ಮಾಲೂರು: ಕೊರೊನಾ ವಾರಿಯರ್ಸ್ಗೆ ಲಸಿಕೆ ಹಾಕಲು ಪಟ್ಟಣದ ಸರ್ಕಾರಿ ಆಸ್ಪತ್ರೆ ಸೇರಿದಂತೆ ತಾಲ್ಲೂಕಿನ 6 ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ತಹಶೀಲ್ದಾರ್ ಮಂಜುನಾಥ್ ತಿಳಿಸಿದರು.
ತಾಲ್ಲೂಕಿನ ದೊಡ್ಡ ಶಿವಾರ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಕೋವಿಡ್ ಲಸಿಕೆ ಹಾಕುವ ಬಗ್ಗೆ ಆರೋಗ್ಯ ಇಲಾಖೆ ಹಮ್ಮಿಕೊಂಡಿದ್ದ ಅಣಕು ಪ್ರದರ್ಶನ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕೊರೊನಾ ಸೋಂಕಿಗೆ ತುರ್ತು ಲಸಿಕೆ ಹಾಕುವ ಅಭಿಯಾನಕ್ಕೆ ಸರ್ಕಾರಕ್ಕೆ ಮುಂದಾಗಿದೆ. ಮೊದಲನೇ ಹಂತದಲ್ಲಿ ಕೊರೊನಾ ವಾರಿಯರ್ಸ್ ಆಗಿ ದೇಶಾದ್ಯಂತ ಕೆಲಸ ಮಾಡುತ್ತಿರುವ ಆರೋಗ್ಯ ಇಲಾಖೆಯ ವೈದ್ಯರು, ಸಿಬ್ಬಂದಿ, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರಿಗೆ ಲಸಿಕೆ ಹಾಕಲು ತುರ್ತು ಅನುಮತಿ ನೀಡಲಾಗಿದೆ ಎಂದರು.
ತಾಲ್ಲೂಕು ಆರೋಗ್ಯ ಆಧಿಕಾರಿ ಡಾ.ಪ್ರಸನ್ನ ಮಾತನಾಡಿ, ಕೊರೊನಾ ಸೋಂಕನ್ನು ತಡೆಗಟ್ಟವ
ನಿಟ್ಟಿನಲ್ಲಿ ಶ್ರಮಿಸಿದ ಆರೋಗ್ಯ ಇಲಾಖೆಯ ಕಾರ್ಯಕರ್ತರಿಗೆ ಮೊದಲ ಹಂತದಲ್ಲಿ ಲಸಿಕೆ ಹಾಕಲು ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಸೇರಿದಂತೆ ತಾಲ್ಳೂಕಿನ ದೊಡ್ಡ ಶಿವಾರ, ತೋರ್ನಹಳ್ಳಿ, ಮಾಸ್ತಿ, ಟೇಕಲ್, ತೊರಲಕ್ಕಿ, ಲಕ್ಕೂರು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸಿದ್ಧತೆ ಮಾಡಿಕೊಳ್ಳಲಾಗಿದೆ.
1,300 ಮಂದಿ ಆರೋಗ್ಯ ಕಾರ್ಯಕರ್ತರು ಇದ್ದು, ಒಂದು ದಿನಕ್ಕೆ 100 ಮಂದಿಯಂತೆ 6 ಆರೋಗ್ಯ ಕೇಂದ್ರಗಳಲ್ಲಿ 600 ಮಂದಿಗೆ ಪ್ರತಿ ದಿನ ಲಸಿಕೆ ಹಾಕಲಾಗುವುದು
ಎಂದರು.
ತಾ.ಪಂ.ಇಒ ಕೃಷ್ಣಪ್ಪ, ಪಿಡಿಒ ರಾಮಕೃಷ್ಣ ರೆಡ್ಡಿ, ದೊಡ್ಡ ಶಿವಾರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.