ADVERTISEMENT

ಹಸು ಖರೀದಿಗೆ ಸಬ್ಸಿಡಿ: ಸಿ.ಎಂ ಜತೆ ಚರ್ಚೆ

​ಪ್ರಜಾವಾಣಿ ವಾರ್ತೆ
Published 14 ಫೆಬ್ರುವರಿ 2020, 15:20 IST
Last Updated 14 ಫೆಬ್ರುವರಿ 2020, 15:20 IST

ಕೋಲಾರ: ‘ಜಿಲ್ಲೆಯಲ್ಲಿ ಹಾಲು ಉತ್ಪಾದನೆ ಕುಸಿತ ತಡೆಗೆ ಆಂಧ್ರಪ್ರದೇಶ ಮತ್ತು ಮಹಾರಾಷ್ಟ್ರ ಮಾದರಿಯಲ್ಲಿ ಹಸುಗಳ ಖರೀದಿಗೆ ಯೋಜನೆ ಜಾರಿಗೊಳಿಸುವ ಬಗ್ಗೆ ಮುಖ್ಯಮಂತ್ರಿ ಜತೆ ಚರ್ಚಿಸಲಾಗುವುದು’ ಎಂದು ಸಂಸದ ಎಸ್.ಮುನಿಸ್ವಾಮಿ ತಿಳಿಸಿದರು.

ಇಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಆಂಧ್ರಪ್ರದೇಶ ಮತ್ತು ಮಹಾರಾಷ್ಟ್ರದಲ್ಲಿ ಸರ್ಕಾರ ಸಬ್ಸಿಡಿ ನೀಡುತ್ತಿರುವುದರಿಂದ ಅಲ್ಲಿನ ರೈತರು ಜಿಲ್ಲೆಯ ಹಸುಗಳನ್ನು ಖರೀದಿಸಿಕೊಂಡು ಹೋಗುತ್ತಿದ್ದಾರೆ. ಇದರಿಂದ ಅವಿಭಜಿತ ಕೋಲಾರ ಜಿಲ್ಲೆಯಲ್ಲಿ ಹಾಲು ಉತ್ಪಾದನೆ ಗಣನೀಯವಾಗಿ ಕುಸಿದಿದೆ’ ಎಂದರು.

‘ಕೋಚಿಮುಲ್‌ನ ಅಕ್ರಮಗಳ ಬಗ್ಗೆ ಸಾಕಷ್ಟು ಬಾರಿ ಮಾತನಾಡಿದ್ದೇನೆ. ಹೈನುಗಾರಿಕೆಯು ಜಿಲ್ಲೆಯ ಜೀವನಾಡಿ. ಹಾಲು ಉತ್ಪಾದನೆ ಕುಸಿದಿರುವ ಸಂಗತಿಯನ್ನು ಗಂಭೀರವಾಗಿ ಪರಿಗಣಿಸಿದ್ದು, ಸದ್ಯದಲ್ಲೇ ಕೋಚಿಮುಲ್‌ಗೆ ಭೇಟಿ ಕೊಟ್ಟು ಹಾಲು ಉತ್ಪಾದನೆ ಹೆಚ್ಚಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಒಕ್ಕೂಟದ ನಿರ್ದೇಶಕರು ಹಾಗೂ ಅಧ್ಯಕ್ಷರೊಂದಿಗೆ ಚರ್ಚಿಸುತ್ತೇನೆ’ ಎಂದು ಹೇಳಿದರು.

ADVERTISEMENT

‘ನಾನು ಕೋಚಿಮುಲ್‌ನ ನೂನ್ಯತೆಗಳ ಬಗ್ಗೆ ಮಾತನಾಡಿದರೆ ಒಕ್ಕೂಟದ ಅಧ್ಯಕ್ಷ ನಂಜೇಗೌಡ ಅವರು ಸಂಸದರು ನಿರ್ದೇಶಕರ ವಿರುದ್ಧ ಸುಳ್ಳು ಆರೋಪ ಮಾಡುತ್ತಿದ್ದಾರೆಂದು ತಪ್ಪು ಮಾಹಿತಿ ನೀಡುತ್ತಾರೆ. ಹಾಲು ಉತ್ಪಾದನೆ ಕುಸಿತ ತಡೆಗೆ ನಂಜೇಗೌಡರು ಏನು ಕ್ರಮ ಕೈಗೊಂಡಿದ್ದಾರೆ?’ ಎಂದು ಪ್ರಶ್ನಿಸಿದರು.

‘ಪಶು ಆಹಾರ ದರ ಹೆಚ್ಚಳವಾಗಿರುವ ಬಗ್ಗೆ ಮಾಹಿತಿಯಿಲ್ಲ. ಈ ಸಂಬಂಧ ಕೆಎಂಎಫ್ ಅಧ್ಯಕ್ಷರೊಂದಿಗೆ ಮಾತನಾಡುತ್ತೇನೆ. ಖುದ್ದು ಕೋಚಿಮುಲ್‌ಗೆ ಭೇಟಿ ಕೊಟ್ಟು ಸಮಸ್ಯೆ ಪರಿಹಾರಕ್ಕೆ ಪ್ರಯತ್ನಿಸುತ್ತೇನೆ’ ಎಂದು ಭರವಸೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.