ADVERTISEMENT

ಕಣ್ಮನ ಸೆಳೆದ ಲಕ್ಷ ದೀಪೋತ್ಸವ

​ಪ್ರಜಾವಾಣಿ ವಾರ್ತೆ
Published 10 ಡಿಸೆಂಬರ್ 2019, 16:11 IST
Last Updated 10 ಡಿಸೆಂಬರ್ 2019, 16:11 IST
ಕೋಲಾರ ಅಂತರಗಂಗೆ ಬೆಟ್ಟದಲ್ಲಿ ಮಂಗಳವಾರ ರಾತ್ರಿ ಲಕ್ಷ ದೀಪೋತ್ಸವ ನಡೆಯಿತು.
ಕೋಲಾರ ಅಂತರಗಂಗೆ ಬೆಟ್ಟದಲ್ಲಿ ಮಂಗಳವಾರ ರಾತ್ರಿ ಲಕ್ಷ ದೀಪೋತ್ಸವ ನಡೆಯಿತು.   

ಕೋಲಾರ: ದಕ್ಷಿಣ ಕಾಶಿ ಎಂದೇ ಹೆಸರವಾಗಿರುವ ನಗರದ ಹೊರವಲಯದ ಅಂತರಗಂಗೆ ಬೆಟ್ಟದಲ್ಲಿ ಮಂಗಳವಾರ ರಾತ್ರಿ ಶಿವ ಲಕ್ಷ ದೀಪೋತ್ಸವ ಹಾಗೂ ತೆಪ್ಪೋತ್ಸವ ಅದ್ಧೂರಿಯಾಗಿ ನಡೆಯಿತು.

ಲಕ್ಷ ದೀಪೋತ್ಸವದ ಸೊಬಗು ಕಣ್ತುಂಬಿಕೊಳ್ಳಲು ಅಂತರಗಂಗೆ ಬೆಟ್ಟಕ್ಕೆ ಜನ ಸಾಗರವೇ ಹರಿದು ಬಂದಿತು. ಭಕ್ತರು ಬೆಟ್ಟದಲ್ಲಿನ ಕಾಶಿ ವಿಶ್ವೇಶ್ವರ ದೇವಾಲಯಕ್ಕೆ ತೆರಳಿ ದೇವರ ದರ್ಶನ ಪಡೆದರು.

ಅಂತರಗಂಗೆ ಬೆಟ್ಟದಲ್ಲಿ 13 ವರ್ಷಗಳಿಂದ ಲಕ್ಷ ದೀಪೋತ್ಸವ ನಡೆಯುತ್ತಿದ್ದು, ಜಿಲ್ಲೆಯ ಜತೆಗೆ ಅಕ್ಕಪಕ್ಕದ ಜಿಲ್ಲೆಗಳ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಾರೆ. ತೆಪ್ಪೋತ್ಸವದ ಜತೆಗೆ ನಡೆದ ಕಾಶಿ ವಿಶ್ವೇಶ್ವರಸ್ವಾಮಿಯ ಕಲ್ಯಾಣೋತ್ಸವವು ಜನರನ್ನು ಭಕ್ತಿ ಸಾಗರದಲ್ಲಿ ಮುಳುಗಿಸಿತು.

ADVERTISEMENT

ಭಕ್ತರು ಚಳಿ ನಡುವೆಯೂ ಅಂತರಗಂಗೆ ಕ್ಷೇತ್ರವನ್ನು ಹಣತೆಗಳಿಂದ ಬೆಳಗಿಸಿದರು. ಕಾಶಿ ವಿಶ್ವೇಶ್ವರಸ್ವಾಮಿ ದೇವಾಲಯದಲ್ಲಿ ಹೂವಿನ ಅಲಂಕಾರ ಮಾಡಲಾಗಿತ್ತು. ಲಕ್ಷ ದೀಪೋತ್ಸವದ ಅಂಗವಾಗಿ ಗರ್ಭಗುಡಿಯನ್ನು ಕೈಲಾಸ, ಹಿಮ ಪರ್ವತದಂತೆ ಅಲಂಕರಿಸಲಾಗಿತ್ತು. ನಾದಸ್ವರ ಮತ್ತು ಸ್ಯಾಕ್ಸೊಫೋನ್‌ ವಾದನದ ಹಿಮ್ಮೇಳವು ಗಮನ ಸೆಳೆಯಿತು.

ಭಕ್ತರು ದೇವಾಲಯದ ಕಲ್ಯಾಣಿಯಲ್ಲಿ ತೆಪ್ಪೋತ್ಸವ ನಡೆಸಿದರು. ದೇವಾಲಯದ ಬಳಿಯ ಕಲ್ಲಿನ ಬಸವ ಮೂರ್ತಿಯ ಬಾಯಿಯಿಂದ ಬರುವ ಸಿಹಿ ನೀರು ಕುಡಿಯಲು ಭಕ್ತರು ಮುಗಿಬಿದ್ದರು. ಮತ್ತೆ ಕೆಲ ಭಕ್ತರು ಬಾಟಲಿಗಳಿಗೆ ನೀರು ತುಂಬಿಸಿಕೊಂಡರು. ಇನ್ನು ಕೆಲವರು ಪವಿತ್ರ ಜಲ ಪ್ರೋಕ್ಷಣೆ ಮಾಡಿಕೊಂಡು ಪುನೀತರಾದರು.

ಪೊಲೀಸ್‌ ಬಂದೋಬಸ್ತ್‌: ಲಕ್ಷ ದೀಪೋತ್ಸವ ಹಿನ್ನೆಲೆಯಲ್ಲಿ ಬೆಟ್ಟದ ಕೆಳಗಿನಿಂದ ಮೇಲಿನವರೆಗೂ ಜನವೋ ಜನ. ದೇವರ ದರ್ಶನ ಪಡೆಯಲು ಭಕ್ತಾದಿಗಳು ಸಾಲುಗಟ್ಟಿ ನಿಂತಿದ್ದರು. ಮುನ್ನೆಚ್ಚರಿಕೆ ಕ್ರಮವಾಗಿ ಬೆಟ್ಟದಲ್ಲಿ ಹೆಚ್ಚಿನ ಪೊಲೀಸ್‌ ಬಂದೋಬಸ್ತ್‌ ಮಾಡಲಾಗಿತ್ತು. ಭಕ್ತರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟರು.

ಜಿಲ್ಲಾಧಿಕಾರಿ ಜೆ.ಮಂಜುನಾಥ್‌, ಉಪ ತಹಶೀಲ್ದಾರ್‌ ನಾಗವೇಣಿ ದೇವಾಲಯಕ್ಕೆ ಬಂದು ಪೂಜೆ ಸಲ್ಲಿಸಿದರು. ಪೂಜೆಯ ನಂತರ ಭಕ್ತರಿಗೆ ಪ್ರಸಾದ ವಿನಿಯೋಗ ಮಾಡಲಾಯಿತು. ಇಡೀ ರಾತ್ರಿ ಬೆಟ್ಟದ ತಪ್ಪಲಿನಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿ, ಜಾತ್ರೆಯ ಕಳೆ ಕಂಡುಬಂತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.