ADVERTISEMENT

ಡ್ರಗ್ಸ್ ಸೇವನೆಯಿಂದ ಜೀವನ ಹಾಳು: ಸಬ್‌ ಇನ್‌ಸ್ಪೆಕ್ಟರ್‌ ಕೃಷ್ಣಮೂರ್ತಿ

​ಪ್ರಜಾವಾಣಿ ವಾರ್ತೆ
Published 26 ಜೂನ್ 2025, 14:35 IST
Last Updated 26 ಜೂನ್ 2025, 14:35 IST
ಕೆಜಿಎಫ್‌ನ ಊರಿಗಾಂನಲ್ಲಿ ಗುರುವಾರ ನಡೆದ ಮಾದಕ ವಸ್ತುಗಳ ಸೇವನೆ ಮತ್ತು ಸಾಗಾಣಿಕೆ ವಿರುದ್ಧದ ಅರಿವು ಜಾಥಾದಲ್ಲಿ ಪೊಲೀಸರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು
ಕೆಜಿಎಫ್‌ನ ಊರಿಗಾಂನಲ್ಲಿ ಗುರುವಾರ ನಡೆದ ಮಾದಕ ವಸ್ತುಗಳ ಸೇವನೆ ಮತ್ತು ಸಾಗಾಣಿಕೆ ವಿರುದ್ಧದ ಅರಿವು ಜಾಥಾದಲ್ಲಿ ಪೊಲೀಸರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು   

ಕೆಜಿಎಫ್‌: ಮಾದಕ ವಸ್ತುಗಳ ಸೇವನೆಯಿಂದ ಸಮಾಜದಲ್ಲಿ ಗೌರವ ಕಳೆದುಕೊಳ್ಳುವುದಲ್ಲದೆ, ಜೀವನವೂ ಹಾಳಾಗಲಿದೆ. ಆದ್ದರಿಂದ ವಿದ್ಯಾರ್ಥಿಗಳು ಮಾದಕ ವಸ್ತುಗಳ ಸೇವನೆಯಿಂದ ದೂರ ಇರಬೇಕು ಎಂದು ಊರಿಗಾಂ ಪೊಲೀಸ್‌ ಠಾಣೆ ಸಬ್‌ ಇನ್‌ಸ್ಪೆಕ್ಟರ್‌ ಕೃಷ್ಣಮೂರ್ತಿ ಹೇಳಿದರು.

ಊರಿಗಾಂನಲ್ಲಿ ಗುರುವಾರ ನಡೆದ ಅಂತರರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ಮತ್ತು ಸಾಗಾಣಿಕೆ ವಿರುದ್ಧ ನಡೆದ ವಿದ್ಯಾರ್ಥಿಗಳ ಅರಿವು ಜಾಥಾದಲ್ಲಿ ಪಾಲ್ಗೊಂಡು ಮಾತನಾಡಿದರು. 

ಮಾದಕ ವಸ್ತುಗಳ ವ್ಯಾಮೋಹದಿಂದ ವಿದ್ಯಾರ್ಥಿಗಳು ಶಿಕ್ಷಣದಲ್ಲಿ ನಿರ್ದಿಷ್ಟ ಗುರಿ ಸಾಧಿಸವುದು ಕಠಿಣವಾಗುತ್ತಿದೆ. ಮನಸ್ಸಿನ ಮೇಲೆ ನಿಗ್ರಹ ಇರುವುದಿಲ್ಲ. ಚಟಕ್ಕೆ ಬಿದ್ದವರು ಮಾದಕ ವಸ್ತುಗಳನ್ನು ಖರೀದಿ ಮಾಡಬೇಕೆಂಬ ಉಮೇದಿನಲ್ಲಿ ಕಾನೂನು ಬಾಹಿರ ಚಟುವಟಿಕೆಗಳಲ್ಲೂ ಭಾಗಿಯಾಗುವ ಅಪಾಯವಿರುತ್ತದೆ. ಇಂತಹ ವಸ್ತುಗಳ ವಿರುದ್ಧ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಬೇಕು. ಕುತೂಹಲಕ್ಕಾಗಿಯೂ ಇಂಥ ವಸ್ತುಗಳನ್ನು ವಿದ್ಯಾರ್ಥಿಗಳು ಸೇವಿಸಬಾರದು ಎಂದರು. 

ADVERTISEMENT

ಪೊಲೀಸ್‌ ಇಲಾಖೆ ಮಾದಕ ವಸ್ತುಗಳ ಸೇವನೆ ಮತ್ತು ಸಾಗಾಣಿಕೆ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳುತ್ತದೆ. ಇಂತಹ ಕೃತ್ಯಗಳಲ್ಲಿ ತೊಡಗಿರುವವರ ಬಗ್ಗೆ ತಿಳಿದವರು ಪೊಲೀಸ್ ಇಲಾಖೆಗೆ ಮಾಹಿತಿ ನೀಡಬೇಕು. ವಿದ್ಯಾರ್ಥಿಗಳು ಸಮುದಾಯದಲ್ಲಿ ಮಾದಕ ವಸ್ತುಗಳ ದುಷ್ಪರಿಣಾಮಗಳನ್ನು ಕುರಿತು ಅರಿವು ಮೂಡಿಸಬೇಕು ಎಂದು ಸಹಾಯಕ ಸಬ್‌ ಇನ್‌ಸ್ಪೆಕ್ಟರ್‌ ಕೋನಪ್ಪರೆಡ್ಡಿ ಮನವಿ ಮಾಡಿದರು.

ಊರಿಗಾಂ ಸರ್ಕಲ್‌ ಇನ್‌ಸ್ಪೆಕ್ಟರ್‌ ಮಾರ್ಕೊಂಡಯ್ಯ ಜಾಥಾ ಉದ್ಘಾಟಿಸಿದರು. ಸುವರ್ಣ ಇನ್‌ಸ್ಟಿಟ್ಯೂಟ್‌ ಪ್ರಾಂಶುಪಾಲ ಜಾಕಬ್‌, ಸಿಬ್ಬಂದಿ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.