ADVERTISEMENT

‘ತಿದ್ದುಪಡಿ ಕಾಯ್ದೆ: ಎಪಿಎಂಸಿಗೆ ಮಾರಕ’

ರೈತ ವಿರೋಧಿ ಮಸೂದೆ ಹಿಂಪಡೆಯಲು ಶಾಸಕ ಕೆ.ವೈ ನಂಜೇಗೌಡ ಒತ್ತಾಯ

​ಪ್ರಜಾವಾಣಿ ವಾರ್ತೆ
Published 29 ಸೆಪ್ಟೆಂಬರ್ 2020, 7:22 IST
Last Updated 29 ಸೆಪ್ಟೆಂಬರ್ 2020, 7:22 IST
ಮಾಲೂರು ಪಟ್ಟಣದ ಮಾರಿಕಾಂಬ ವೃತ್ತದಲ್ಲಿ ಸೋಮವಾರ ರೈತ ವಿರೋಧಿ ಕಾಯ್ದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ವಿವಿಧ ಸಂಘಟನೆಗಳ ಒಕ್ಕೂಟ ಸರ್ಕಾರದ ವಿರುದ್ಧ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಪ್ರತಿಭಟನಾಕಾರರನ್ನು ಉದ್ದೇಶಿಸಿ ಶಾಸಕ ಕೆ.ವೈ.ನಂಜೇಗೌಡ ಮಾತನಾಡಿದರು
ಮಾಲೂರು ಪಟ್ಟಣದ ಮಾರಿಕಾಂಬ ವೃತ್ತದಲ್ಲಿ ಸೋಮವಾರ ರೈತ ವಿರೋಧಿ ಕಾಯ್ದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ವಿವಿಧ ಸಂಘಟನೆಗಳ ಒಕ್ಕೂಟ ಸರ್ಕಾರದ ವಿರುದ್ಧ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಪ್ರತಿಭಟನಾಕಾರರನ್ನು ಉದ್ದೇಶಿಸಿ ಶಾಸಕ ಕೆ.ವೈ.ನಂಜೇಗೌಡ ಮಾತನಾಡಿದರು   

ಮಾಲೂರು: ರೈತ ವಿರೋಧಿ ಕಾಯ್ದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ಸೋಮವಾರ ಹಮ್ಮಿಕೊಂಡಿದ್ದ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ನಾಗರಿಕರು ಅಂಗಡಿಗಳನ್ನು ಮುಚ್ಚುವ ಮೂಲಕ ಬಂದ್‌ಗೆ ಸಹಕರಿಸಿದರು.

ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರ ಕಾರ್ಪೋರೇಟ್ ಕಂಪನಿಗಳ ಪರವಾದ ಭೂ ಸುಧಾರಣಾ, ಎಪಿಎಂಸಿ, ವಿದ್ಯುತ್, ಕಾರ್ಮಿಕ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ಕರ್ನಾಟಕ ಬಂದ್‌ಗೆ ಪಟ್ಟಣದಲ್ಲಿ ರೈತ, ಕಾರ್ಮಿಕ, ಕನ್ನಡ ಪರ ಸಂಘಟನೆಗಳ ಒಕ್ಕೂಟ ಮಾಲೂರು ಬಂದ್‌ಗೆ ಕರೆ ಕೊಟ್ಟಿತ್ತು.

ಸೋಮವಾರ ಬೆಳಿಗ್ಗೆ ಪಟ್ಟಣದ ಮುಖ್ಯ ರಸ್ತೆಗಳಲ್ಲಿ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ಮೆರವಣಿಗೆ ನಡೆಸಿ ಸರ್ಕಾರದವಿರುದ್ಧ ಘೋಷಣೆ ಕೂಗಿದರು. ಮಾರಿಕಾಂಬ ವೃತ್ತದಲ್ಲಿ ಶಾಸಕರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಒಕ್ಕೂಟದ ಕಾರ್ಯಕರ್ತರಿಂದ ರಸ್ತೆ ತಡೆ ನಡೆಸಲಾಯಿತು.

ADVERTISEMENT

ಶಾಸಕ ಕೆ.ವೈ.ನಂಜೇಗೌಡ ಮಾತನಾಡಿ, ‘ರಾಜ್ಯದಲ್ಲಿ ಗಾಳಿಗೆ ಬಂದಿರುವ ಸರ್ಕಾರ ಆಡಳಿತ ನಡೆಸುತ್ತಿದೆ. ಈ ಸರ್ಕಾರ ಬಹಳ ದಿನ ಉಳಿಯುವುದಿಲ್ಲ. ರೈತರ, ಪರಿಶಿಷ್ಟರ, ಕಾರ್ಮಿಕರ ವಿರುದ್ಧವಾಗಿ ತೆಗೆದುಕೊಂಡಿರುವ ಕಾಯ್ದೆಗಳನ್ನು ಸರ್ಕಾರ ಹಿಂಪಡಿಯಬೇಕು. ವಿರೋಧ ಪಕ್ಷದ ನಾಯಕರು ಸದನದಲ್ಲಿ ರೈತರ ವಿರುದ್ಧ ಕಾಯ್ದೆಗಳನ್ನು ಜಾರಿಗೆ ತರಬೇಡಿ ಎಂದು ಆಡಳಿತ ಪಕ್ಷಕ್ಕೆ ಮನವರಿಕೆ ಮಾಡಿದರೂ ಪ್ರಯೋಜನವಾಗಿಲ್ಲ’ ಎಂದರು.

ತಾಲ್ಲೂಕಿನಲ್ಲಿದರಖಾಸ್ತು ಕಮಿಟಿ ಮುಂದೆ ರೈತರ 8,600 ಅರ್ಜಿ ಇದೆ. ಇದನ್ನು ಇತ್ಯರ್ಥ ಮಾಡಲು ಸಾಧ್ಯವಾಗುತ್ತಿಲ್ಲ. ರಾಜ್ಯದಲ್ಲಿ ಸುಮಾರು 130 ಎಪಿಎಂಸಿಗಳು ಇದ್ದು, ಎಪಿಎಂಸಿ ಕಾಯ್ದೆ ತಿದ್ದುಪಡಿಯಿಂದ ಮುಚ್ಚುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರು.

ಪ್ರತಿಭಟನಾಕಾರರು ಪಟ್ಟದ ತಾಲ್ಲೂಕು ಕಚೇರಿಗೆ ತೆರಳಿ ತಹಶೀಲ್ದಾರ್ ಮಂಜುನಾಥ್ ಅವರಿಗೆ ಮನವಿ ಸಲ್ಲಿಸಿದರು.

ಒಕ್ಕೂಟದ ಅಧ್ಯಕ್ಷ ಸಿ.ಲಕ್ಷ್ಮಿನಾರಾಯಣ್, ತಾಲ್ಲೂಕು ಕಾಂಗ್ರೆಸ್ ಸಮಿತಿ ಅಧ್ಯಕ್ಷ ಟಿ.ಮುನಿಯಪ್ಪ, ಮುರಳೀಧರ್, ಅಶ್ವಥರೆಡ್ಡಿ, ಪ್ರವೀಣ್, ಬೆಡ್ಡಶೆಟ್ಟಹಳ್ಳಿ ರಮೇಶ್, ಕರವೇ ತಾಲ್ಲೂಕು ಅಧ್ಯಕ್ಷ ಶ್ರೀನಿವಾಸ್, ಜಯ ಕರ್ನಾಟಕ ಸಂಘಟನೆಯ ದಿನೇಶ್, ಶಿವಾರ ನಾಣಿ, ತಿಪ್ಪಸಂದ್ರ ಶ್ರೀನಿವಾಸ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.