ADVERTISEMENT

ಸ್ವಚ್ಛ ನಗರ ನಿರ್ಮಾಣಕ್ಕೆ ಸಹಕರಿಸಿ

ಸಾರ್ವಜನಿಕರಿಗೆ ಜಿಲ್ಲಾಧಿಕಾರಿ ಸತ್ಯಭಾಮ ಕಿವಿಮಾತು

​ಪ್ರಜಾವಾಣಿ ವಾರ್ತೆ
Published 21 ಸೆಪ್ಟೆಂಬರ್ 2020, 13:57 IST
Last Updated 21 ಸೆಪ್ಟೆಂಬರ್ 2020, 13:57 IST
ಜಿಲ್ಲಾಧಿಕಾರಿ ಸಿ.ಸತ್ಯಭಾಮ ಕೋಲಾರದ ಭೈರೇಗೌಡ ನಗರದಲ್ಲಿ ಸೋಮವಾರ ಕಸ ವಿಂಗಡಣೆ ಮತ್ತು ವಿಲೇವಾರಿ ಪ್ರಕ್ರಿಯೆ ಪರಿಶೀಲಿಸಿದರು.
ಜಿಲ್ಲಾಧಿಕಾರಿ ಸಿ.ಸತ್ಯಭಾಮ ಕೋಲಾರದ ಭೈರೇಗೌಡ ನಗರದಲ್ಲಿ ಸೋಮವಾರ ಕಸ ವಿಂಗಡಣೆ ಮತ್ತು ವಿಲೇವಾರಿ ಪ್ರಕ್ರಿಯೆ ಪರಿಶೀಲಿಸಿದರು.   

ಕೋಲಾರ: ‘ಸ್ವಚ್ಛ ನಗರ ನಿರ್ಮಾಣಕ್ಕೆ ಸಾರ್ವಜನಿಕರ ಸಹಕಾರ ಅಗತ್ಯ. ನಗರವಾಸಿಗಳು ಮನೆಯಲ್ಲೇ ಒಣ ಮತ್ತು ಹಸಿ ಕಸ ವಿಂಗಡಿಸಿ ಪೌರ ಕಾರ್ಮಿಕರಿಗೆ ವಿಲೇವಾರಿ ಮಾಡಬೇಕು’ ಎಂದು ಜಿಲ್ಲಾಧಿಕಾರಿ ಸಿ.ಸತ್ಯಭಾಮ ಕಿವಿಮಾತು ಹೇಳಿದರು.

ಇಲ್ಲಿನ ಭೈರೇಗೌಡ ನಗರದಲ್ಲಿ ಸೋಮವಾರ ಕಸ ವಿಂಗಡಣೆ ಪ್ರಕ್ರಿಯೆಗೆ ಚಾಲನೆ ನೀಡಿ ಮಾತನಾಡಿ, ‘ಸ್ವಚ್ಛತೆ ವಿಚಾರದಲ್ಲಿ ನಗರಸಭೆಯಷ್ಟೇ ಜನರಿಗೂ ಜವಾಬ್ದಾರಿ ಇರಬೇಕು. ತ್ಯಾಜ್ಯ ಸಂಗ್ರಹಣೆ ಹಾಗೂ ವೈಜ್ಞಾನಿಕ ವಿಲೇವಾರಿಗೆ ನಗರವಾಸಿಗಳು ನಗರಸಭೆಗೆ ಸಹಕಾರ ನೀಡಬೇಕು’ ಎಂದು ಮನವಿ ಮಾಡಿದರು.

‘ಮನೆಯಲ್ಲೇ ಹಸಿ ಮತ್ತು ಒಣ ವಿಂಗಡಿಸಿ ಕೊಡದ ನಗರವಾಸಿಗಳಿಗೆ ಪೌರ ಕಾರ್ಮಿಕರು ಮೊದಲ ಬಾರಿ ಎಚ್ಚರಿಕೆ ನೀಡಬೇಕು. ಆ ನಂತರವೂ ಕಸ ಬೇರ್ಪಡಿಸಿ ಕೊಡದಿದ್ದರೆ ಅವರ ಮನೆ ಮುಂದೆಯೇ ಕಸ ಸುರಿಯಿರಿ. ಆಗಲೂ ಸರಿ ದಾರಿಗೆ ಬರದಿದ್ದರೆ ನಗರಸಭೆ ಅಧಿಕಾರಿಗಳು ಶಿಸ್ತುಕ್ರಮ ಜರುಗಿಸಬೇಕು’ ಎಂದು ಸೂಚಿಸಿದರು.

ADVERTISEMENT

‘ಕಸ ವಿಲೇವಾರಿ ವಿಚಾರದಲ್ಲಿ ಜನರಿಗೆ ಅರಿವಿನ ಕೊರತೆಯಿದೆ. ಆದ ಕಾರಣ ಅಧಿಕಾರಿಗಳು ಸ್ವಚ್ಛತೆ ಕಾಪಾಡುವ ಬಗ್ಗೆ ಜನರಿಗೆ ಜಾಗೃತಿ ಮೂಡಿಸಬೇಕು. ಕರಪತ್ರ, ಜಾಹೀರಾತು ಫಲಕಗಳ ಮೂಲಕ ಜನರಿಗೆ ಸ್ವಚ್ಛತೆಯ ಸಂದೇಶ ರವಾನಿಸಬೇಕು. ಕಸ ವಿಂಗಡಿಸಿ ಸಮರ್ಪಕವಾಗಿ ವಿಲೇವಾರಿ ಮಾಡದಿದ್ದರೆ ಇಡೀ ಭೂ ಮಂಡಲ ಕಲುಷಿತಗೊಳ್ಳುತ್ತದೆ’ ಎಂದು ಆತಂಕ ವ್ಯಕ್ತಪಡಿಸಿದರು.

ಸಮಸ್ಯೆಗೆ ಸ್ಪಂದನೆ: ‘ನಗರಸಭೆ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುವ ಪೌರ ಕಾರ್ಮಿಕರ ಸಮಸ್ಯೆಗೆ ಸ್ಪಂದಿಸಿದ್ದೇವೆ. ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ವಿಳಂಬ ಮಾಡಿಲ್ಲ. ಪೌರ ಕಾರ್ಮಿಕರು ಕಡ್ಡಾಯವಾಗಿ ಸುರಕ್ಷತಾ ಸಲಕರಣೆ ಬಳಸಬೇಕು. ಆರೋಗ್ಯದ ಕಡೆ ಹೆಚ್ಚು ಗಮನ ಹರಿಸಬೇಕು’ ಎಂದು ಸಲಹೆ ನೀಡಿದರು.

‘ನಗರಸಭೆ ವ್ಯಾಪ್ತಿಯಲ್ಲಿ ರಸ್ತೆ, ಕುಡಿಯುವ ನೀರು ಸೇರಿದಂತೆ ಮೂಲಸೌಕರ್ಯ ಅಭಿವೃದ್ಧಿಗೆ ಶ್ರಮಿಸುತ್ತಿದ್ದೇವೆ. ನಗರವಾಸಿಗಳು ಕಡ್ಡಾಯವಾಗಿ ತೆರಿಗೆ ಪಾವತಿಸುವ ಮೂಲಕ ನಗರಸಭೆಯ ಆದಾಯ ಹೆಚ್ಚಿಸಿ ಮೂಲಸೌಕರ್ಯ ಪಡೆಯಬೇಕು’ ಎಂದು ತಿಳಿಸಿದರು.

‘ಲಾಕ್‌ಡೌನ್ ಕಾರಣಕ್ಕೆ ಕೋಲಾರದ ರಸ್ತೆ ಕಾಮಗಾರಿಗೆ ಮಂಜೂರಾತಿ ಸಿಗುವುದು ತಡವಾಯಿತು. ರಸ್ತೆ ಕಾಮಗಾರಿ ನನೆಗುದಿಗೆ ಬಿದ್ದಿದ್ದ ಸಂಬಂಧ ಲೋಕೋಪಯೋಗಿ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಮನವಿ ಮಾಡಿ ಕಾಮಗಾರಿಗೆ ಚಾಲನೆ ನೀಡಲಾಗಿದೆ’ ಎಂದು ವಿವರಿಸಿದರು.

‘ಭೈರೇಗೌಡ ನಗರದಲ್ಲಿ 2 ತಿಂಗಳಿಂದ ನೀರಿನ ಸಮಸ್ಯೆಯಿದ್ದು, ನಗರಸಭೆ ಅಧಿಕಾರಿಗಳು ಸಮಸ್ಯೆ ಪರಿಹರಿಸದೆ ಸಬೂಬು ಹೇಳುತ್ತಾ ಸತಾಯಿಸುತ್ತಿದ್ದಾರೆ. ನೀರು ಲಭ್ಯವಿರುವ ಕೊಳವೆ ಬಾವಿಗೆ ಶೀಘ್ರವೇ ಪಂಪ್‌ ಮತ್ತು ಮೋಟರ್‌ ಅಳವಡಿಸಿ ಸಮಸ್ಯೆ ಬಗೆಹರಿಸಬೇಕು’ ಎಂದು ಸೂಚಿಸಿದರು.

ನಗರಸಭೆ ಆಯುಕ್ತ ಶ್ರೀಕಾಂತ್‌ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.