ADVERTISEMENT

ಕೆಳ ಹಂತದಿಂದ ಪಕ್ಷ ಬಲವರ್ಧನೆ

​ಪ್ರಜಾವಾಣಿ ವಾರ್ತೆ
Published 16 ಜೂನ್ 2011, 10:50 IST
Last Updated 16 ಜೂನ್ 2011, 10:50 IST

ಕೊಪ್ಪಳ: ಬೂತ್‌ಮಟ್ಟದಿಂದ ಪಕ್ಷವನ್ನು ಸಂಘಟಿಸುವ ಜೊತೆಗೆ ಈ ಭಾಗದ ಜನರು ಎದುರಿಸುತ್ತಿರುವ ಸಮಸ್ಯೆಗಳನ್ನು ಎತ್ತಿಕೊಂಡು ಹೋರಾಟ ನಡೆಸಲು ನಿರ್ಧರಿಸಲಾಗಿದೆ ಎಂದು ಜೆಡಿಎಸ್ ಮುಖಂಡ ಪಕ್ಷದ ಹೈದರಾಬಾದ ಕರ್ನಾಟಕ ಪ್ರದೇಶದ ಕೋಟ್ ಕಮಿಟಿ ಅಧ್ಯಕ್ಷ ಸೂರ್ಯನಾರಾಯಣ ರೆಡ್ಡಿ ತಿಳಿಸಿದರು.

ಅವರು ನಗರದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಕೋರ್ ಕಮಿಟಿ ಸಭೆಯ ನಂತರ ಕೊಪ್ಪಳ ಮೀಡಿಯಾ ಕ್ಲಬ್‌ನಲ್ಲಿ ನಡದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ರಾಜ್ಯ ಸರ್ಕಾರ ವಿವಿಧ ರಂಗಗಳಲ್ಲಿ ವಿಫಲಗೊಂಡಿದೆ. ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ಇನ್ನೊಂದೆಡೆ ಹಲವಾರು ಭ್ರಷ್ಟಾಚಾರ ಪ್ರಕರಣಗಳಲ್ಲಿ ಸಿಲುಕಿಕೊಂಡಿದೆ. ಈ ಎಲ್ಲಾ ವಿಷಯಗಳನ್ನು ತೆಗೆದುಕೊಂಡು ಪಕ್ಷ ಜನರ ಬಳಿಗೆ ಹೋಗಲು ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಹೇಳಿದರು.

ಕೊಪ್ಪಳ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಕೋರ್ ಕಮಿಟಿ ಸಭೆಯನ್ನು ನಗರದಲ್ಲಿ ಆಯೋಜಿಸಲಾಗುತ್ತದೆ ಎಂಬ ಅಭಿಪ್ರಾಯಗಳನ್ನು ತಳ್ಳಿಹಾಕಿದ ಅವರು, ಪಕ್ಷದ ಇತರ ಭಾಗಗಳ ಕೋರ್ ಕಮಿಟಿ ಸಭೆಗಳನ್ನು ವಿವಿಧ ಜಿಲ್ಲೆಗಳಲ್ಲಿ ಶೀಘ್ರವೇ ಸಂಘಟಿಸಲಾಗುತ್ತಿದೆ ಎಂದರು.
ಇಂದಿನ ಸಭೆಯಲ್ಲಿ ಪಕ್ಷದ ಸಂಘಟನೆ ಕುರಿತಂತೆ ಹಲವಾರು ವಿಷಯಗಳನ್ನು ಚರ್ಚಿಸಲಾಗಿದೆ. ಅದರಲ್ಲಿ ಕೊಪ್ಪಳ ವಿಧಾನಸಭೆಯ ಉಪಚುನಾವಣೆಯೂ ಒಂದು ಎಂದು ಹೇಳಿದರು.

ಹೈದರಾಬಾದ ಕರ್ನಾಟಕ ಪ್ರದೇಶದ 40 ವಿಧಾನಸಭಾ ಕ್ಷೇತ್ರಗಳಲ್ಲಿ ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳು ಕುರಿತು ಚರ್ಚೆ ನಡೆಸಲಾಗಿದೆ. ಪಕ್ಷಕ್ಕಾಗಿ ದುಡಿಯುವ ಹಾಗೂ ಕಳಕಳಿ ಇರುವ ನಾಯಕರನ್ನು ಚುನಾವಣೆಗೆ ಸಜ್ಜುಗೊಳಿಸುವ ಕಾರ್ಯಕ್ಕೆ ಚುರುಕು ನೀಡಬೇಕು.
 
ಮುಂಬರುವ ಚುನಾವಣೆಗಾಗಿ ಪ್ರಣಾಳಿಕೆ ಸಿದ್ಧಪಡಿಸುವ ಸಂದರ್ಭದಲ್ಲಿ ಇಂದಿನ ಸಭೆಯಲ್ಲಿ ಚರ್ಚಿತ ವಿಷಯಗಳು ಮಹತ್ತರ ಪಾತ್ರ ವಹಿಸಲಿವೆ ಎಂದು ಪಕ್ಷದ ಹಿರಿಯ ಮುಖಂಡ ಬಸನಗೌಡ ಪಾಟೀಲ ಯತ್ನಾಳ್ ಹೇಳಿದರು.

ಹೈದರಾಬಾದ ಕರ್ನಾಟಕ ಪ್ರದೇಶದ ಅಭಿವೃದ್ಧಿಗಾಗಿ ಸಂವಿಧಾನದ 371ನೇ ಕಲಂ ತಿದ್ದುಪಡಿಗೆ ಆಗ್ರಹಿಸಿ ನಡೆಯುವ ಹೋರಾಟಕ್ಕೆ ಪಕ್ಷದ ಬೆಂಬಲ ಇದೆ ಎಂದು ಸಿಂಧನೂರು ಶಾಸಕ ವೆಂಕಟರಾವ್ ನಾಡಗೌಡ ಹೇಳಿದರು.

ಈ ವರೆಗೆ ನಡೆದ ಹೋರಾಟದಲ್ಲಿ ಪಕ್ಷದ ನಾಯಕರು, ಕಾರ್ಯಕರ್ತರು ಪಾಲ್ಗೊಂಡಿದ್ದಾರೆ. ಅಧಿವೇಶನ ಮುಗಿದ ನಂತರ ಮತ್ತೊಮ್ಮೆ ದೆಹಲಿಗೆ ನಿಯೋಗ ಒಯ್ಯುವುದಾಗಿ ಮುಖ್ಯಮಂತ್ರಿ ಹೇಳಿದ್ದಾರೆ. ಆ ಸಂದರ್ಭದಲ್ಲಿ ಆಹ್ವಾನ ಬಂದರೆ ನಿಯೋಗದೊಂದಿಗೆ ತೆರಳಲು ತಾವು ಸಿದ್ಧ ಎಂದೂ ಅವರು ಸ್ಪಷ್ಟಪಡಿಸಿದರು.

ಶಾಸಕರಾದ ಸುಭಾಷ್ ಗುತ್ತೇದಾರ, ಮಲ್ಲಿಕಾರ್ಜುನ ಖೂಬಾ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಮಾಲತಿ ನಾಯಕ, ನಗರಸಭೆ ಮಾಜಿ ಅಧ್ಯಕ್ಷ ಚಂದ್ರಶೇಖರ ಕವಲೂರು, ದೇವೇಂದ್ರಪ್ಪ ಬಳ್ಳೂಟಗಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.