ADVERTISEMENT

ಕೆಜಿಎಫ್‌ | ನೀತಿ ಸಂಹಿತೆ ಉಲ್ಲಂಘನೆ: ಕಾರ್ಯನಿರ್ವಹಣಾಧಿಕಾರಿ ಅಮಾನತು

​ಪ್ರಜಾವಾಣಿ ವಾರ್ತೆ
Published 21 ಮಾರ್ಚ್ 2024, 15:28 IST
Last Updated 21 ಮಾರ್ಚ್ 2024, 15:28 IST
ಕೆಜಿಎಫ್‌ ಪ್ರಸನ್ನ ಲಕ್ಷ್ಮಿ ವೆಂಕಟರಮಣಸ್ವಾಮಿ ದೇವಾಲಯದ ಧಾರ್ಮಿಕ ಕಾರ್ಯಕ್ರಮದಲ್ಲಿ ಸಚಿವ ರಾಮಲಿಂಗರೆಡ್ಡಿ ಅವರ ಜತೆಯಲ್ಲಿ ಇರುವ ಕಾರ್ಯನಿರ್ವಹಣಾಧಿಕಾರಿ ಸುಬ್ರಹ್ಮಣಿ
ಕೆಜಿಎಫ್‌ ಪ್ರಸನ್ನ ಲಕ್ಷ್ಮಿ ವೆಂಕಟರಮಣಸ್ವಾಮಿ ದೇವಾಲಯದ ಧಾರ್ಮಿಕ ಕಾರ್ಯಕ್ರಮದಲ್ಲಿ ಸಚಿವ ರಾಮಲಿಂಗರೆಡ್ಡಿ ಅವರ ಜತೆಯಲ್ಲಿ ಇರುವ ಕಾರ್ಯನಿರ್ವಹಣಾಧಿಕಾರಿ ಸುಬ್ರಹ್ಮಣಿ   

ಕೆಜಿಎಫ್‌: ಸಚಿವ ರಾಮಲಿಂಗರೆಡ್ಡಿ ಅವರ ಜತೆಯಲ್ಲಿ ದೇವಾಲಯ ಕಾರ್ಯಕ್ರಮದಲ್ಲಿ ಭಾಗವಹಿಸಿದ ಮುಜರಾಯಿ ಇಲಾಖೆ ಕಾರ್ಯನಿರ್ವಹಣಾಧಿಕಾರಿ ಸುಬ್ರಹ್ಮಣಿ ಅವರನ್ನು ಚುನಾವಣೆ ನೀತಿ ಸಂಹಿತಿ ಉಲ್ಲಂಘನೆ ಆರೋಪದ ಅಡಿಯಲ್ಲಿ ಜಿಲ್ಲಾಧಿಕಾರಿ ಅಕ್ರಂಪಾಷ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

ನಗರದ ಪ್ರಸನ್ನ ಲಕ್ಷ್ಮಿ ವೆಂಕಟರಮಣಸ್ವಾಮಿ ಬ್ರಹ್ಮರಥೋತ್ಸವ ಅಂಗವಾಗಿ ಮಂಗಳವಾರ ನಡೆದ ಶಿಬಿಕ ವಾಹನೋತ್ಸವದಲ್ಲಿ ಸಚಿವ ರಾಮಲಿಂಗರೆಡ್ಡಿ ಭಾಗವಹಿಸಿದ್ದರು. ದೇವಾಲಯ ಆವರಣದಲ್ಲಿ ಪತ್ರಕರ್ತರೊಂದಿಗೆ ರಾಜಕೀಯ ವಿಷಯವಾಗಿ ಮಾತನಾಡಿದ್ದರು. ಅವರನ್ನು ದೇವಾಲಯದ ಕಾರ್ಯನಿರ್ವಹಣಾಧಿಕಾರಿ ಸುಬ್ರಹ್ಮಣಿ ಸ್ವಾಗತಿಸಿದ್ದರು. ಸಚಿವರು ದೇವಾಲಯದಲ್ಲಿ ಪ್ರವೇಶ ಮಾಡುವಾಗ ಅವರ ಜತೆ ಕಾರ್ಯನಿರ್ವಹಣಾಧಿಕಾರಿ ಇದ್ದ ಫೋಟೊ ಮತ್ತು ಸುದ್ದಿಯನ್ನು ‘ಪ್ರಜಾವಾಣಿ’ ಪ್ರಕಟಿಸಿತ್ತು.

ಪ್ರಸನ್ನ ಲಕ್ಷ್ಮಿ ವೆಂಕಟರಮಣಸ್ವಾಮಿ ದೇವಾಲಯವು ಮುಜರಾಯಿ ಇಲಾಖೆಯ ಎ ದರ್ಜೆ ದೇವಾಲಯವಾಗಿದೆ. ಅದರ ಕಾರ್ಯನಿರ್ವಹಣಾಧಿಕಾರಿ ಅವರು ನೀತಿ ಸಂಹಿತೆ ಜಾರಿಯಾದ ಮೇಲೆ ಯಾವುದೇ ಕಾರ್ಯಕ್ರಮ ನಡೆಸಬೇಕಾದ್ದಲ್ಲಿ ಸಂಬಂಧಪ‍ಟ್ಟ ಚುನಾವಣಾಧಿಕಾರಿಯಿಂದ ಅನುಮತಿ ಪಡೆದು ನಂತರ ಕಾರ್ಯಕ್ರಮ ಆಯೋಜಿಸಬೇಕಾಗಿದೆ. ಆದರೆ, ಇಒ ಅವರಿಂದ ಆಹ್ವಾನ ಪತ್ರಿಕೆ ಮುದ್ರಿಸಲು ಮತ್ತು ದೇವಾಲಯದ ಆವರಣದಲ್ಲಿ ವೇದಿಕೆ ಕಾರ್ಯಕ್ರಮ ನಡೆಸಲು ಸಹ ಅನುಮತಿ ಪಡೆದಿಲ್ಲ. ‘ಪ್ರಜಾವಾಣಿ’ ಪತ್ರಿಕೆಯಲ್ಲಿ ಅಧಿಕಾರಿಯು ಸಚಿವರ ಜತೆ ನೇರವಾಗಿ ಭಾಗವಹಿಸಿರುವುದು ಕಂಡು ಬಂದಿದೆ.

ADVERTISEMENT

ಸುಬ್ರಹ್ಮಣಿ ಸರ್ಕಾರಿ ನೌಕರರಾಗಿದ್ದು, ಪ್ರಜಾ ಪ್ರತಿನಿಧಿ ಕಾಯ್ದೆ 1951ರ ಪ್ರಕರಣ 134ರ ಅಡಿಯಲ್ಲಿ ನೀತಿ ಸಂಹಿತಿ ಉಲ್ಲಂಘನೆ ಮಾಡಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಹಾಗಾಗಿ ಸುಬ್ರಹ್ಮಣಿ ಅವರನ್ನು ಸರ್ಕಾರಿ ಸೇವೆಯಿಂದ ಅಮಾನತುಗೊಳಿಸಿ, ಕಾರ್ಯ ವಿಮುಕ್ತಿಗೊಳಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಅಮಾನತು ಆದ ಅಧಿಕಾರಿ ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರ ಬಳಿ ವರದಿ ಮಾಡಿಕೊಳ್ಳಲು ಆದೇಶದಲ್ಲಿ ಸೂಚಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.