ADVERTISEMENT

ಹಿಪ್ಪುನೇರಳೆ ಬೇಸಾಯದಲ್ಲಿ ಕೋಲಾರ ಜಿಲ್ಲೆ ಪ್ರಥಮ

ತರಬೇತಿ ಕಾರ್ಯಕ್ರಮದಲ್ಲಿ ರೇಷ್ಮೆ ಕೃಷಿ ವಿಜ್ಞಾನಿ ಶಶಿಧರ್ ಮೆಚ್ಚುಗೆ

​ಪ್ರಜಾವಾಣಿ ವಾರ್ತೆ
Published 6 ನವೆಂಬರ್ 2020, 14:28 IST
Last Updated 6 ನವೆಂಬರ್ 2020, 14:28 IST
ಕೋಲಾರ ತಾಲ್ಲೂಕಿನ ನಾಯಕರಹಳ್ಳಿಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ರೈತರಿಂದ ರೈತರಿಗೆ ಹೊರಾಂಗಣ ತರಬೇತಿ ಕಾರ್ಯಕ್ರಮದಲ್ಲಿ ಹಿಪ್ಪುನೇರಳೆ ಬೆಳೆಗೆ ಗೊಬ್ಬರ ಬಳಸುವ ಬಗ್ಗೆ ಪ್ರಾತ್ಯಕ್ಷಿಕೆ ಮೂಲಕ ಮಾಹಿತಿ ನೀಡಲಾಯಿತು.
ಕೋಲಾರ ತಾಲ್ಲೂಕಿನ ನಾಯಕರಹಳ್ಳಿಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ರೈತರಿಂದ ರೈತರಿಗೆ ಹೊರಾಂಗಣ ತರಬೇತಿ ಕಾರ್ಯಕ್ರಮದಲ್ಲಿ ಹಿಪ್ಪುನೇರಳೆ ಬೆಳೆಗೆ ಗೊಬ್ಬರ ಬಳಸುವ ಬಗ್ಗೆ ಪ್ರಾತ್ಯಕ್ಷಿಕೆ ಮೂಲಕ ಮಾಹಿತಿ ನೀಡಲಾಯಿತು.   

ಕೋಲಾರ: ‘ಹಿಪ್ಪುನೇರಳೆ ಸೊಪ್ಪಿನ ಉತ್ಪಾದನೆ ಹೆಚ್ಚಿಸಲು ಡೀಕಂಪೋಸರ್ ದ್ರಾವಣ ಹಾಗೂ ಸೂಕ್ಷ್ಮಾಣು ಜೀವಿಗಳ ಮಿಶ್ರಣದಿಂದ ತಯಾರಿಸಿದ ಗೊಬ್ಬರ ಬಳಸಿ ರೈತರು ಹೆಚ್ಚಿಸಿಕೊಳ್ಳಬೇಕು’ ಎಂದು ರೇಷ್ಮೆ ಕೃಷಿ ವಿಜ್ಞಾನಿ ಶಶಿಧರ್ ಕಿವಿಮಾತು ಹೇಳಿದರು.

ರೇಷ್ಮೆ ಇಲಾಖೆಯು ತಾಲ್ಲೂಕಿನ ನಾಯಕರಹಳ್ಳಿಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ರೈತರಿಂದ ರೈತರಿಗೆ ಹೊರಾಂಗಣ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿ, ‘ಹಿಪ್ಪುನೇರಳೆ ಬೆಳೆಗೆ ಸೂಕ್ಷ್ಮಾಣು ಜೀವಿಗಳ ಮಿಶ್ರಣದಿಂದ ತಯಾರಿಸಿದ ಗೊಬ್ಬರ ಬಳಕೆಯಿಂದ ರೈತರ ಆದಾಯ ದ್ವಿಗುಣಗೊಳ್ಳುವುದರಲ್ಲಿ ಅನುಮಾನವೇ ಇಲ್ಲ’ ಎಂದರು.

‘ಚೀನಾ ರೇಷ್ಮೆ ಆಮದಿನಿಂದ ದೇಶದ ರೇಷ್ಮೆ ಬೆಳೆಗಾರರು ಹಾಗೂ ನೂಲು ಬಿಚ್ಚಾಣಿಕೆದಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ವೈಜ್ಞಾನಿಕ ಕೃಷಿ ಪದ್ಧತಿ ಅನುಸರಿಸಿದರೆ ಕಡಿಮೆ ಖರ್ಚಿನಲ್ಲಿ ಹೆಚ್ಚು ಇಳುವರಿ ಪಡೆಯಬಹುದು. ರೇಷ್ಮೆ ಇಲಾಖೆಯು ಜಿಲ್ಲೆಯಲ್ಲಿ ನರೇಗಾ ಯೋಜನೆಯಡಿ ಅತಿ ಹೆಚ್ಚು ಮಾನವ ದಿನ ಸೃಜಿಸಿದೆ. ಹಿಪ್ಪುನೇರಳೆ ಬೇಸಾಯ ಅಭಿವೃದ್ಧಿಪಡಿಸಿ ರಾಜ್ಯದಲ್ಲೇ ಪ್ರಥಮ ಸ್ಥಾನಕ್ಕೇರಿದೆ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ADVERTISEMENT

‘ಚೀನಾ ರೇಷ್ಮೆ ಆಮದು ತಡೆ ಜತೆಗೆ ಕಡಿಮೆ ವೆಚ್ಚದಲ್ಲಿ ಹೆಚ್ಚು ಲಾಭದಾಯಕವಾಗಿ ರೇಷ್ಮೆ ಕೃಷಿ ನಿರ್ವಹಣೆ ಮಾಡಲು ರೈತರು ತಾಂತ್ರಿಕ ಅರಿವು ಪಡೆಯಬೇಕು. ರೈತರು ದ್ವಿತಳಿ ರೇಷ್ಮೆಗೂಡಿನ ಉತ್ಪಾದನೆಗೆ ಮುಂದಾಗಬೇಕು. ಗುಣಮಟ್ಟದ ರೇಷ್ಮೆಗೂಡು ಉತ್ಪಾದಿಸಿದರೆ ಚೀನಾ ರೇಷ್ಮೆ ಆಮದು ನಿಲ್ಲುತ್ತದೆ’ ಎಂದು ಹೇಳಿದರು.

ಮೊದಲ ಸ್ಥಾನ: ‘ಹೊಸದಾಗಿ ಹಿಪ್ಪುನೇರಳೆ ನಾಟಿಗೆ ನರೇಗಾ ಯೋಜನೆಯಲ್ಲಿ ಸಹಾಯಧನ ಸೌಲಭ್ಯಗಳ ನೀಡಲಾಗುತ್ತದೆ. ನರೇಗಾ ಅನುಷ್ಠಾನದಲ್ಲಿ ಕೋಲಾರ ಜಿಲ್ಲೆಯ ರೇಷ್ಮೆ ಇಲಾಖೆ ಮೊದಲ ಸ್ಥಾನದಲ್ಲಿದೆ. ರೈತರು ನರೇಗಾ ಯೋಜನೆಯ ಲಾಭ ಪಡೆದು ಹಿಪ್ಪುನೇರಳೆ ತೋಟ ಅಭಿವೃದ್ಧಿಪಡಿಸಬೇಕು’ ಎಂದು ರೇಷ್ಮೆ ಇಲಾಖೆ ಸಹಾಯಕ ನಿರ್ದೇಶಕ ಮಂಜುನಾಥ್ ಸಲಹೆ ನೀಡಿದರು.

‘ನೂಲು ಬಿಚ್ಚಾಣಿಕೆದಾರರು ಗುಣಮಟ್ಟದ ಕೊರತೆಯ ನೆಪ ಮಾಡಿಕೊಂಡು ಚೀನಾ ರೇಷ್ಮೆಗೆ ಬೇಡಿಕೆಯೊಡ್ಡುತ್ತಾರೆ. ಸರ್ಕಾರ ವಿದೇಶಿ ರೇಷ್ಮೆ ಆಮದು ಸುಂಕ ಹೆಚ್ಚಿಸಬೇಕು. ದೇಶದ ರೈತರು ಗುಣಮಟ್ಟದ ರೇಷ್ಮೆ ಉತ್ಪಾದಿಸಿದರೆ ನೂಲು ಬಿಚ್ಚಾಣಿಕೆದಾರರು ಸ್ವದೇಶಿ ನೂಲು ಖರೀದಿಸುತ್ತಾರೆ’ ಎಂದು ತಿಳಿಸಿದರು.

‘ರೇಷ್ಮೆ ಉತ್ಪಾದನೆಯಲ್ಲಿ ದೇಶವು ಜಾಗತಿಕವಾಗಿ 2ನೇ ಸ್ಥಾನದಲ್ಲಿದೆ. ಜಿಲ್ಲೆಯ ರೇಷ್ಮೆಗೂಡಿಗೆ ಹೆಚ್ಚಿನ ಬೇಡಿಕೆಯಿದೆ. ರೇಷ್ಮೆ ಇಲಾಖೆಯಲ್ಲಿ ಹಲವು ಯೋಜನೆಗಳಿದ್ದು, ರೈತರು ಇವುಗಳನ್ನು ಸದ್ಬಳಕೆ ಮಾಡಿಕೊಂಡು ಗುಣಮಟ್ಟದ ಹಿಪ್ಪುನೇರಳೆ ಬೆಳೆಯಬೇಕು. ವಿದೇಶಿ ಪೈಪೋಟಿಗೆ ಅನುಗುಣವಾಗಿ ಕೃಷಿಯಲ್ಲಿ ತಾಂತ್ರಿಕತೆ ಅಳವಡಿಸಿಕೊಂಡು ದ್ವಿತಳಿ ರೇಷ್ಮೆಗೂಡು ಉತ್ಪಾದಿಸಬೇಕು’ ಎಂದರು.

ಬಯೋ ಡೀಕಂಪೋಸರ್, ಸಸ್ಯ ಜನ್ಯ ಸಾವಯವ ಕೀಟನಾಶಕಗಳ ಬಳಕೆ, ಹಿಪ್ಪುನೇರಳೆಯ ಅಧಿಕ ಇಳುವರಿ ಗುಣಮಟ್ಟದ ಸುಧಾರಣೆ ಕುರಿತು ಪ್ರಗತಿಪರ ರೈತ ನಾಗರಾಜ್‌ ಮಾಹಿತಿ ನೀಡಿದರು. ರೇಷ್ಮೆ ಇಲಾಖೆ ನಿರೀಕ್ಷಕ ಜಿ.ಶ್ರೀನಿವಾಸಗೌಡ, ರೇಷ್ಮೆ ಉತ್ಪಾದಕ ಕಂಪನಿ ಪ್ರತಿನಿಧಿಗಳಾದ ಶೋಭಾ, ಜಿ.ಗಿರಿಜಾ, ಬ್ಯಾಟಪ್ಪ, 30ಕ್ಕೂ ಹೆಚ್ಚು ರೈತರು ಪಾಲ್ಗೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.