ADVERTISEMENT

ಜಿಲ್ಲೆಯಲ್ಲಿ ನಿಲ್ಲದ ಸಾವಿನ ಓಟ

ಶತಕದ ಗಡಿ ದಾಟಿದ ಸೋಂಕಿತರ ಸಾವಿನ ಸಂಖ್ಯೆ

​ಪ್ರಜಾವಾಣಿ ವಾರ್ತೆ
Published 8 ಅಕ್ಟೋಬರ್ 2020, 16:28 IST
Last Updated 8 ಅಕ್ಟೋಬರ್ 2020, 16:28 IST

ಕೋಲಾರ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಾವಿನ ಓಟ ಮುಂದುವರಿದಿದ್ದು, ಮೃತ ಸೋಂಕಿತರ ಸಂಖ್ಯೆ ಗುರುವಾರ ಶತಕದ ಗಡಿ ದಾಟಿದೆ.

ಕಳೆದ 3 ದಿನಗಳಿಂದ ಸೋಂಕಿತರ ಸಾವಿನ ಸಂಖ್ಯೆಯು ದಾಖಲೆ ಪ್ರಮಾಣದಲ್ಲಿ ಏರಿಕೆಯಾಗಿದ್ದು, ಜನರಲ್ಲಿ ಆತಂಕ ಮನೆ ಮಾಡಿದೆ. ಮಂಗಳವಾರ 5 ಮಂದಿ, ಬುಧವಾರ 4 ಮಂದಿ ಸೋಂಕಿತರು ಮೃತಪಟ್ಟಿದ್ದರು. ಇದರ ಬೆನ್ನಲ್ಲೇ ಗುರುವಾರ 5 ಸೋಂಕಿತರು ಕೊನೆಯುಸಿರೆಳೆದಿದ್ದು, ಸೋಂಕಿತರ ಸಾವಿನ ಸಂಖ್ಯೆ 105ಕ್ಕೆ ಏರಿಕೆಯಾಗಿದೆ.

ಜಿಲ್ಲಾ ಕೇಂದ್ರದ ಕೋವಿಡ್ ಆಸ್ಪತ್ರೆಗಳಿಗೆ ದಾಖಲಾಗಿರುವ ಸೋಂಕಿತರ ಪೈಕಿ ಕೋಲಾರ ತಾಲ್ಲೂಕಿನ ಇಬ್ಬರು, ಮಾಲೂರು, ಕೆಜಿಎಫ್‌ ಮತ್ತು ಮುಳಬಾಗಿಲು ತಾಲ್ಲೂಕಿನ ತಲಾ ಒಬ್ಬರು ಸೋಂಕಿತರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

ADVERTISEMENT

ಮತ್ತೊಂದೆಡೆ ಸೋಂಕು ಹರಡುವಿಕೆ ಪ್ರಮಾಣವು ಗಣನೀಯವಾಗಿ ಹೆಚ್ಚಳವಾಗಿದ್ದು, ಆರೋಗ್ಯ ಇಲಾಖೆಯ ನಿದ್ದೆಗೆಡಿಸಿದೆ. ಮುಖ್ಯವಾಗಿ ವಿಷಮ ಶೀತ ಜ್ವರದಿಂದ ಬಳಲುತ್ತಿರುವವರಲ್ಲಿ ಹೆಚ್ಚಾಗಿ ಸೋಂಕು ಕಾಣಿಸಿಕೊಳ್ಳುತ್ತಿದೆ. ಜತೆಗೆ ಸೋಂಕಿತರ ಸಂಪರ್ಕವು ಆತಂಕಕಾರಿಯಾಗಿ ಪರಿಣಮಿಸಿದೆ.

ಜಿಲ್ಲೆಯಲ್ಲಿ ಹೊಸದಾಗಿ 142 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ಗುರುವಾರ ದೃಢಪಟ್ಟಿದೆ. ಮುಳಬಾಗಿಲು ತಾಲ್ಲೂಕಿನಲ್ಲಿ ಅತಿ ಹೆಚ್ಚು 40 ಮಂದಿಗೆ ಸೋಂಕು ಹರಡಿದೆ. ಕೋಲಾರ ತಾಲ್ಲೂಕಿನ 23, ಮಾಲೂರು ತಾಲ್ಲೂಕಿನ 33, ಬಂಗಾರಪೇಟೆ ತಾಲ್ಲೂಕಿನ 22, ಕೆಜಿಎಫ್‌ ತಾಲ್ಲೂಕಿನ 17 ಮತ್ತು ಶ್ರೀನಿವಾಸಪುರ ತಾಲ್ಲೂಕಿನ 7 ಮಂದಿಗೆ ಸೋಂಕು ಹರಡಿರುವುದು ಖಚಿತವಾಗಿದೆ.

ಹೊಸದಾಗಿ ಪತ್ತೆಯಾದ ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್‌ ಮಾಡಲಾಯಿತು.

65 ಮಂದಿ ಗುಣಮುಖ: ಹೊಸದಾಗಿ ಪತ್ತೆಯಾಗುತ್ತಿರುವ ಸೋಂಕಿತರ ಸಂಖ್ಯೆಗೆ ಹೋಲಿಸಿದರೆ ಗುಣಮುಖರ ಪ್ರಮಾಣ ಕೊಂಚ ತಗ್ಗಿದೆ. ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರ ಪೈಕಿ 65 ಮಂದಿ ಗುಣಮುಖರಾಗಿ ಗುರುವಾರ ಆಸ್ಪತ್ರೆಯಿಂದ ಮನೆಗೆ ಮರಳಿದರು.

ಕೋಲಾರ ತಾಲ್ಲೂಕಿನ 24 ಮಂದಿ, ಮಾಲೂರು ತಾಲ್ಲೂಕಿನ 10, ಕೆಜಿಎಫ್‌ ತಾಲ್ಲೂಕಿನ 9, ಮುಳಬಾಗಿಲು ತಾಲ್ಲೂಕಿನ 4, ಶ್ರೀನಿವಾಸಪುರ ತಾಲ್ಲೂಕಿನ 17 ಮತ್ತು ಬಂಗಾರಪೇಟೆ ತಾಲ್ಲೂಕಿನ ಒಬ್ಬರನ್ನು ಆಸ್ಪತ್ರೆಯಿಂದ ಬೀಳ್ಕೊಡಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.