ಕೋಲಾರ: ಜಿಲ್ಲೆಯ ಹಲವೆಡೆ ಗುರುವಾರ ರಾತ್ರಿ ಗುಡುಗು ಮಿಂಚು ಸಹಿತ ಧಾರಾಕಾರ ಮಳೆಯಾಗಿದ್ದು, ರೈತರ ಮೊಗದಲ್ಲಿ ಸಂತಸ ಮೂಡಿದೆ.
ಜಿಲ್ಲೆಯಲ್ಲಿ ಕಳೆದೊಂದು ವಾರದಿಂದ ಬಿಸಿಲ ತಾಪ ಹೆಚ್ಚಿತ್ತು. ಗುರುವಾರ ಇಡೀ ದಿನ ಶಕೆಯ ಅನುಭವವಿತ್ತು. ಸಂಜೆ 6 ಗಂಟೆ ಸುಮಾರಿಗೆ ಆರಂಭವಾದ ಮಳೆ ಒಂದೂವರೆ ತಾಸು ಎಡಬಿಡದೆ ಸುರಿಯಿತು. ಬಿಸಿಲ ಬೇಗೆಯಿಂದ ಬಸವಳಿದಿದ್ದ ಜನರಿಗೆ ಮಳೆಯು ಹಿತಾನುಭವ ನೀಡಿತು. ಮಳೆಯ ನಿರೀಕ್ಷೆಯಲ್ಲಿದ್ದ ಮಾವು ಬೆಳೆಗಾರರಿಗೆ ತುಸು ನೆಮ್ಮದಿ ಸಿಕ್ಕಿದೆ.
ಮಳೆಯಿಂದಾಗಿ ಜಿಲ್ಲಾ ಕೇಂದ್ರದಲ್ಲಿ ಚರಂಡಿಗಳು ಹಾಗೂ ಮ್ಯಾನ್ಹೋಲ್ಗಳು ಕ್ಷಣ ಮಾತ್ರದಲ್ಲಿ ಭರ್ತಿಯಾಗಿ ಕೊಳಚೆ ನೀರು ರಸ್ತೆಗಳ ಮೇಲೆ ಹರಿದು ಅವಾಂತರ ಸೃಷ್ಟಿಸಿತು. ಮಳೆಯಿಂದಾಗಿ ಹಲವು ಬಡಾವಣೆಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿತು. ಮಳೆಗೆ ಜಿಲ್ಲಾ ಕೇಂದ್ರದ ರಸ್ತೆಗಳ ಚಿತ್ರಣವೇ ಬದಲಾಯಿತು.
ರಸ್ತೆಯ ಗುಂಡಿಗಳಲ್ಲಿ ಮಳೆ ನೀರು ತುಂಬಿಕೊಂಡು ರಸ್ತೆಗಳು ರಾಡಿಯಾದವು. ರೈಲ್ವೆ ಕೆಳ ಸೇತುವೆ ಹಾಗೂ ತಗ್ಗು ಪ್ರದೇಶದ ರಸ್ತೆಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆ ನೀರು ನಿಂತು ಅಕ್ಕಪಕ್ಕದ ಬಡಾವಣೆಗಳಿಗೆ ಸಂಪರ್ಕ ಕಡಿತಗೊಂಡಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.