ADVERTISEMENT

ಯುಜಿಡಿ ಸಮಸ್ಯೆ: ನಿವಾಸಿಗಳ ಧರಣಿ

​ಪ್ರಜಾವಾಣಿ ವಾರ್ತೆ
Published 28 ಜನವರಿ 2020, 13:39 IST
Last Updated 28 ಜನವರಿ 2020, 13:39 IST
ಮಹಾಲಕ್ಷ್ಮೀ ಬಡಾವಣೆಯಲ್ಲಿನ ಯುಜಿಡಿ ಸಮಸ್ಯೆ ಪರಿಹರಿಸುವಂತೆ ಒತ್ತಾಯಿಸಿ ರಾಜ್ಯ ರೈತ ಸೇನೆ ಸದಸ್ಯರು ಹಾಗೂ ಸ್ಥಳೀಯರು ಕೋಲಾರದಲ್ಲಿ ಮಂಗಳವಾರ ಕೆಯುಡಬ್ಲ್ಯೂಎಸ್‌ಡಿಬಿ ಕಚೇರಿ ಎದುರು ಧರಣಿ ನಡೆಸಿದರು.
ಮಹಾಲಕ್ಷ್ಮೀ ಬಡಾವಣೆಯಲ್ಲಿನ ಯುಜಿಡಿ ಸಮಸ್ಯೆ ಪರಿಹರಿಸುವಂತೆ ಒತ್ತಾಯಿಸಿ ರಾಜ್ಯ ರೈತ ಸೇನೆ ಸದಸ್ಯರು ಹಾಗೂ ಸ್ಥಳೀಯರು ಕೋಲಾರದಲ್ಲಿ ಮಂಗಳವಾರ ಕೆಯುಡಬ್ಲ್ಯೂಎಸ್‌ಡಿಬಿ ಕಚೇರಿ ಎದುರು ಧರಣಿ ನಡೆಸಿದರು.   

ಕೋಲಾರ: ನಗರದ ಮಹಾಲಕ್ಷ್ಮೀ ಬಡಾವಣೆಯಲ್ಲಿನ ಯುಜಿಡಿ ಸಮಸ್ಯೆ ಪರಿಹರಿಸುವಂತೆ ಒತ್ತಾಯಿಸಿ ರಾಜ್ಯ ರೈತ ಸೇನೆ ಸದಸ್ಯರು ಹಾಗೂ ಸ್ಥಳೀಯರು ಇಲ್ಲಿನ ರಾಜ್ಯ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಕೆಯುಡಬ್ಲ್ಯೂಎಸ್‌ಡಿಬಿ) ಕಚೇರಿ ಎದುರು ಮಂಗಳವಾರ ಧರಣಿ ನಡೆಸಿದರು.

‘ಮಹಾಲಕ್ಷ್ಮೀ ಲೇಔಟ್‌ ಬಡಾವಣೆಯಲ್ಲಿ ನಿರ್ಮಿಸಿರುವ ಯುಜಿಡಿ ಅವೈಜ್ಞಾನಿಕವಾಗಿದೆ. ಯುಜಿಡಿಯಲ್ಲಿ ಕೊಳಚೆ ನೀರು ಸರಾಗವಾಗಿ ಹರಿದು ಹೋಗುತ್ತಿಲ್ಲ. ಈ ಸಂಬಂಧ ನಗರಸಭೆ ಮತ್ತು ಕೆಯುಡಬ್ಲ್ಯೂಎಸ್‌ಡಿಬಿ ಅಧಿಕಾರಿಗಳಿಗೆ ಹಲವು ಬಾರಿ ದೂರು ಕೊಟ್ಟಿದ್ದೇವೆ. ಆದರೆ, ಅಧಿಕಾರಿಗಳು ಸೌಜನ್ಯಕ್ಕೂ ಬಡಾವಣೆಗೆ ಬಂದು ಯುಜಿಡಿ ಸಮಸ್ಯೆ ಪರಿಶೀಲಿಸಿಲ್ಲ’ ಎಂದು ಧರಣಿನಿರತರು ಆಕ್ರೋಶ ವ್ಯಕ್ತಪಡಿಸಿದರು.

‘ಯುಜಿಡಿ ಅವ್ಯವಸ್ಥೆಯಿಂದ ಇಡೀ ಬಡಾವಣೆ ಕೊಳೆಗೇರಿಯಂತಾಗಿದೆ. ಮ್ಯಾನ್‌ಹೋಲ್‌ಗಳಿಂದ ಕೊಳಚೆ ನೀರು ಹಾಗೂ ಮಲಮೂತ್ರ ರಸ್ತೆಗೆ ಹರಿಯುತ್ತಿದ್ದು, ಬಡಾವಣೆಯಲ್ಲಿ ದುರ್ನಾತ ಹೆಚ್ಚಿದೆ. ರಸ್ತೆಗಳಲ್ಲಿ ಓಡಾಡಲು ಸ್ಥಳೀಯರಿಗೆ ಹಾಗೂ ವಾಹನ ಸವಾರರಿಗೆ ತೀವ್ರ ಸಮಸ್ಯೆಯಾಗಿದೆ’ ಎಂದು ಮಹಾಲಕ್ಷ್ಮೀ ಲೇಔಟ್‌ ನಿವಾಸ್‌ ಮುಜಿಬ್‌ ಪಾಷಾ ದೂರಿದರು.

ADVERTISEMENT

‘ಯುಜಿಡಿ ಕೊಳಚೆ ನೀರು ರಸ್ತೆಗೆ ಹರಿಯುತ್ತಿರುವುದರಿಂದ ನೈರ್ಮಲ್ಯ ಸಮಸ್ಯೆ ಎದುರಾಗಿದೆ. ಬಡಾವಣೆಯಲ್ಲಿ ಸೊಳ್ಳೆ ಹಾಗೂ ನೊಣಗಳ ಕಾಟ ಹೆಚ್ಚಿದ್ದು, ಸ್ಥಳೀಯರಲ್ಲಿ ಸಾಂಕ್ರಾಮಿಕ ರೋಗ ಭೀತಿ ಮನೆ ಮಾಡಿದೆ. ಈಗಾಗಲೇ ಹಲವರು ಕಾಯಿಲೆಗೆ ತುತ್ತಾಗಿ ಆಸ್ಪತ್ರೆ ಸೇರಿದ್ದಾರೆ’ ಎಂದು ಅಲವತ್ತುಕೊಂಡರು.

ಹಣ ದುರುಪಯೋಗ: ‘ಗುತ್ತಿಗೆದಾರರು ಕಳಪೆ ಕಾಮಗಾರಿ ನಡೆಸಿ ಸರ್ಕಾರದ ಹಣ ದುರುಪಯೋಗಪಡಿಸಿಕೊಂಡಿದ್ದಾರೆ. ಈ ಅಕ್ರಮದಲ್ಲಿ ಅಧಿಕಾರಿಗಳು ಭಾಗಿಯಾಗಿದ್ದಾರೆ. ಲಂಚದಾಸೆಗೆ ಕಾಮಗಾರಿ ಗುಣಮಟ್ಟ ಪರಿಶೀಲಿಸದೆ ಗುತ್ತಿಗೆದಾರರಿಗೆ ಬಿಲ್‌ ಮಂಜೂರು ಮಾಡಲಾಗಿದೆ. ನಗರಸಭಾ ಸದಸ್ಯರು ಕಾಮಗಾರಿ ಅಕ್ರಮದ ಬಗ್ಗೆ ಧ್ವನಿ ಎತ್ತುತ್ತಿಲ್ಲ’ ಎಂದು ಧರಣಿನಿರತರು ಆರೋಪಿಸಿದರು.

‘ಅಧಿಕಾರಿಗಳು ಯುಜಿಡಿ ಸಮಸ್ಯೆ ಪರಿಹಾರಕ್ಕೆ ಮೀನಮೇಷ ಎಣಿಸುತ್ತಿದ್ದಾರೆ. ವಾರ್ಡ್‌ನ ಸದಸ್ಯರಿಗೆ ಸಮಸ್ಯೆಯ ಅರಿವಿಲ್ಲ. ಶೀಘ್ರವೇ ಯುಜಿಡಿ ದುರಸ್ತಿ ಮಾಡಬೇಕು. ಇಲ್ಲದಿದ್ದರೆ ಕೆಯುಡಬ್ಲ್ಯೂಎಸ್‌ಡಿಬಿ ಮತ್ತು ನಗರಸಭೆ ಕಚೇರಿಗೆ ಬೀಗ ಜಡಿಯುತ್ತೇವೆ’ ಎಂದು ಎಚ್ಚರಿಕೆ ನೀಡಿದರು.

ರೈತ ಸೇನೆ ಜಿಲ್ಲಾ ಘಟಕದ ಅಧ್ಯಕ್ಷ ಕೆ.ವೈ.ಗಣೇಶ್‌ಗೌಡ, ಗೌರವಾಧ್ಯಕ್ಷ ಕೆ.ಬಿ.ಮುನಿವೆಂಕಟಪ್ಪ, ಉಪಾಧ್ಯಕ್ಷ ಎಂ.ವಿ.ಶ್ರೀಧರ್, ಆನಂದ್‌ಗೌಡ, ಎಂ.ಕೃಷ್ಣಪ್ಪ ಹಾಗೂ ಮಹಾಲಕ್ಷ್ಮೀ ಲೇಔಟ್‌ ನಿವಾಸಿಗಳು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.