ಮಾಲೂರು: ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಜನಸಾಮಾನ್ಯರು ಸಂಪೂರ್ಣವಾಗಿ ತೊಡಗಿಸಿಕೊಂಡರೆ ಮಾತ್ರ ಯೋಜನೆಗಳು ಯಶಸ್ವಿ ಆಗಲು ಸಾಧ್ಯ ಎಂದು ಸಂಸದ ಎಸ್.ಮುನಿಸ್ವಾಮಿ ತಿಳಿಸಿದರು.
ಸಂಸದರ ಆದರ್ಶ ಗ್ರಾಮ ಯೋಜನೆಯಡಿ ಆಯ್ಕೆ ಮಾಡಿದ ಬನಹಳ್ಳಿ ಗ್ರಾಮದಲ್ಲಿ ಯೋಜನೆಯ ಅನುಷ್ಠಾನದ ಬಗ್ಗೆ ನಡೆದ ಜಿಲ್ಲಾಮಟ್ಟದ ಅಧಿಕಾರಿಗಳ ಹಾಗೂ ಗ್ರಾಮಸ್ಥರ ಸಭೆಯಲ್ಲಿ ಮಾತನಾಡಿದರು.
ಜನಪ್ರತಿನಿಧಿಗಳು ಸರ್ಕಾರದ ಅಧಿಕಾರಿಗಳಿಗಿಂತ, ಜನಸಾಮಾನ್ಯರ ಸಹಭಾಗಿತ್ವ ಅತೀ ಮುಖ್ಯ. ಆ ನಿಟ್ಟಿನಲ್ಲಿ ಸಂಸದರ ಆದರ್ಶ ಗ್ರಾಮ ಯೋಜನೆ ಜನರ ಯೋಜನೆಯಾಗಿ ರೂಪುಗೊಂಡಿದೆ ಎಂದರು.
ಗ್ರಾಮಗಳಲ್ಲಿ ಕೇಂದ್ರ ಪುರಸ್ಕೃತ ಪೂರ್ಣಗೊಂಡ ಹಾಗೂ ಪ್ರಗತಿಯಲ್ಲಿರುವ, ಮುಂದೆ ಆಗಬೇಕಾದ ಕಾಮಗಾರಿ ಮತ್ತು ಯೋಜನೆಗಳ ಬಗ್ಗೆ ಚರ್ಚಿಸಿ, ಅಗತ್ಯ ಕ್ರಮ ಕೈಗೊಂಡು ಎಲ್ಲ ಯೋಜನೆಗಳು ಜನರಿಗೆ ತಲುಪುವಂತೆ ಅಧಿಕಾರಿಗಳು ಮಾಡಬೇಕು ಎಂದು ಸೂಚಿಸಿದರು.
3 ತಿಂಗಳಲ್ಲಿ ಕೇಂದ್ರದಿಂದ ಅಧಿಕಾರಿಗಳ ತಂಡ ಜಿಲ್ಲೆಗೆ ಭೇಟಿ ನೀಡಲಿದೆ. ಜಿಲ್ಲಾ ಮಟ್ಟದ ಅಧಿಕಾರಿಗಳು ಮುತುವರ್ಜಿವಹಿಸಿ ಆದರ್ಶ ಗ್ರಾಮ ಅಭಿವೃದ್ಧಿಗೆ ಸಹಕಾರ ನೀಡಬೇಕು ಎಂದು ಹೇಳಿದರು.
ಜಿ.ಪಂ.ಅಧ್ಯಕ್ಷ ವೆಂಕಟೇಶ್, ಉಪಾಧ್ಯಕ್ಷೆ ಯಶೋದಮ್ಮ, ಹೆಚ್ಚುವರಿ ಜಿಲ್ಲಾಧಿಕಾರಿ ಶಿವಸ್ವಾಮಿ, ತಾ.ಪಂ ಸದಸ್ಯ ರಮೇಶ್ ಗೌಡ, ರಾಮಕೃಷ್ಣಪ್ಪ, ನೋಡಲ್ ಅಧಿಕಾರಿ ಮುನಿಕೃಷ್ಣಪ್ಪ , ಜಿ.ಪಂ.ಉಪಕಾರ್ಯದರ್ಶಿ ಸಂಜೀವಪ್ಪ, ಇ.ಒ.ಕೃಷ್ಣಪ್ಪ, ತಹಶೀಲ್ದಾರ್ ಮಂಜುನಾಥ್, ಬನಹಳ್ಳಿ ಗ್ರಾ.ಪಂ. ಪಿಡಿಒ ಅಮರೇಶ್ ಬಾಬು, ಸರ್ಕಾರಿ ನೌಕರಿ ಸಂಘದ ಅಧ್ಯಕ್ಷ ಮುನೇಗೌಡ ಭಾಗವಹಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.