ಕೊಪ್ಪಳ: ಕಾನೂನು ಪಾಲಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ಕಾನೂನನ್ನು ಅರಿತು, ಬೇರೆಯವರಿಗೆ ಈ ಬಗ್ಗೆ ತಿಳಿಸಬೇಕು ಎಂದು ಜಿಲ್ಲಾ ಪ್ರಧಾನ ಹಾಗೂ ಸೆಷನ್ಸ್ ನ್ಯಾಯಾಧೀಶೆ ವಿಜಯಲಕ್ಷ್ಮೀ ಉಪನಾಳ ಹೇಳಿದರು.
ನಗರದ ಗವಿಸಿದ್ದೇಶ್ವರ ಕಾಲೇಜಿನಲ್ಲಿ ಶುಕ್ರವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾ ಕಾನೂನು ಕಾಲೇಜಿನ ಕಾನೂನು ಸಂಘದ ಆಶ್ರಯದಲ್ಲಿ ನಡೆದ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಸಮಾನತೆ ಮತ್ತು ನ್ಯಾಯ ಸಾಧಿಸುವಲ್ಲಿ ನಾವು ವಿಫಲರಾಗಿದ್ದೇವೆ. ಕಾನೂನಿನ ಜ್ಞಾನ ಹೆಚ್ಚಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು. ಸಿವಿಲ್ ನ್ಯಾಯಾಧೀಶ ಬಿ. ದಶರಥ ಮಾತನಾಡಿ, ಪೋಕ್ಸೊ ಕಾಯ್ದೆ ತಂದರೂ ಅಪರಾಧಗಳು ತಪ್ಪಿಲ್ಲ. ಈ ನಿಟ್ಟಿನಲ್ಲಿ ಹೊಸ ಕಾಯ್ದೆಗಳ ಬಗ್ಗೆ ತಿಳಿದುಕೊಳ್ಳಬೇಕು ಎಂದರು.
ಸಿವಿಲ್ ನ್ಯಾಯಾಧೀಶ ವಿಜಯಕುಮಾರ ಕನ್ನೂರ್ ಮಾತನಾಡಿ, ಕಾನೂನು ಸೇವಾ ಪ್ರಾಧಿಕಾರದಿಂದ ಉಚಿತವಾಗಿ ಕಾನೂನು ನೆರವು ಶಿಕ್ಷಣ ನೀಡಲಾಗುತ್ತದೆ. ವಿದ್ಯಾರ್ಥಿಗಳಿಗೆ ಕಾನೂನಿನ ಅರಿವು ಮೂಡಿಸಲಾಗಿತ್ತಿದೆ. ಅನಕ್ಷರತೆಯ ಕಾರಣಕ್ಕೆ ಸರ್ಕಾರದ ಯೋಜನೆಗಳನ್ನು ಜನ ಉಪಯೋಗಿಸಿಕೊಳ್ಳುತ್ತಿಲ್ಲ.
ಅವಶ್ಯಕವಿರುವ ಕಾನೂನುಗಳನ್ನು ತಿಳಿದುಕೊಂಡು, ಶೋಷಣೆಯಿಂದ ಮುಕ್ತರಾಗಬೇಕು. ಸರ್ಕಾರದ ಸೌಲಭ್ಯ ಪಡೆಯಬೇಕು ಎಂದರು.
ವಿದ್ಯಾರ್ಥಿಗಳಾದ ಎಚ್.ರಾಜೇಂದ್ರ ಪ್ರಸಾದ್, ಶಿವಕುಮಾರ ಎನ್., ಮಹಾಂತೇಶ ಬಿ. ಉಪನ್ಯಾಸ ನೀಡಿದರು. ಪ್ರಾಚಾರ್ಯ ಮನೋಹರ ಎಸ್ ದಾದ್ಮಿ ಅಧ್ಯಕ್ಷತೆ ವಹಿಸಿದ್ದರು. ಕಾನೂನು ಕಾಲೇಜಿನ ಪ್ರಾಚಾರ್ಯ ಡಾ.ಬಿ.ಎಸ್. ಹನಸಿ, ಎಸ್.ಎಂ.ಪಾಟೀಲ್, ಪ್ರೊ.ಶರಣಬಸಪ್ಪ ಬಿಳಿಎಲಿ ಇದ್ದರು.