ಕೆಜಿಎಫ್: ‘ಬದುಕು ಹಸನಾಗಿಸಲು ಮತ್ತು ಎಲ್ಲ ಸ್ತರದಲ್ಲಿಯೂ ಅಭಿವೃದ್ಧಿಯಾಗಲು ಯುವ ಜನರು ಯಾವುದಾದರೂ ಒಂದು ಕೌಶಲದಲ್ಲಿ ಪರಿಣಿತರಾಗಿರಬೇಕು. ಈ ನಿಟ್ಟಿನಲ್ಲಿ ಯುವಜನತೆ ಕಾರ್ಯಪ್ರವೃತ್ತರಾಗಬೇಕು’ ಎಂದು ಜಿಲ್ಲಾ ಕೌಶಲ ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ್ ಹೇಳಿದರು.
ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳವಾರ ನಡೆದ ವಿದ್ಯಾನಿಧಿ ಯೋಜನೆ ನೋಂದಣಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಅರ್ಹ ಫಲಾನುಭವಿಗಳಿಗೆ ಸರ್ಕಾರ ಎರಡು ವರ್ಷ ಅನುದಾನ ನೀಡುತ್ತದೆ. ಉದ್ಯೋಗ ಇಲ್ಲದ ಸಮಯದಲ್ಲಿ ಈ ಹಣ ಬಳಸಿಕೊಂಡು ವಿವಿಧ ಕ್ಷೇತ್ರಗಳಲ್ಲಿ ಕೌಶಲ ಪಡೆಯಬೇಕು’ ಎಂದು ಸಲಹೆ ನೀಡಿದರು.
ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಮುಖ್ಯಮಂತ್ರಿಗಳ ಕೌಶಲ ಅಭಿವೃದ್ಧಿ ಯೋಜನೆ ಜಾರಿಗೆ ತರಲಾಗಿದೆ. ಈ ಯೋಜನೆಯಲ್ಲೂ ತರಬೇತಿ ಪಡೆಯಬಹುದು. ಎಲ್ಲ ಸರ್ಕಾರಿ ಕಾಲೇಜುಗಳಲ್ಲಿ ನೇಮಕಾತಿ ಅಧಿಕಾರಿಗಳು ಇರುತ್ತಾರೆ. ಅವರನ್ನು ಸಂಪರ್ಕಿಸುವ ಮೂಲಕ ಸರ್ಕಾರದ ಯೋಜನೆಗಳನ್ನು ಪಡೆಯಬಹುದು ಎಂದು ಹೇಳಿದರು.
ವಿದ್ಯಾರ್ಥಿಗಳು ಉದ್ಯೋಗಕ್ಕೆ ಕಷ್ಟಪಡುವ ಬದಲು, ಉದ್ಯೋಗ ನೀಡುವ ಸ್ಥಾನ ಪಡೆಯಲು ಪ್ರಯತ್ನ ಪಡಬೇಕು. ಡಿಪ್ಲೊಮೊ ಮತ್ತು ಪದವಿ ಪಡೆದ ವಿದ್ಯಾರ್ಥಿಗಳು ಕೌಶಲದಲ್ಲಿ ಪರಿಣಿತರಿದ್ದರೆ, ಎಲ್ಲೆಡೆ ಮನ್ನಣೆ ದೊರೆಯುತ್ತದೆ ಎಂಬುದನ್ನು ಮರೆಯಬಾರದು ಎಂದು ಶಾಸಕಿ ಎಂ.ರೂಪಕಲಾ ತಿಳಿಸಿದರು.
ಸರ್ಕಾರ ಜಾರಿಗೆ ತಂದಿರುವ ವಿದ್ಯಾನಿಧಿ ಯೋಜನೆಯಡಿ ತಾಲ್ಲೂಕಿನಲ್ಲಿ ನೋಂದಣಿ ಕಡಿಮೆ ಇದೆ. ಅದರ ಉಪಯೋಗ ಪಡೆಯಲು ಅರ್ಹರಿರುವ ವಿದ್ಯಾವಂತರ ಸಂಖ್ಯೆ ಹೆಚ್ಚಿದ್ದರೂ, ನೋಂದಣಿ ಮಾಡಿಸಲು ಆಸಕ್ತಿ ವಹಿಸುತ್ತಿಲ್ಲ. ಯುವ ಸಮೂಹ ಸರ್ಕಾರದ ಯೋಜನೆ ಪಡೆದು ತಂದೆ–ತಾಯಿಗೆ ಆರ್ಥಿಕ ಹೊರೆ ಕಡಿಮೆ ಮಾಡಬೇಕು ಎಂದು ಗ್ಯಾರಂಟಿ ಯೋಜನೆಯ ತಾಲ್ಲೂಕು ಘಟಕದ ಅಧ್ಯಕ್ಷ ರಾಧಾಕೃಷ್ಣರೆಡ್ಡಿ ಮನವಿ ಮಾಡಿದರು.
ಪ್ರಾಂಶುಪಾಲ ಪ್ರೊ. ನಾರಾಯಣ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ವೆಂಕಟೇಶಪ್ಪ, ನಗರಸಭೆ ಅಧ್ಯಕ್ಷೆ ಇಂದಿರಾಗಾಂಧಿ, ಸ್ಥಾಯಿ ಸಮಿತಿ ಅಧ್ಯಕ್ಷ ವಳ್ಳಲ್ ಮುನಿಸ್ವಾಮಿ, ಗ್ಯಾರಂಟಿ ಯೋಜನೆ ಸದಸ್ಯರು ವೇದಿಕೆಯಲ್ಲಿ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.