ಕೋಲಾರ: ‘ಸರ್ಕಾರಿ ಶಾಲೆಗಳಲ್ಲಿ ಸಂಪನ್ಮೂಲಹೆಚ್ಚಿಸಿದರೆ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕಲ್ಪಿಸಲು ಸಹಕಾರಿಯಾಗುತ್ತದೆ’ ಎಂದು ಕ್ಷೇತ್ರಶಿಕ್ಷಣಾಧಿಕಾರಿ ಕೆ.ಎಸ್.ನಾಗರಾಜ್ಗೌಡ ತಿಳಿಸಿದರು.
ತಾಲೂಕಿನ ಸೀಸಂದ್ರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಗುರುವಾರ ಶಿಕ್ಷಕರ ಗೆಳೆಯರ ಬಳಗದ ವತಿಯಿಂದ ನಡೆದ ಕಲಿಕಾ ಕಾರ್ಯಕ್ರಮದಲ್ಲಿ ಮಾತನಾಡಿ, ‘ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಎಲ್ಲರೂ ಸಹಕರಿಸಬೇಕು. ಸರ್ಕಾರ ನೀಡುವ ಸೌಲಭ್ಯಗಳ ಜತೆಗೆ ಸಂಘ ಸಂಸ್ಥೆಗಳ ಸ್ಪಂದನೆ ಸಿಕ್ಕರೆ ಮತ್ತಷ್ಟು ಪ್ರಗತಿ ಕಾಣಬಹುದು’ ಅಭಿಪ್ರಾಯಪಟ್ಟರು.
ಜಿಲ್ಲಾ ಶಿಕ್ಷಕರ ಗೆಳೆಯರ ಬಳಗದ ಅಧ್ಯಕ್ಷ ನಾರಾಯಣಸ್ವಾಮಿ ಮಾತನಾಡಿ, ‘ಈಗಾಗಲೇ ಜಿಲ್ಲೆಯಾದ್ಯಂತ ಎಲ್ಲ ಶಾಲೆಗಳಿಗೆ ಉಚಿತ ನೋಟ್ ಪುಸ್ತಕ ಜತೆಗೆ ಅನೇಕ ರೀತಿಯಲ್ಲಿ ವಿದ್ಯಾರ್ಥಿಗಳ ಸಹಾಯಕ್ಕೆ ನೆರವಿನ ಹಸ್ತ ನೀಡಿರುವ ಗೆಳೆಯರ ಬಳಗವು ಶಾಲೆಗಳ ವಿದ್ಯಾರ್ಥಿಗಳ ಸಮಗ್ರ ಅಭಿವೃದ್ಧಿಗೆ ಕಂಕಣಬದ್ಧರಾಗಿ ಶ್ರಮಿಸುತ್ತಿದೆ’ ಎಂದು ತಿಳಿಸಿದರು.
ಜಿಲ್ಲಾ ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕರ ಸಂಘದ ಅಧ್ಯಕ್ಷ ಜಿ.ಶ್ರೀನಿವಾಸ್ ಮಾತನಾಡಿ, ‘ಸರ್ಕಾರಿ ಶಾಲೆಗಳ ಮತ್ತಷ್ಟು ಅಭಿವೃದ್ದಿಗೆ ಶಾಲಾಭಿವೃದ್ಧಿ ಸಮಿತಿ, ಗ್ರಾಮ ಪಂಚಾಯಿತಿ, ಸಂಘ-ಸಂಸ್ಥೆಗಳು ಸರ್ಕಾರಿ ಶಾಲೆಗಳನ್ನು ದತ್ತು ಪಡೆದುಕೊಳ್ಳಬೇಕು. ಪ್ರತಿಭಾ ವಿದ್ಯಾರ್ಥಿಯ ವಿದ್ಯಾಭ್ಯಾಸಕ್ಕೆ ಪೂರಕವಾದ ವಾತಾವರಣ ನಿರ್ಮಿಸಲು ಶಿಕ್ಷಕರು ಪೋಷಕರೊಂದಿಗೆ ಸಮಾಲೋಚನೆ ನಡೆಸಿ ಅಭಿವೃದ್ಧಿಗೆ ತೊಡಗಿಸಿಕೊಳ್ಳಬೇಕು’ ಎಂದು ಹೇಳಿದರು.
ಗೆಳೆಯರ ಬಳಗದ ಕಾರ್ಯದರ್ಶಿ ಆರ್.ವೀರಣ್ಣಗೌಡ, ನಿರ್ದೇಶಕ ಚಂದ್ರಪ್ಪ, ಶಿಕ್ಷಣ ಸಂಯೋಜಕ ಶ್ರೀನಿವಾಸನ್, ಮುಖ್ಯೋಪಾಧ್ಯಾಯಿನಿ ನೇತ್ರಾವತಿ, ಶಿಕ್ಷಕರಾದ ಬಿ.ವಿ.ಸುನಂದಾ, ಪದ್ಮಮ್ಮ ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.