ಕೋಲಾರ: ನಗರದ ಆರ್.ಜಿ.ಲೇಔಟ್ನಲ್ಲಿ ನಿರ್ಮಾಣವಾಗುತ್ತಿರುವ ವಾಲ್ಮೀಕಿ ಭವನದ ಕಾಮಗಾರಿಯನ್ನು ಜಿಲ್ಲಾಧಿಕಾರಿ ಜೆ.ಮಂಜುನಾಥ್ ಗುರುವಾರ ಪರಿಶೀಲಿಸಿದರು.
ಕಾಮಗಾರಿ ಸ್ಥಳಕ್ಕೆ ದಿಢೀರ್ ಭೇಟಿ ನೀಡಿದ ಜಿಲ್ಲಾಧಿಕಾರಿ, ‘ನಿರ್ಮಿತಿ ಕೇಂದ್ರದ ವತಿಯಿಂದ ವಾಲ್ಮೀಕಿ ಭವನ ನಿರ್ಮಿಸಲಾಗುತ್ತಿದೆ. ಮುಂದಿನ ವರ್ಷದಿಂದ ವಾಲ್ಮೀಕಿ ಜಯಂತಿಯನ್ನು ಈ ಭವನದಲ್ಲಿ ಆಚರಿಸಬೇಕು. ಗುತ್ತಿಗೆದಾರರು ಕಾಲಮಿತಿಯೊಳಗೆ ಕಾಮಗಾರಿ ಪೂರ್ಣಗೊಳಿಸಬೇಕು’ ಎಂದು ಸೂಚಿಸಿದರು.
‘ವಾಲ್ಮೀಕಿ ಭವನಕ್ಕೆ ಮೀಸಲಿಟ್ಟಿದ್ದ ಜಾಗ ಒತ್ತುವರಿಯಾಗಿತ್ತು. ಕೆಲ ದಿನದ ಹಿಂದೆ ಒತ್ತುವರಿ ತೆರವುಗೊಳಿಸಲಾಗಿದೆ. ಭವನದ ನೆಲ ಅಂತಸ್ತಿನ ಕಾಮಗಾರಿ ಪೂರ್ಣಗೊಂಡಿದೆ. ಜಿಲ್ಲಾ ಪಂಚಾಯಿತಿ ಸಿಇಒ ಅವರೊಂದಿಗೆ ತಾಲ್ಲೂಕಿನ ಜನ್ನಪ್ಪನಹಳ್ಳಿಗೆ ತೆರಳಿ ಗ್ರಾಮಸ್ಥರ ಸಮಸ್ಯೆ ಆಲಿಸಿದ್ದೇನೆ. ಮುದುವಾಡಿ ಗ್ರಾಮ ಪಂಚಾಯಿತಿ ಕಟ್ಟಡಕ್ಕೆ ಜಮೀನು ಮಂಜೂರು ಮಾಡುವ ನಿರ್ಧಾರ ಕೈಗೊಳ್ಳಲಾಯಿತು’ ಎಂದರು.
‘ನರೇಗಾ ಅಡಿ ಜಿಲ್ಲೆಯಾದ್ಯಂತ ಕಲ್ಯಾಣಿಗಳನ್ನು ಅಭಿವೃದ್ಧಿಪಡಿಸಲಾಗುತ್ತಿದ್ದು, ಇದರಿಂದ ಅಂತರ್ಜಲ ವೃದ್ಧಿಯಾಗಿ ನೀರಿನ ಸಮಸ್ಯೆ ಬಗೆಹರಿಯಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.