ADVERTISEMENT

ಮಕ್ಕಳ ಸುರಕ್ಷತೆಗೆ ಕ್ರಮ ವಹಿಸಿ: ಕ್ಷೇತ್ರ ಶಿಕ್ಷಣಾಧಿಕಾರಿ ಎ.ಬಿ.ರಾಮಕೃಷ್ಣಪ್ಪ

​ಪ್ರಜಾವಾಣಿ ವಾರ್ತೆ
Published 19 ಆಗಸ್ಟ್ 2021, 14:12 IST
Last Updated 19 ಆಗಸ್ಟ್ 2021, 14:12 IST

ಕೋಲಾರ: ಶಾಲೆಗಳಲ್ಲಿ ಆ.23ರಿಂದ 9ನೇ ಮತ್ತು 10ನೇ ತರಗತಿ ಭೌತಿಕವಾಗಿ ಆರಂಭವಾಗಲಿದ್ದು, ಮಕ್ಕಳನ್ನು ಸ್ವಾಗತಿಸಲು ಶಾಲೆಗಳಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎ.ಬಿ.ರಾಮಕೃಷ್ಣಪ್ಪ ಅವರು ಮುಖ್ಯ ಶಿಕ್ಷಕರಿಗೆ ಸೂಚನೆ ನೀಡಿದ್ದಾರೆ.

ಈಗಾಗಲೇ 1ನೇ ತರಗತಿಯಿಂದ ಎಸ್ಸೆಸ್ಸೆಲ್ಸಿವರೆಗೆ ಆನ್‌ಲೈನ್‌ ತರಗತಿ ನಡೆಯುತ್ತಿವೆ. ಇದೀಗ ಸರ್ಕಾರದ ಮಾರ್ಗಸೂಚಿಯಡಿ ಆ.23ರಿಂದ 9 ಮತ್ತು 10ನೇ ತರಗತಿಗೆ ಭೌತಿಕ ತರಗತಿ ಆರಂಭಗೊಳ್ಳಲಿದೆ. ಶಾಲೆಗಳಲ್ಲಿ ಸ್ವಚ್ಛತೆ ಮತ್ತು ಮಕ್ಕಳ ಸುರಕ್ಷತೆಗೆ ಒತ್ತು ಕೊಡಬೇಕು ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಶಾಲಾ ಆರಂಭಕ್ಕೆ ಅಗತ್ಯ ಸಿದ್ಧತೆ ಮಾಡಲು ಶಿಕ್ಷಕರು, ಎಸ್‌ಡಿಎಂಸಿ ಸದಸ್ಯರು ಮತ್ತು ಪೋಷಕರ ಸಹಭಾಗಿತ್ವ ಅಗತ್ಯ. ಮಕ್ಕಳನ್ನು ಕೋವಿಡ್‌ನಿಂದ ರಕ್ಷಿಸಲು ಅಗತ್ಯ ಸುರಕ್ಷತಾ ಕ್ರಮ ಕೈಗೊಳ್ಳಬೇಕು. ಪೋಷಕರು ಶಾಲೆಗೆ ಭೇಟಿ ನೀಡಿ ಮಕ್ಕಳ ದಾಖಲಾತಿ ದೃಢಪಡಿಸಿಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

ADVERTISEMENT

ಕೋವಿಡ್ ಕಾರಣಕ್ಕೆ ಕಳೆದ ಶೈಕ್ಷಣಿಕ ವರ್ಷದಲ್ಲಿ ಮಕ್ಕಳನ್ನು ಪರೀಕ್ಷೆ ನಡೆಸದೆ ಉತ್ತೀರ್ಣಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ತಮ್ಮ ಮಕ್ಕಳು ಮುಂದಿನ ತರಗತಿಗೆ ದಾಖಲಾಗಿದ್ದಾರೆಯೇ ಎಂಬುದನ್ನು ಪೋಷಕರು ದೃಢಪಡಿಸಿಕೊಳ್ಳಬೇಕು ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.