ಕೋಲಾರ: ‘ರಾಜ್ಯ ಬಿಜೆಪಿ ಸರ್ಕಾರದಲ್ಲಿ ಯಾವುದೇ ಗೊಂದಲವಿಲ್ಲ. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಪೂರ್ಣಾವಧಿ ಪೂರೈಸುತ್ತಾರೆ’ ಎಂದು ಬಿಜೆಪಿ ರಾಜ್ಯ ಘಟಕದ ಕಾರ್ಯದರ್ಶಿ ಎನ್.ರವಿಕುಮಾರ್ ಹೇಳಿದರು.
ಇಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ವಿಪಕ್ಷಗಳ ಕೆಲ ನಾಯಕರು ರಾಜ್ಯ ಸರ್ಕಾರದ ವಿರುದ್ಧ ಅಪಪ್ರಚಾರ ಮಾಡಿ ಜನರ ದಿಕ್ಕು ತಪ್ಪಿಸುತ್ತಿದ್ದಾರೆ. ಆದರೆ, ಜನರು ಅವರ ಮಾತುಗಳಿಗೆ ಕಿವಿಗೊಡುವುದಿಲ್ಲ’ ಎಂದರು.
‘ನಮ್ಮ ಪಕ್ಷದ ಕೆಲ ಶಾಸಕರು ಸಚಿವ ಸ್ಥಾನ ಬೇಕೆಂದು ಆಗ್ರಹಿಸಿರುವುದು ನಿಜ. ಸಚಿವ ಸಂಪುಟ ವಿಸ್ತರಣೆ ಸಂಬಂಧ ಪಕ್ಷದ ಹೈಕಮಾಂಡ್ ಇನ್ನೂ ಸೂಚನೆ ನೀಡಿಲ್ಲ. ಇದೀಗ ರಾಜ್ಯಸಭೆ ಹಾಗೂ ವಿಧಾನ ಪರಿಷತ್ಗೆ ಚುನಾವಣೆ ಘೋಷಣೆಯಾಗಿದ್ದು, ತಮ್ಮ ಸಹೋದರನಿಗೆ ಟಿಕೆಟ್ ಕೊಡುವಂತೆ ಉಮೇಶ್ ಕತ್ತಿ ಬೇಡಿಕೆ ಇಟ್ಟಿದ್ದಾರೆ. ಜತೆಗೆ ಅವರ ಕ್ಷೇತ್ರಕ್ಕೆ ಸೌಕರ್ಯ ಕೇಳಿದ್ದಾರೆ’ ಎಂದು ಸ್ಪಷ್ಟಪಡಿಸಿದರು.
‘ರಾಜ್ಯ ಸರ್ಕಾರ ಕೊರೊನಾ ಸೋಂಕಿನ ವಿರುದ್ಧ ನಿರಂತರ ಹೋರಾಟ ನಡೆಸುತ್ತಿದೆ. ಪ್ರಧಾನಿ ನರೇಂದ್ರ ಮೋದಿಯವರು ಆರಂಭದಲ್ಲಿ ಲಾಕ್ಡೌನ್ ಘೋಷಿಸುವ ಮೂಲಕ ಸೋಂಕಿನ ವಿರುದ್ಧ ಜಾಗೃತಿ ಮೂಡಿಸುವ ಕೆಲಸ ಮಾಡಿದರು. ನಂತರ ಹಂತ ಹಂತವಾಗಿ ಲಾಕ್ಡೌನ್ ಸಡಿಲಿಕೆ ಮಾಡಿದರು. ಜನ ಪರಿಸ್ಥಿತಿಯ ಗಂಭೀರತೆ ಅರಿಯದ ಕಾರಣ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ’ ಎಂದು ಆತಂಕ ವ್ಯಕ್ತಪಡಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.