ಕೋಲಾರ: ‘ಶಾಸಕ ಕೆ.ಶ್ರೀನಿವಾಸಗೌಡರು ಎದುರಾಳಿ ಅಭ್ಯರ್ಥಿ ಪರ ಪ್ರಚಾರ ನಡೆಸದೆ ತಟಸ್ಥರಾಗಿ ಉಳಿದಿದ್ದರಿಂದ ನನ್ನ ಗೆಲುವಿನ ಹಾದಿ ಸುಗಮವಾಯಿತು’ ಎಂದು ಕೋಚಿಮುಲ್ ನೂತನ ನಿರ್ದೇಶಕ ಡಿ.ವಿ.ಹರೀಶ್ ಹೇಳಿದರು.
ಕೋಚಿಮುಲ್ ಚುನಾವಣಾ ಫಲಿತಾಂಶ ಘೋಷಣೆಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ‘ಮತದಾರರು ನನ್ನ ಮೇಲೆ ನಂಬಿಕೆಯಿಟ್ಟು ಆಶೀರ್ವಾದ ಮಾಡಿ ಗೆಲ್ಲಿಸಿದ್ದಾರೆ’ ಎಂದು ಸಂತಸ ವ್ಯಕ್ತಪಡಿಸಿದರು.
‘ನನ್ನ ಗೆಲುವಿಗೆ ಪ್ರತ್ಯಕ್ಷವಾಗಿ ಹಾಗೂ ಪರೋಕ್ಷವಾಗಿ ಸಹಕರಿಸಿದ ಪ್ರತಿಯೊಬ್ಬರಿಗೂ ಋಣಿಯಾಗಿದ್ದೇನೆ. ವಿಧಾನಸಭಾ ಅಧ್ಯಕ್ಷರಾದ ಕೆ.ಆರ್.ರಮೇಶ್ಕುಮಾರ್, ಶಾಸಕರಾದ ಕೆ.ಶ್ರೀನಿವಾಸಗೌಡ, ಎಸ್.ಎನ್.ನಾರಾಯಣಸ್ವಾಮಿ, ಮಾಜಿ ಶಾಸಕ ಕೊತ್ತೂರು ಮಂಜುನಾಥ್, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಗೋವಿಂದಗೌಡ, ನಿರ್ದೇಶಕ ಅನಿಲ್ಕುಮಾರ್ ನನ್ನ ಗೆಲುವಿಗೆ ಸಹಕಾರ ನೀಡಿದ್ದಾರೆ’ ಎಂದು ಸ್ಮರಿಸಿದರು.
‘ಎದುರಾಳಿ ಅಭ್ಯರ್ಥಿ ಆರ್.ರಾಮಕೃಷ್ಣೇಗೌಡರು ಈ ಹಿಂದೆ ಕೋಚಿಮುಲ್ ನಿರ್ದೇಶಕರಾಗಿ ಉತ್ತಮ ಕೆಲಸ ಮಾಡಿದ್ದಾರೆ. ಶ್ರೀನಿವಾಸಗೌಡರ ಬೆಂಬಲದಿಂದಾಗಿ ನಾನು ಜಯ ಗಳಿಸಿದ್ದೇನೆ. ನನ್ನ ಗೆಲುವೇ ಶ್ರೀನಿವಾಸಗೌಡರ ಗೆಲುವು. ಪ್ರತಿಯೊಂದು ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಭೇಟಿ ನೀಡಿ ಅಲ್ಲಿನ ಸಮಸ್ಯೆ ಅರಿತು ಬಗೆಹರಿಸುತ್ತೇನೆ’ ಎಂದು ಭರವಸೆ ನೀಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.