ADVERTISEMENT

ಗಡಿ ಜಿಲ್ಲೆ ಕೋಲಾರದಲ್ಲಿ ತ್ರಿಭಾಷಾ ಸಂಗಮ: ಶಾಸಕ ಶ್ರೀನಿವಾಸಗೌಡ

​ಪ್ರಜಾವಾಣಿ ವಾರ್ತೆ
Published 27 ಡಿಸೆಂಬರ್ 2020, 16:33 IST
Last Updated 27 ಡಿಸೆಂಬರ್ 2020, 16:33 IST
ಕೋಲಾರ ತಾಲ್ಲೂಕಿನ ನರಸಾಪುರ ಗ್ರಾಮದಲ್ಲಿ ಭಾನುವಾರ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಕೆ.ಶ್ರೀನಿವಾಸಗೌಡ ಧ್ವಜಾರೋಹಣ ನೆರವೇರಿಸಿದರು.
ಕೋಲಾರ ತಾಲ್ಲೂಕಿನ ನರಸಾಪುರ ಗ್ರಾಮದಲ್ಲಿ ಭಾನುವಾರ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಕೆ.ಶ್ರೀನಿವಾಸಗೌಡ ಧ್ವಜಾರೋಹಣ ನೆರವೇರಿಸಿದರು.   

ಕೋಲಾರ: ‘ಕನ್ನಡ ರಾಜ್ಯೋತ್ಸವವನ್ನು ಜಾತಿ, ಧರ್ಮದ ಭೇದವಿಲ್ಲದೆ ಆಚರಿಸಬೇಕು’ ಎಂದು ಶಾಸಕ ಕೆ.ಶ್ರೀನಿವಾಸಗೌಡ ಕಿವಿಮಾತು ಹೇಳಿದರು.

ಕನ್ನಡ ಸೇನೆ ವತಿಯಿಂದ ತಾಲ್ಲೂಕಿನ ನರಸಾಪುರ ಗ್ರಾಮದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿ, ‘ಮಾತೃ ಭಾಷೆಯಲ್ಲಿ ಮಾತ್ರ ಭಾವನೆಗಳು ನೈಜವಾಗಿ ವ್ಯಕ್ತವಾಗುತ್ತವೆ. ಇತರೆ ಭಾಷೆಗಳಲ್ಲಿ ಮಾತನಾಡುವುದು ಕೃತಕವಾಗಿರುತ್ತದೆ’ ಎಂದು ಅಭಿಪ್ರಾಯಪಟ್ಟರು.

‘ಗಡಿ ಜಿಲ್ಲೆ ಕೋಲಾರದಲ್ಲಿ ಕನ್ನಡ, ತೆಲುಗು, ತಮಿಳು ಭಾಷೆ ಮಾತನಾಡುವವರಿದ್ದಾರೆ. ಜಿಲ್ಲೆಯು ತ್ರಿಭಾಷಾ ಸಂಗಮವಾಗಿದೆ. ಆದರೆ, ಭಾಷೆ ವಿಚಾರದಲ್ಲಿ ಭೇದ ಭಾವವಿಲ್ಲ. ಎಲ್ಲಾ ಭಾಷಿಕರು ಅನ್ಯೋನ್ಯತೆಯಿಂದ ಬಾಳುತ್ತಿದ್ದಾರೆ. ಜನರು ಕನ್ನಡ ಭಾಷೆಗೆ ಮೊದಲ ಆದ್ಯತೆ ನೀಡಬೇಕು. ನಾಡು, ನುಡಿ ಉಳಿಸಲು ಸದಾ ಸಿದ್ಧರಿರಬೇಕು’ ಎಂದು ಸಲಹೆ ನೀಡಿದರು.

ADVERTISEMENT

‘ಕರ್ನಾಟಕವು ಎಲ್ಲಾ ಕ್ಷೇತ್ರಗಳಲ್ಲೂ ಸಾಧನೆ ಮಾಡಿ ಜಾಗತಿಕವಾಗಿ ಗುರುತಿಸಿಕೊಂಡಿದೆ. ಒಂದು ರಾಜ್ಯ ಹಲವು ಜಗತ್ತು ಎಂಬ ಹೆಗ್ಗಳಿಕೆ ಹೊಂದಿರುವ ಕರ್ನಾಟಕವು ದೇಶದ ಪ್ರಮುಖ ರಾಜ್ಯಗಳಲ್ಲಿ ಒಂದಾಗಿದೆ. ಕರ್ನಾಟಕವು ಸರ್ವ ಜನಾಂಗದ ಶಾಂತಿಯ ತೋಟ. ಕನ್ನಡಿಗರು ಸಹಬಾಳ್ವೆಯಿಂದ ಬದುಕು ಕಟ್ಟಿಕೊಳ್ಳಬೇಕು’ ಎಂದರು.

ಗ್ರಾಮದಲ್ಲಿ ಕನ್ನಡಾಂಬೆಯ ಭಾವಚಿತ್ರಗಳ ಮೆರವಣಿಗೆ ನಡೆಸಲಾಯಿತು. ಕಲಾ ತಂಡಗಳ ಕಾರ್ಯಕ್ರಮ ಕಣ್ಮನ ಸೆಳೆಯಿತು. ಡಿಸಿಸಿ ಬ್ಯಾಂಕ್‌ ನಿರ್ದೇಶಕ ವಿ.ಸೋಮಣ್ಣ, ಕನ್ನಡ ಸೇನೆ ಕೋಲಾರ ತಾಲ್ಲೂಕು ಘಟಕದ ಅಧ್ಯಕ್ಷ ಎನ್‌.ಸಿ.ಶಿವಚಂದ್ರಯ್ಯ, ರಾಜ್ಯ ಘಟಕದ ಉಪಾಧ್ಯಕ್ಷ ವಿಷ್ಣು, ಸತ್ಯಾಂಬಿಕಾ ಮತ್ತು ವೇದಾಂಬಿಕ ದೇವಾಲಯದ ಅಧ್ಯಕ್ಷ ಎನ್.ಸಿ.ಚಂದ್ರಮೋಹನ್, ಪ್ರಧಾನ ಕಾರ್ಯದರ್ಶಿ ಯಲ್ಲಪ್ಪ, ನಮ್ಮ ನಾಡು ರಕ್ಷಣಾ ವೇದಿಕೆ ತಾಲ್ಲೂಕು ಘಟಕದ ಅಧ್ಯಕ್ಷ ಎನ್.ಪಿ.ನಾಗೇಶ್ ಪಾಲ್ಗೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.