೇಲಿ ಹಾಗೂ ಕಲ್ಲುಗಳನ್ನು ಹಾಕಿ ದಾರಿಗೆ ಅಡ್ಡಿ ಪಡಿಸಿದ್ದರು. ಇದರಿಂದ 15 ವರ್ಷಗಳಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿತ್ತು.
ಈ ಸಮಸ್ಯೆ ಬಗ್ಗೆ ಗ್ರಾಮ ಪಂಚಾಯಿತಿಗೆ ದಲಿತ ಮುಖಂಡರು ಮನವಿ ಸಲ್ಲಿಸಿದ್ದರು. ಇದಕ್ಕೆ ಸ್ಪಂದಿಸಿದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಸಂತ್ ಕುಮಾರ್ ಹಾಗೂ ಬಿಲ್ ಕಲೆಕ್ಟರ್ ಶಿವಪ್ಪ ಅವರು ಸ್ಥಳಕ್ಕೆ ಭೇಟಿ ನೀಡಿ ರಸ್ತೆಗೆ ಹಾಕಲಾಗಿದ್ದ ಬೇಲಿ ಹಾಗೂ ಕಲ್ಲುಗಳನ್ನು ಕಾನೂನುಬದ್ಧವಾಗಿ ತೆರವುಗೊಳಿಸಿದ್ದಾರೆ. ಸಾರ್ವಜನಿಕರ ಸಂಚಾರಕ್ಕೆ ಅನುಕೂಲ ಮಾಡಿಕೊಟ್ಟಿದ್ದಾರೆ. ಮುಂದಿನ ದಿನಗಳಲ್ಲಿ ಸರ್ವೆ ಮಾಡಿ ರಸ್ತೆ ಮಾಡಲಾಗುವುದು ಎಂದು ಹೇಳಿದರು.
ನಾಗಶೆಟ್ಟಹಳ್ಳಿ ಗ್ರಾಮಸ್ಥರು ಗ್ರಾಮದಲ್ಲಿ ಯಾವುದೇ ಸೌಲಭ್ಯಗಳಿಲ್ಲ. ಹಾಗಾಗಿ ಅಗತ್ಯವಿರುವ ವಿವಿಧ ಸೌಲಭ್ಯ ಕಲ್ಪಿಸುವಂತೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಸಂತ್ ಕುಮಾರ್ ಅವರಿಗೆ ಮನವಿ ಸಲ್ಲಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.