ADVERTISEMENT

ಕುಡಿಯುವ ನೀರು, ಮೇವಿಗೆ ಕೊರತೆ ಆಗದಿರಲಿ: ಜಿಲ್ಲಾಧಿಕಾರಿ ಎಂ.ಆರ್.ರವಿ ಸೂಚನೆ

ಬೇಸಿಗೆಗೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಎಂ.ಆರ್.ರವಿ ಸೂಚನೆ

​ಪ್ರಜಾವಾಣಿ ವಾರ್ತೆ
Published 12 ಫೆಬ್ರುವರಿ 2026, 2:59 IST
Last Updated 12 ಫೆಬ್ರುವರಿ 2026, 2:59 IST
ಕೋಲಾರದಲ್ಲಿ ಬುಧವಾರ ಜಿಲ್ಲಾಧಿಕಾರಿ ಎಂ.ಆರ್.ರವಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಮಾತನಾಡಿದರು
ಕೋಲಾರದಲ್ಲಿ ಬುಧವಾರ ಜಿಲ್ಲಾಧಿಕಾರಿ ಎಂ.ಆರ್.ರವಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಮಾತನಾಡಿದರು   

ಕೋಲಾರ: ಜಿಲ್ಲೆಯಲ್ಲಿ ಕುಡಿಯುವ ನೀರು ಹಾಗೂ ಮೇವಿಗೆ ಸಮಸ್ಯೆ ಎದುರಾಗದಂತೆ ಮುನ್ನೆಚ್ಚರಿಕೆ ವಹಿಸಲು ಹಾಗೂ ಮುಂಬರುವ ಬೇಸಿಗೆಯ ತಾಪಮಾನ ಎದುರಿಸಲು ಸಕಲ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಎಂ.ಆರ್.ರವಿ, ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಡಳಿತ ಭವನದ ಕೆಸ್ವಾನ್ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

2025ರ ಜನವರಿಯಿಂದ ನವೆಂಬರ್ ಅವಧಿಯಲ್ಲಿ ಜಿಲ್ಲೆಯಲ್ಲಿ 927 ಮಿ.ಮೀ ಮಳೆಯಾಗಿದೆ. ಈ ಅವಧಿಯ ವಾಡಿಕೆ ಮಳೆ 735.1 ಮಿ.ಮೀ ಎಂದರು.

ADVERTISEMENT

ಯರಗೋಳ್ ಜಲಾಶಯದ ಕುಡಿಯುವ ನೀರಿನ ಸಮರ್ಥ ಪೂರೈಕೆ ಹೊರತಾಗಿಯೂ ಜಿಲ್ಲೆಯ ಗ್ರಾಮೀಣ ಭಾಗದ 186 ಗ್ರಾಮಗಳು ಹಾಗೂ ನಗರ ಪ್ರದೇಶದ 31 ವಾರ್ಡ್‍ಗಳಲ್ಲಿ ಮುಂದಿನ ದಿನಗಳಲ್ಲಿ ನೀರಿನ ಕೊರತೆ ಉಂಟಾಗುವ ಸಾಧ್ಯತೆಯನ್ನು ಗುರುತಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಟ್ಯಾಂಕರ್ ಮೂಲಕ ನೀರು ಪೂರೈಸಲು ಟೆಂಡರ್ ಪ್ರಕ್ರಿಯೆ ಕೈಗೊಳ್ಳಲು ಸೂಚಿಸಲಾಗಿದೆ. ನಗರಸಭೆ ಮತ್ತು ಪುರಸಭೆಗಳಲ್ಲಿ ಇಲಾಖೆಯ ಟ್ಯಾಂಕರ್‌ಗಳನ್ನು ಹೊಂದಿರಬೇಕು. ಈ ಟ್ಯಾಂಕರ್‌ಗಳು ದುರುಪಯೋಗವಾಗದಂತೆ ಕ್ರಮ ವಹಿಸಬೇಕು ಎಂದು ನಿರ್ದೇಶನ ನೀಡಿದರು.

ಜಿಲ್ಲೆಯಲ್ಲಿ ಪ್ರಸ್ತುತ 2,92,627 ಟನ್‍ಗಳಷ್ಟು ಮೇವು ಲಭ್ಯವಿದ್ದು, ಮುಂದಿನ 25 ವಾರಗಳಿಗೆ ಸಾಕಾಗಲಿದೆ. ಜಿಲ್ಲೆಯಲ್ಲಿ 13,841 ಟನ್‍ಗಳಷ್ಟು ವಿವಿಧ ರಸಗೊಬ್ಬರಗಳು ದಾಸ್ತಾನು ಇವೆ. ಆದಾಗಿಯೂ ರೈತರು ಜೈವಿಕ ಗೊಬ್ಬರ ಉಪಯೋಗಿಸಲು ಪ್ರಚಾರ ಮಾಡಬೇಕು ಎಂದು ತಿಳಿಸಿದರು.

2026ರ ಬೇಸಿಗೆಗಾಗಿ 'ಹೀಟ್ ವೇವ್ ಆ್ಯಕ್ಷನ್ ಪ್ಲಾನ್' ಸಿದ್ಧಪಡಿಸಲಾಗಿದೆ. ಮನರೇಗಾ ಕೆಲಸದ ಸಮಯ ಬದಲಾವಣೆ, ಆಸ್ಪತ್ರೆಗಳಲ್ಲಿ ಅಗತ್ಯ ಔಷಧ ಹಾಗೂ ಒಆರ್‍ಎಸ್ ದಾಸ್ತಾನು ಇರಿಸಿಕೊಳ್ಳಲು ಸೂಚಿಸಲಾಗಿದೆ. ತೆರೆದ ಗಾಡಿಗಳಲ್ಲಿ ಹೆಚ್ಚಿದ ಹಣ್ಣುಗಳ ಮಾರಾಟಕ್ಕೆ ಕಡಿವಾಣ ಹಾಕಬೇಕು ಎಂದರು.

ಬೆಂಕಿ ಅವಘಡಗಳನ್ನು ತಡೆಗಟ್ಟಲು ಜಿಲ್ಲೆಯ ಎಲ್ಲಾ ಅಗ್ನಿಶಾಮಕ ಠಾಣೆಗಳಲ್ಲಿ ನೀರಿನ ಸಂಗ್ರಹಣೆ ಹಾಗೂ ಉಪಕರಣಗಳ ಸನ್ನದ್ಧತೆಯನ್ನು ಪರಿಶೀಲಿಸಲಾಗಿದೆ ಎಂದು ಅಧಿಕಾರಿಗಳು ಸಭೆಯಲ್ಲಿ ಮಾಹಿತಿ ನೀಡಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕನ್ನಿಕಾ ಸಿಕ್ರಿವಾಲ್, ಹೆಚ್ಚುವರಿ ಜಿಲ್ಲಾಧಿಕಾರಿ ಎಸ್.ಎಂ.ಮಂಗಳಾ, ಉಪವಿಭಾಗಾಧಿಕಾರಿ ಜಂಬಗಿ ರೇಣುಕಾಪ್ರಸಾದ್ ದಿಲೀಪ್, ಮುಳಬಾಗಿಲು ತಹಶೀಲ್ದಾರ್ ಗೀತಾ, ಕೆಜಿಎಫ್‌ ತಹಶೀಲ್ದಾರ್‌ ಭರತ್, ಮಾಲೂರು ತಹಶೀಲ್ದಾರ್ ರೂಪಾ, ಕೋಲಾರ ಗ್ರೇಡ್ 2 ತಹಶೀಲ್ದಾರ್ ಹಂಸಾ, ಜಿಲ್ಲಾ ಪಂಚಾಯಿತಿ ಯೋಜನೆ ಶಾಖೆಯ ವೆಂಕಟಾಚಲಪತಿ, ಎಲ್ಲಾ ಕಾರ್ಯನಿರ್ವಾಹಕ ಅಧಿಕಾರಿಗಳು, ಅಗ್ನಿಶಾಮಕ ಇಲಾಖೆಯ ಅಧಿಕಾರಿ ನವೀನ್, ಪಶುಪಾಲನಾ ಇಲಾಖೆಯ ಉಪನಿರ್ದೇಶಕ, ಹಿರಿಯ ಭೂವಿಜ್ಞಾನಿ ತಿಪ್ಪೆಸ್ವಾಮಿ, ಬೇತಮಂಗಲ ಎಇಇ ಚಂದ್ರಶೇಖರ್‌ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.