ADVERTISEMENT

ವಾಹನ ಅಪಘಾತ: ಗ್ರಾ.ಪಂ ಸದಸ್ಯ ಸಾವು

ಸುತ್ತಮುತ್ತಲ ಗ್ರಾಮಸ್ಥರಿಂದ ಹೆದ್ದಾರಿ ಬಂದ್

​ಪ್ರಜಾವಾಣಿ ವಾರ್ತೆ
Published 5 ಮೇ 2019, 12:49 IST
Last Updated 5 ಮೇ 2019, 12:49 IST
ಕೋಲಾರ ತಾಲ್ಲೂಕಿನ ಮಡೆರಹಳ್ಳಿ ಗೇಟ್‌ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ದ್ವಿಚಕ್ರವಾಹನಕ್ಕೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಗ್ರಾ.ಪಂ ಸದಸ್ಯ ರವಿ ಮೃತಪಟ್ಟಿರುವುದರನ್ನು ಖಂಡಿಸಿ ಸುತ್ತಮುತ್ತಲಿನ ಗ್ರಾಮಸ್ಥರು ಧರಣಿ ನಡೆಸಿದರು.
ಕೋಲಾರ ತಾಲ್ಲೂಕಿನ ಮಡೆರಹಳ್ಳಿ ಗೇಟ್‌ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ದ್ವಿಚಕ್ರವಾಹನಕ್ಕೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಗ್ರಾ.ಪಂ ಸದಸ್ಯ ರವಿ ಮೃತಪಟ್ಟಿರುವುದರನ್ನು ಖಂಡಿಸಿ ಸುತ್ತಮುತ್ತಲಿನ ಗ್ರಾಮಸ್ಥರು ಧರಣಿ ನಡೆಸಿದರು.   

ಕೋಲಾರ: ತಾಲ್ಲೂಕಿನ ಮಡೆರಹಳ್ಳಿ ಗೇಟ್‌ ಸಮೀಪ ಬೆಂಗಳೂರು ಚೆನ್ನೈ ರಾಷ್ಟ್ರೀಯ ಹೆದ್ದಾರಿ75ರಲ್ಲಿ ಅಪಚಿತ ವಾಹನ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು, ಮಡೆರಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯರ ರವಿ (40) ಭಾನುವಾರ ಮುಂಜಾನೆ ಮೃತಪಟ್ಟಿದ್ದು, ಸುತ್ತಮುತ್ತಲಿನ ಗ್ರಾಮಸ್ಥರು ಹೆದ್ದಾರಿ ಬಂದ್ ಮಾಡಿ ಧರಣಿ ನಡೆಸಿದರು.

ತಾಲ್ಲೂಕಿನ ಮಡೆರಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ರವಿ ಪತ್ನಿಯೊಂದಿಗೆ ಎಂದಿನಂತೆ ಭಾನುವಾರ ಮುಂಜಾನೆ ಗೇಟ್‌ನಲ್ಲಿರುವ ಅಂಗಡಿ ತೆರೆಯಲು ಹೋಗುತ್ತಿದ್ದ. ಈ ಸಂದರ್ಭದಲ್ಲಿ ಕೋಲಾರದಿಂದ ಬೆಂಗಳೂರಿಗೆ ಹೊರಟ್ಟಿದ್ದ ವಾಹನ ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ.

ಇದರಿಂದ ತೀವ್ರಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಆಕ್ರೋಶಗೊಂಡ ಮಡೆರಹಳ್ಳಿ, ಸುತ್ತಮುತ್ತಲಿನ ಗ್ರಾಮಸ್ಥರು ಸುಮಾರು ಒಂದು ತಾಸಿಗೂ ಹೆಚ್ಚು ಕಾಲ ಧರಣಿ ನಡೆಸಿದರು. ಇದರಿಂದ ಎರಡು ಕಿ.ಮಿನಷ್ಟು ವಾಹನ ಸಂಚಾರ ಸ್ಥಗಿತಗೊಂಡಿತ್ತು. ಇದರಿಂದ ಪ್ರಯಾಣಿಕರು ಪರದಾಡಬೇಕಾಯಿತು. ಧರಣಿನಿರತರನ್ನು ಮನವೊಲಿಸಲು ಮುಂದಾದ ಪೊಲೀಸರ ಪ್ರಯತ್ನ ವಿಫಲವಾಯಿತು.

ADVERTISEMENT

ಗೇಟ್‌ನಲ್ಲಿ ರಸ್ತೆ ದಾಟಲು ಸಮಸ್ಯೆ ಎದುರಾಗಿದೆ. ಈಗಾಗಲೇ ಅನೇಕ ಅಪಘಾತಗಳು ಸಂಭವಿಸಿ ಸಾಕಷ್ಟು ಮಂದಿ ಅಪಘಾತಕ್ಕೆ ಈಡಾಗಿದ್ದಾರೆ. ಇಲ್ಲಿ ಅಂಡರ್ ಪಾಸ್ ನಿರ್ಮಾಣ ಮಾಡುವಂತೆ ಒತ್ತಾಯಿಸಿದ್ದರೂ ಜಿಲ್ಲಾಡಳಿತ ಯಾವುದೇ ಕ್ರಮಕೈಗೊಂಡಿಲ್ಲ ಎಂದು ಧರಣಿನಿರತರು ದೂರಿದರು.

ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರತಿದಿನ ಸಾವಿರಾರು ವಾಹನಗಳು ಸಂಚರಿಸುತ್ತಿರುತ್ತವೆ. ನಾಗಲಾಪುರ, ಮಡೆರಹಳ್ಳಿ, ಕೆಂದಟ್ಟಿ, ಕೊಂಡರಾಜನಹಳ್ಳಿ ಬಳಿ ರಸ್ತೆ ದಾಟಲು ಅಂಡರ್ ಪಾಸ್ ವ್ಯವಸ್ಥೆಯಿಲ್ಲ. ವಾಹನಗಳು ಅತಿ ವೇಗದಿಂದ ಸಂಚರಿಸುದರಿಂದ ರಸ್ತೆ ದಾಟಲು ಸಮಸ್ಯೆಯಾಗುತ್ತದೆ ಎಂದು ಬೇಸರ ವ್ಯಕ್ತಪಡಿಸಿ, ಜಿಲ್ಲಾಧಿಕಾರಿ ಸ್ಥಳಕ್ಕೆ ಆಗಮಿಸಬೇಕು ಎಂದು ಪಟ್ಟು ಹಿಡಿದರು.

‘ಹೆದ್ದಾರಿಯಲ್ಲಿನ ಗೇಟ್‌ಗಳಲ್ಲಿ ಎಚ್ಚರಿಕೆಯ ಸೂಚನಾ ಫಲಕಗಳನ್ನು ಅಳವಡಿಸಿಲ್ಲ. ಹೆದ್ದಾರಿ ಪ್ರಾಧಿಕಾರದವರು ಅವೈಜ್ಞಾನಿಕವಾಗಿ ರಸ್ತೆ ನಿರ್ಮಾಣ ಮಾಡಿ ಸಾರ್ವಜನಿಕರ ಜೀವನದ ಜತೆಗೆ ಚೆಲ್ಲಾಟವಾಡುತ್ತಿದ್ದಾರೆ’ ಎಂದು ಆರೋಪಿಸಿದರು.

ಸ್ಥಳಕ್ಕೆ ಜಿಲ್ಲಾಧಿಕಾರಿ ಜೆ.ಮಂಜುನಾಥ್ ಭೇಟಿ ನೀಡಿ ಧರಣಿ ನಿರತರೊಂದಿಗೆ ಚರ್ಚೆ ನಡೆಸಿ ಅಂಡರ್ ಪಾಸ್ ನಿರ್ಮಾಣ ಮಾಡುವ ಭರವಸೆ ನೀಡದ ಮೇಲೆ ಧರಣಿ ಕೈಬಿಟ್ಟರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.