ಅಮಾನತು
ಕೋಲಾರ: ಮುಳಬಾಗಿಲು ತಾಲ್ಲೂಕಿನ ಬಾಳಸಂದ್ರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಯನ್ನು ಥಳಿಸಿದ ಪ್ರಕರಣದಲ್ಲಿ ವಾರ್ಡನ್ ಮಹೇಶ್ ಗಿರಡ್ಡಿ ಎಂಬುವರನ್ನು ಅಮಾನತುಗೊಳಿಸಲಾಗಿದೆ.
‘ಪ್ರಜಾವಾಣಿ’ಯಲ್ಲಿ ಮಂಗಳವಾರ ಪ್ರಕಟವಾಗಿದ್ದ ‘ಬಾಸುಂಡೆ ಬರುವಂತೆ ವಿದ್ಯಾರ್ಥಿಗೆ ಥಳಿತ’ ವರದಿ ಆಧರಿಸಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ (ಕ್ರೈಸ್) ಕಾರ್ಯನಿರ್ವಾಹಕ ನಿರ್ದೇಶಕ ಪಿ.ಎಸ್.ಕಾಂತರಾಜು ಆದೇಶ ಹೊರಡಿಸಿದ್ದಾರೆ.
ಅಮಾನತು ಆದೇಶದಲ್ಲಿ ‘ಪ್ರಜಾವಾಣಿ’ ವರದಿ ಉಲ್ಲೇಖಿಸಿದ್ದು, ಪ್ರಭಾರ ಪ್ರಾಂಶುಪಾಲ ಕುಮಾರ್ ರಾಜ್ ಅವರಿಗೆ ಷೋಕಾಸ್ ನೋಟಿಸ್ ನೀಡಲಾಗಿದೆ. ದೈಹಿಕವಾಗಿ ಥಳಿಸಿ ಕರ್ತವ್ಯ ಲೋಪವೆಸಗಿರುವುದು ಕಂಡುಬಂದಿರುವುದರಿಂದ ಈ ಕ್ರಮ ವಹಿಸಲಾಗಿದೆ ಎಂದಿದ್ದಾರೆ.
ವಸತಿ ಶಾಲೆಯಲ್ಲಿ ಮಹೇಶ್ ಗಿರಡ್ಡಿ ಕಂಪ್ಯೂಟರ್ ಆಪರೇಟರ್ ಹಾಗೂ ಪ್ರಭಾರ ವಾರ್ಡನ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. 6ನೇ ತರಗತಿ ವಿದ್ಯಾರ್ಥಿ ಅಂಜನ್ ಕುಮಾರ್ ಮೇಲೆ ಬೆಲ್ಟ್ನಿಂದ ಹಲ್ಲೆ ನಡೆಸಿದ್ದಾರೆ ಎಂದು ತಾಯಿ ದೂರಿದ್ದರು.
ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಎಂ.ಶ್ರೀನಿವಾಸನ್ ವಸತಿ ನಿಲಯ ಹಾಗೂ ವಿದ್ಯಾರ್ಥಿಯ ಊರಿಗೆ ಭೇಟಿ ನೀಡಿ ಪರಿಶೀಲಿಸಿದರು.
‘ಪ್ರಾಂಶುಪಾಲರಿಗೆ ಷೋಕಾಸ್ ನೋಟಿಸ್ ನೀಡಿದ್ದು, ವರ್ಗಾವಣೆ ಮಾಡಲಾಗುವುದು’ ಎಂದು ‘ಪ್ರಜಾವಾಣಿ’ಗೆ ತಿಳಿಸಿದರು.
ಇದೇ ವಸತಿ ಶಾಲೆಯ ಮೂವರು ವಿದ್ಯಾರ್ಥಿನಿಯರು ಕಳೆದ ವರ್ಷ ಮುರುಡೇಶ್ವರ ಪ್ರವಾಸದ ವೇಳೆ ಸಿಬ್ಬಂದಿ ನಿರ್ಲಕ್ಷ್ಯದ ಕಾರಣ ಸಮುದ್ರ ಪಾಲಾಗಿದ್ದರು. ಆಗ ಪ್ರಾಂಶುಪಾಲ ಹಾಗೂ ಇತರ ಸಿಬ್ಬಂದಿಯನ್ನು ಅಮಾನತು ಮಾಡಲಾಗಿತ್ತು.
ಪ್ರಜಾವಾಣಿಯಲ್ಲಿ ಪ್ರಕಟವಾಗಿದ್ದ ವರದಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.