ADVERTISEMENT

ಆಸರೆ ಯೋಜನೆ: 158 ಮನೆ ವಿತರಣೆ

​ಪ್ರಜಾವಾಣಿ ವಾರ್ತೆ
Published 26 ಜನವರಿ 2011, 19:40 IST
Last Updated 26 ಜನವರಿ 2011, 19:40 IST
ಆಸರೆ ಯೋಜನೆ: 158 ಮನೆ ವಿತರಣೆ
ಆಸರೆ ಯೋಜನೆ: 158 ಮನೆ ವಿತರಣೆ   

ಕೊಪ್ಪಳ: ಆಸರೆ ಯೋಜನೆಯಡಿ ಜಿಲ್ಲೆಯಲ್ಲಿ 2905 ಮನೆಗಳನ್ನು ನಿರ್ಮಿಸಲು ಕ್ರಮ ಕೈಗೊಳ್ಳಲಾಗಿದ್ದು, ಈ ಪೈಕಿ2257 ಮನೆಗಳ ಕಾಮಗಾರಿ ಆರಂಭಗೊಂಡಿದೆ ಎಂದು ಜಿಲ್ಲಾ ಉಸ್ತುವಾರಿ ಹಾಗೂ ಸಹಕಾರ ಸಚಿವ ಲಕ್ಷ್ಮಣ ಎಸ್.ಸವದಿ ಹೇಳಿದರು.

ಅವರು ನಗರದಲ್ಲಿರುವ ಜಿಲ್ಲಾ ಕ್ರೀಡಾಂಗಣದಲ್ಲಿ ಬುಧವಾರ ಗಣರಾಜ್ಯೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾ ಸಶಸ್ತ್ರ ಪಡೆ, ಪೊಲೀಸ್ ಹಾಗೂ ಶಾಲಾ ವಿದ್ಯಾರ್ಥಿಗಳಿಂದ ಗೌರವ ವಂದನೆ ಸ್ವೀಕರಿಸಿದ ನಂತರ ಮಾತನಾಡಿದರು.

ನೆರೆ ಪೀಡಿತ 17 ಗ್ರಾಮಗಳನ್ನು ಸ್ಥಳಾಂತರಿಸುವ ಈ ಯೋಜನೆಯಡಿ ಮನೆಗಳನ್ನು ನಿರ್ಮಿಸಲು 6.94 ಕೋಟಿ ರೂಪಾಯಿ ವೆಚ್ಚದಲ್ಲಿ 244 ಎಕರೆ ಖಾಸಗಿ ಜಮೀನು ಖರೀದಿಸಲಾಗಿದೆ. ಅಲ್ಲದೇ, ಈಗಾಗಲೇ 158 ಮನೆಗಳನ್ನು ನಿರ್ಮಿಸಿ ಫಲಾನುಭವಿಗಳಿಗೆ ಹಂಚಲಾಗಿದೆ ಎಂದೂ ಹೇಳಿದರು.

ರಾಷ್ಟ್ರೀಯ ಕುಡಿಯುವ ನೀರಿನ ಮಿಷನ್‌ನಡಿ ಜಿಲ್ಲೆಯಲ್ಲಿ 87.95 ಕೋಟಿ ರೂಪಾಯಿಗಳ ವೆಚ್ಚದಲ್ಲಿ 478 ಕಾಮಗಾರಿಗಳ ಕ್ರಿಯಾ ಯೋಜನೆಗೆ ಅನುಮೋದನೆ ದೊರೆತಿದೆ. ಈ ಪೈಕಿ ಮೊದಲ ಕಂತಿನ ಹಣ 40 ಕೋಟಿ ರೂಪಾಯಿ ಬಿಡುಗಡೆಯಾಗಿದ್ದು ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದು ಹೇಳಿದರು.

ಶಾಸಕ ಸಂಗಣ್ಣ ಕರಡಿ, ವಿಧಾನ ಪರಿಷತ್ ಸದಸ್ಯ ಹಾಲಪ್ಪ ಆಚಾರ್, ಕರಕುಶಲ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಲಲಿತಾರಾಣಿ ಶ್ರೀರಂಗದೇವರಾಯಲು, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಕೆ.ರಾಘವೇಂದ್ರ ಹಿಟ್ನಾಳ್, ಉಪಾಧ್ಯಕ್ಷ ಬಿ.ಬಸವರಾಜಪ್ಪ, ನಗರಸಭೆ ಅಧ್ಯಕ್ಷ ಸುರೇಶ ದೇಸಾಯಿ, ಜಿಲ್ಲಾಧಿಕಾರಿ ಕೆ.ಎಸ್.ಸತ್ಯಮೂರ್ತಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಚ್.ಮೂರ್ತಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಈಶ್ವರಚಂದ್ರ ವಿದ್ಯಾಸಾಗರ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.