ಕೋಲಾರ: ‘ಸ್ತ್ರೀಶಕ್ತಿ ಸ್ವಸಹಾಯ ಗುಂಪುಗಳ ಮಹಿಳೆಯರು ಸರ್ಕಾರದ ಸವಲತ್ತುಗಳನ್ನು ಸದ್ಬಳಕೆ ಮಾಡಿಕೊಂಡು ಸ್ವಾವಲಂಬಿಗಳಾಗಬೇಕು’ ಎಂದು ತಾಲ್ಲೂಕಿನ ಹೊನ್ನೇನಹಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಾಮಕೃಷ್ಣಪ್ಪ ಸಲಹೆ ನೀಡಿದರು.
ಘನ ತ್ಯಾಜ್ಯ ನಿರ್ವಹಣೆ ಹಾಗೂ ಮಳೆ ನೀರು ಕೊಯ್ಲು ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಇಲಾಖೆ, ಗ್ರಾಮೀಣ ಇಂಧನ ಮತ್ತು ಅಭಿವೃದ್ಧಿ ಸಂಸ್ಥೆ, ತೇಜಸ್ವಿನಿ ಗ್ರಾಮೀಣಾಭಿವೃದ್ಧಿ ಸಂಸ್ಥೆ ಸಹಯೋಗದಲ್ಲಿ ತಾಲ್ಲೂಕಿನ ಕಳ್ಳಿಪುರ ಗ್ರಾಮದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದರು.
‘ಮಹಿಳೆಯರು ಘನ ತ್ಯಾಜ್ಯ ವಿಲೇವಾರಿ ಚಟುವಟಿಕೆಗಳಿಗೆ ಸಹಕರಿಸಬೇಕು. ಹೆಣ್ಣು ಮಕ್ಕಳು ಉಪ್ಪಿನಕಾಯಿ, ಹಪ್ಪಳ, ಸಂಡಿಗೆ, ಬ್ಯಾಗ್ ತಯಾರಿಕೆ, ಹೊಲಿಗೆ ವೃತ್ತಿಯಲ್ಲಿ ತೊಡಗಿಸಿಕೊಂಡು ಜೀವನ ರೂಪಿಸಿಕೊಳ್ಳಬೇಕು. ಎಲ್ಲಾ ಮನೆಗಳಲ್ಲೂ ಕಡ್ಡಾಯವಾಗಿ ಮಳೆ ನೀರು ಕೊಯ್ಲು ಘಟಕ ನಿರ್ಮಿಸಬೇಕು. ಜತೆಗೆ ಸೌರ ವಿದ್ಯುತ್ ದೀಪ ಬಳಕೆ ಮಾಡಬೇಕು’ ಎಂದು ಕಿವಿಮಾತು ಹೇಳಿದರು.
‘ಮನೆಯ ಕಸವನ್ನು ಒಣ ಮತ್ತು ಹಸಿ ಕಸವಾಗಿ ವಿಂಗಡಿಸಿ ವಿಲೇವಾರಿ ಮಾಡಬೇಕು. ಮನೆ ಮತ್ತು ಸುತ್ತಮುತ್ತಲ ಪ್ರದೇಶದಲ್ಲಿ ಸ್ವಚ್ಛತೆ ಕಾಪಾಡಬೇಕು. ನೀರನ್ನು ಹಿತ ಮಿತವಾಗಿ ಬಳಸಬೇಕು. ಸಾಧ್ಯವಾದಷ್ಟು ಪ್ಲಾಸ್ಟಿಕ್ ಕವರ್ ಬಳಕೆ ಕಡಿಮೆ ಮಾಡಬೇಕು’ ಎಂದು ತಿಳಿಸಿದರು.
‘ಮನೆಗಳಲ್ಲೇ ಕಸ ವಿಂಗಡಿಸಿ ವಿಲೇವಾರಿ ಮಾಡಿದರೆ ಹಳ್ಳಿಗಳು ಸ್ವಚ್ಛವಾಗಿರುತ್ತವೆ. ಮನಬಂದಂತೆ ಎಲ್ಲೆಂದರಲ್ಲಿ ಪ್ಲಾಸ್ಟಿಕ್ ಎಸೆಯಬಾರದು. ಪ್ಲಾಸ್ಟಿಕ್ ನೂರು ವರ್ಷವಾದರೂ ಕರಗುವುದಿಲ್ಲ. ಪ್ಲಾಸ್ಟಿಕ್ ಸುಡುವುದರಿಂದ ವಾಯು ಮಾಲಿನ್ಯವಾಗುತ್ತದೆ. ಅಂಗಡಿಗೆ ಹೋಗುವಾಗ ತಪ್ಪದೇ ಬಟ್ಟೆಯ ಬ್ಯಾಗ್ ತೆಗೆದುಕೊಂಡು ಹೋಗಬೇಕು’ ಎಂದು ಸಂಪನ್ಮೂಲ ವ್ಯಕ್ತಿ ಪಿ.ಶಿಲ್ಪಾ ಹೇಳಿದರು.
ಕುಂಬಾರಹಳ್ಳಿ ಗ್ರಾ.ಪಂ ಮಾಜಿ ಸದಸ್ಯೆ ಸುಶೀಲಮ್ಮ, ತೇಜಸ್ವಿನಿ ಗ್ರಾಮೀಣಾಭಿವೃದ್ಧಿ ಸಂಸ್ಥೆ ಅಧ್ಯಕ್ಷೆ ಬಿ.ಕೆ.ರೇಣುಕಾ, ಸಂಪನ್ಮೂಲ ವ್ಯಕ್ತಿಗಳಾದ ಆಶಾ, ಎಂ.ನಾಗೇಂದ್ರಕುಮಾರ್, ಜನಪದ ಕಲಾವಿದ ಕೃಷ್ಣಮೂರ್ತಿ, ಹೊನ್ನೇನಹಳ್ಳಿ, ಬೆತ್ತನಿ, ಕಳ್ಳಿಪುರ, ನಡುಪಳ್ಳಿ ಗ್ರಾಮದ ಸ್ತ್ರೀಶಕ್ತಿ ಸ್ವಸಹಾಯ ಗುಂಪುಗಳ ಮಹಿಳೆಯರು ಪಾಲ್ಗೊಂಡರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.