ಕೋಲಾರ: ‘ಸಹಕಾರಿಗಳ ಆರೋಗ್ಯ ರಕ್ಷಣೆಗೆ ನೆರವಾಗುವ ಯಶಸ್ವಿನಿ ಆರೋಗ್ಯ ವಿಮಾ ಯೋಜನೆ ಮರುಜಾರಿ ಸಾಧ್ಯತೆ ಹೆಚ್ಚಿದ್ದು, ಈ ಸಂಬಂಧ ಮುಖ್ಯಮಂತ್ರಿಗಳು ರಾಜ್ಯದ ಎಲ್ಲಾ ಡಿಸಿಸಿ ಬ್ಯಾಂಕ್ಗಳ ಅಧ್ಯಕ್ಷರ ಸಭೆ ಕರೆದಿದ್ದಾರೆ’ ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಎಂ.ಗೋವಿಂದಗೌಡ ತಿಳಿಸಿದರು.
ಇಲ್ಲಿ ಮಂಗಳವಾರ ನಡೆದ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ವಿವಿಧೋದ್ದೇಶ ಸಹಕಾರ ಸಂಘದ ಸದಸ್ಯರ ವಾರ್ಷಿಕ ಮಹಾಸಭೆಯಲ್ಲಿ ಮಾತನಾಡಿ, ‘ಸಹಕಾರಿ ರಂಗದ ಗಂಧವೇ ತಿಳಿಯದವರು ಸ್ವಾರ್ಥ ರಾಜಕೀಯಕ್ಕಾಗಿ ಮಾಡುವ ಟೀಕೆಗಳನ್ನು ಮೆಟ್ಟಿನಿಂತು ಕಟ್ಟಕಡೆಯ ವ್ಯಕ್ತಿಗೂ ಸಾಲ ಸೌಲಭ್ಯ ತಲುಪಿಸುವ ಸಂಕಲ್ಪದೊಂದಿಗೆ ಸಂಘ ಮುನ್ನಡೆಸಿ’ ಎಂದು ಕಿವಿಮಾತು ಹೇಳಿದರು.
‘ಶಾಸಕ ರಮೇಶ್ಕುಮಾರ್ ಆರೋಗ್ಯ ಸಚಿವರಾಗಿದ್ದಾಗ ಪ್ರತಿಯೊಬ್ಬರೂ ಸರ್ಕಾರಿ ಆಸ್ಪತ್ರೆಗೆ ಹೋಗಬೇಕೆಂದು ಆಯುಷ್ಮಾನ್ ಕರ್ನಾಟಕ ಯೋಜನೆ ಜಾರಿಗೆ ಮುಂದಾದರು. ಆದರೆ, ಇಂದು ಉತ್ತಮ ವೈದ್ಯಕೀಯ ಸೌಲಭ್ಯಕ್ಕೆ ಯಶಸ್ವಿನಿ ಯೋಜನೆ ಅಗತ್ಯವಿದೆ’ ಎಂದು ಅಭಿಪ್ರಾಯಪಟ್ಟರು.
‘ಸಹಕಾರಿ ರಂಗ ಮುಳ್ಳಿನ ಹಾಸಿಗೆ ಇದ್ದಂತೆ. ಸಹಕಾರಿ ವ್ಯವಸ್ಥೆಯಲ್ಲಿ ಎಷ್ಟೇ ಕೆಲಸ ಮಾಡಿದರೂ ಟೀಕೆ ಹೆಚ್ಚು. ಈ ವ್ಯವಸ್ಥೆ ತಪ್ಪು ಹುಡುಕುವ ಜಾಗವಾಗಿದ್ದು, ಎಚ್ಚರಿಕೆಯಿಂದ ಕೆಲಸ ಮಾಡಬೇಕು’ ಎಂದು ಸಲಹೆ ನೀಡಿದರು.
ಸಂಘದ ಅಧ್ಯಕ್ಷ ಕೆ.ಎಸ್.ಗಣೇಶ್ ಲೆಕ್ಕಪರಿಶೋಧನಾ ವರದಿ ಮಂಡಿಸಿದರು. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ವಿ.ಮುನಿರಾಜು, ಜಿಲ್ಲಾ ಕಾರ್ಯನಿರತ ಪತ್ರಕರ್ತರ ವಿವಿಧೋದ್ದೇಶ ಸಹಕಾರ ಸಂಘದ ಪದಾಧಿಕಾರಿಗಳು ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.