ADVERTISEMENT

ಕೊಪ್ಪಳ ಜಿಲ್ಲೆಗೆ ಕೃಷ್ಣಾ ನೀರು-ಯೋಜನೆ

​ಪ್ರಜಾವಾಣಿ ವಾರ್ತೆ
Published 19 ಫೆಬ್ರುವರಿ 2011, 7:05 IST
Last Updated 19 ಫೆಬ್ರುವರಿ 2011, 7:05 IST

ಕೊಪ್ಪಳ:  ಕೃಷ್ಣಾ ನದಿ ನೀರು ಹಂಚಿಕೆ ಸಂಬಂಧ ನ್ಯಾಯ ಮಂಡಳಿಯು ತೀರ್ಪು ನೀಡಿದ್ದು, ರಾಜ್ಯಕ್ಕೆ 177 ಟಿ.ಎಂ.ಸಿ.ಯಷ್ಟು ನೀರನ್ನು ಹಂಚಿಕೆ ಮಾಡಿದೆ. ಹಂಚಿಕೆಯಾಗಿರುವ ಈ ನೀರನ್ನು ಬಳಸಿಕೊಂಡು ಜಿಲ್ಲೆಯಲ್ಲಿ ನೀರಾವರಿ ಯೋಜನೆ ಅನುಷ್ಠಾನಗೊಳಿಸುವ ಕುರಿತಂತೆ ಚರ್ಚಿಸಲು ಜಿಲ್ಲೆಯ ಯಲಬುರ್ಗಾ ಪಟ್ಟಣದಲ್ಲಿ ಫೆ. 19ರಂದು ವಿಚಾರ ಸಂಕಿರಣ ಆಯೋಜಿಸಲಾಗಿದೆ.ಮಾಜಿ ಸಚಿವ ಬಸವರಾಜ ರಾಯರೆಡ್ಡಿ ಅಧ್ಯಕ್ಷತೆಯಲ್ಲಿ ರಚನೆಗೊಂಡಿರುವ ಕೃಷ್ಣಾ (ಬಿ ಸ್ಕೀಂ) ನೀರಾವರಿ ಯೋಜನಾ ಹೋರಾಟ ಸಮಿತಿ ಹಾಗೂ ಕುಕನೂರು-ಯಲಬುರ್ಗಾ ಬ್ಲಾಕ್ ಕಾಂಗ್ರೆಸ್ ಸಮಿತಿ ಸಂಯುಕ್ತವಾಗಿ ಸಂಘಟಿಸಿರುವ ಈ ವಿಚಾರ ಸಂಕಿರಣ ಅಂದು ಬೆಳಿಗ್ಗೆ 10 ಗಂಟೆಗೆ ಬುದ್ಧ-ಬಸವ-ಅಂಬೇಡ್ಕರ್ ಭವನದಲ್ಲಿ ನಡೆಯಲಿದೆ.

ಕೃಷ್ಣಾ ಬಿ ಸ್ಕೀಂ ನೀರಾವರಿ ಯೋಜನೆ ಹಾಗೂ ಕೊಪ್ಪಳ ಜಿಲ್ಲೆಗೆ ನೀರಾವರಿ ಸೌಲಭ್ಯ ಎಂಬ ವಿಷಯ ಕುರಿತು ನೀರಾವರಿ ಇಲಾಖೆಯ ನಿವೃತ್ತ ಕಾರ್ಯದರ್ಶಿ ಕ್ಯಾಪ್ಟನ್ ರಾಜಾರಾವ್, ಮಾಜಿ ಸಂಸದ ಪಿ.ಕೋದಂಡರಾಮಯ್ಯ ಪ್ರಧಾನ ಭಾಷಣ ಮಾಡುವರು. ಈ ವಿಚಾರ ಸಂಕಿರಣವನ್ನು ಮಾಜಿ ನೀರಾವರಿ ಸಚಿವ ಎಚ್.ಕೆ.ಪಾಟೀಲ ಅವರು ಉದ್ಘಾಟಿಸುವರು. ಶಾಸಕ ಅಮರೇಗೌಡ ಬಯ್ಯಾಪುರ, ಮಾಜಿ ಶಾಸಕ ಹಾಗೂ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೆ.ಬಸವರಾಜ ಹಿಟ್ನಾಳ್, ಮಾಜಿ ಸಚಿವ ಇಕ್ಬಾಲ್ ಅನ್ಸಾರಿ, ಮಲ್ಲಿಕಾರ್ಜುನ ನಾಗಪ್ಪ, ಮಾಜಿ ಶಾಸಕರಾದ ಹಸನ್‌ಸಾಬ ದೋಟಿಹಾಳ, ಎಚ್.ಆರ್.ಶ್ರೀನಾಥ್ ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿ ಸದಸ್ಯರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು ಎಂದು ಸಮಿತಿಯ ಪ್ರಧಾನ ಕಾರ್ಯದರ್ಶಿ ಮಹೇಶ್ ಹಳ್ಳಿ ತಿಳಿಸಿದ್ದಾರೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.