ADVERTISEMENT

ಆಂಧ್ರಕ್ಕೆ ನೀರು ಹರಿಯದಂತೆ ಕ್ರಮ

​ಪ್ರಜಾವಾಣಿ ವಾರ್ತೆ
Published 30 ಅಕ್ಟೋಬರ್ 2020, 10:50 IST
Last Updated 30 ಅಕ್ಟೋಬರ್ 2020, 10:50 IST
ಶ್ರೀನಿವಾಸಪುರ ತಾಲ್ಲೂಕಿನ ಗಂಗಾಪುರ ಗ್ರಾಮ ಸಮೀಪದ ಅಡವಿ ನಾಯಕನ ಕೆರೆ ಕಾಲುವೆ ಬಳಿಗೆ ಗುರುವಾರ ತಾಲ್ಲೂಕು ಪಂಚಾಯಿತಿಯ ಕಾರ್ಯ ನಿರ್ವಹಣಾಧಿಕಾರಿ ಎಸ್‌. ಆನಂದ್‌ ಭೇಟಿ ನೀಡಿ ಪರಿಶೀಲಿಸಿದರು
ಶ್ರೀನಿವಾಸಪುರ ತಾಲ್ಲೂಕಿನ ಗಂಗಾಪುರ ಗ್ರಾಮ ಸಮೀಪದ ಅಡವಿ ನಾಯಕನ ಕೆರೆ ಕಾಲುವೆ ಬಳಿಗೆ ಗುರುವಾರ ತಾಲ್ಲೂಕು ಪಂಚಾಯಿತಿಯ ಕಾರ್ಯ ನಿರ್ವಹಣಾಧಿಕಾರಿ ಎಸ್‌. ಆನಂದ್‌ ಭೇಟಿ ನೀಡಿ ಪರಿಶೀಲಿಸಿದರು   

ಶ್ರೀನಿವಾಸಪುರ: ‘ತಾಲ್ಲೂಕಿನ ಗಂಗಾಪುರ ಸಮೀಪದ ಅಡವಿನಾಯಕನ ಕೆರೆ ಕಾಲುವೆಯನ್ನು ದುರಸ್ತಿಪಡಿಸಿ ಕಾಲುವೆ ಮೂಲಕ ನೆರೆಯ ಆಂಧ್ರಪ್ರದೇಶಕ್ಕೆ ಮಳೆ ನೀರು ಹರಿದು ಹೋಗುವುದನ್ನು ತಡೆಯಲಾಗುವುದು’ ಎಂದು ತಾಲ್ಲೂಕು ಪಂಚಾಯಿತಿಯ ಕಾರ್ಯ ನಿರ್ವಹಣಾಧಿಕಾರಿ ಎಸ್‌. ಆನಂದ್‌ ಹೇಳಿದರು.

ಅಡವಿನಾಯಕನ ಕೆರೆಗೆ ಗುರುವಾರ ಭೇಟಿ ನೀಡಿ ಕಾಲುವೆಗಳನ್ನು ಪರಿಶೀಲಿಸಿದ ಬಳಿಕ ಅವರು ಮಾತನಾಡಿದರು.

ಈ ಪುರಾತನ ಕಾಲುವೆಯಲ್ಲಿ ಸಾಕಷ್ಟು ಹೂಳು ತುಂಬಿದೆ. ಇದರಿಂದ ಕೆರೆಯಿಂದ ಹೊರಗೆ ಹೋಗುವ ಮಳೆ ನೀರು ತಾಲ್ಲೂಕಿನ ಕೆರೆಗಳನ್ನು ತಲುಪುತ್ತಿಲ್ಲ. ಆಂಧ್ರಪ್ರದೇಶದ ಕೆರೆಗಳ ಪಾಲಾಗುತ್ತಿದೆ. ಹಾಗಾಗಿ, ತಾಲ್ಲೂಕಿನ ಕೃಷಿಕರು ಸಂಕಷ್ಟ ಅನುಭವಿಸುವಂತಾಗಿದೆ ಎಂದು ಹೇಳಿದರು.

ADVERTISEMENT

ಕಾಲುವೆಯಲ್ಲಿನ ಹೂಳು ತೆಗೆದು 6 ಅಡಿ ಆಳ ಮಾಡಲಾಗುವುದು. ಇದರಿಂದ ಮಳೆಗಾಲದಲ್ಲಿ ತಾಲ್ಲೂಕಿನ 15ಕ್ಕೂ ಹೆಚ್ಚು ಕೆರೆಗಳಿಗೆ ಹೆಚ್ಚುವರಿ ನೀರು ಹರಿದುಹೋಗಲು ಸಹಕಾರಿಯಾಗಲಿದೆ. ಈ ಬಗ್ಗೆ ಸಂಬಂಧಪಟ್ಟ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಪ್ರಸ್ತಾವನೆ ಸಲ್ಲಿಸಲಾಗುವುದು. ಮಳೆ ನೀರನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲು ಕ್ರಮವಹಿಸಲಾಗುವುದು ಎಂದು ತಿಳಿಸಿದರು.

ಕರ್ನಾಟಕ– ಆಂಧ್ರಪ್ರದೇಶದ ಗಡಿಯಲ್ಲಿರುವ ತಾಲ್ಲೂಕಿನ ಕೆರೆಗಳು ಹಾಗೂ ಕಾಲುವೆಗಳಲ್ಲಿ ಹೂಳು ತುಂಬಿದೆ. ಇದರ ಪರಿಣಾಮ ಮಳೆ ನೀರು ವ್ಯರ್ಥವಾಗಿ ಹರಿದು ಹೋಗುತ್ತಿದೆ. ಇಲ್ಲಿನ ಗುಡ್ಡಗಾಡು ಪ್ರದೇಶದಲ್ಲಿ ಹೊಸ ಕೆರೆಗಳ ನಿರ್ಮಾಣಕ್ಕೆ ವಿಪುಲ ಅವಕಾಶಗಳಿವೆ. ಹೊಸ ಕೆರೆಗಳನ್ನು ನಿರ್ಮಿಸಿದರೆ ಮಳೆ ನೀರನ್ನು ನಮ್ಮಲ್ಲಿಯೇ ಉಳಿಸಿಕೊಳ್ಳಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ತ್ವರಿತವಾಗಿ ಕ್ರಮವಹಿಸಬೇಕು ಎಂದು ಗ್ರಾಮಸ್ಥರು ಮನವಿ ಮಾಡಿದರು.

ತಾಲ್ಲೂಕು ಪಂಚಾಯಿತಿಯ ಸಹಾಯಕ ನಿರ್ದೇಶಕ ರಾಮಪ್ಪ, ಪಿಡಿಒ ಸವಿತಾ, ನವೀನ್‌ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.