ಕೊಪ್ಪಳ: ವಿಧಾನಸಭೆ ಸಾರ್ವತ್ರಿಕ ಚುನಾವಣೆ ನಿಮಿತ್ತ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿದ್ದು, ಅಕ್ರಮಗಳನ್ನು ಪತ್ತೆ ಹಚ್ಚಲು ಜಿಲ್ಲೆಯಾದ್ಯಂತ ಚೆಕ್ಪೋಸ್ಟ್ ಗಳನ್ನು ಸ್ಥಾಪಿಸಿ, ಸ್ಥಿರ ಕಣ್ಗಾವಲು ತಂಡವನ್ನು ನಿಯೋಜಿಸಲಾಗಿದೆ.ಜಿಲ್ಲಾಧಿಕಾರಿ ಎಂ.ಕನಗವಲ್ಲಿ ಸೋಮವಾರ ಯಲಬುರ್ಗಾ ತಾಲ್ಲೂಕಿನ ಸಂಕನೂರ ಗ್ರಾಮ ಬಳಿಯ ಚೆಕ್ಪೋಸ್ಟ್ಗೆ ಆಕಸ್ಮಿಕ ಭೇಟಿ ನೀಡಿ, ಕಾರ್ಯತಂಡದ ಕಾರ್ಯವೈಖರಿಯನ್ನು ಖುದ್ದು ಪರಿಶೀಲಿಸಿದರು.ಅಲ್ಲಿನ ಚೆಕ್ಪೋಸ್ಟ್ ಗೆ ಆಕಸ್ಮಿಕ ಭೇಟಿ ನೀಡಿದ ಜಿಲ್ಲಾಧಿಕಾರಿ, ಚೆಕ್ಪೋಸ್ಟ್ ಮೂಲಕ ಸಂಚರಿಸುವ ಲಾರಿ, ಕಾರು, ಟಾಟಾ ಏಸ್ ಸೇರಿದಂತೆ ಎಲ್ಲ ಬಗೆಯ ವಾಹನಗಳ ತಪಾಸಣೆ ಮಾಡಿಸಿದರು.
ನೀತಿ ಸಂಹಿತೆ ಕಟ್ಟುನಿಟ್ಟಾಗಿ ಪಾಲಿಸುವುದು ಹಾಗೂ ಅಕ್ರಮ ಚಟುವಟಿಕೆ ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ಒಟ್ಟು 11 ಕಡೆಗಳಲ್ಲಿ ಚೆಕ್ಪೋಸ್ಟ್ಗಳನ್ನು ಸ್ಥಾಪಿಸಲಾಗಿದೆ. ಚುನಾವಣೆ ಸಂದರ್ಭದಲ್ಲಿ ರಾಜಕೀಯ ಪಕ್ಷಗಳು ಅಥವಾ ಇದಕ್ಕೆ ಸಂಬಂಧಿತರಿಂದ ಅಕ್ರಮ ಹಣ ಸಾಗಾಣಿಕೆ, ಮತದಾರರಿಗೆ ಆಮಿಷ ಒಡ್ಡಲು ವಿವಿಧ ಬಗೆಯ ಸಾಮಗ್ರಿಗಳ ಸಾಗಾಣಿಕೆ, ಮದ್ಯ ಸಾಗಾಣಿಕೆ ಸೇರಿದಂತೆ ನೀತಿ ಸಂಹಿತೆ ಉಲ್ಲಂಘನೆಯ ಪ್ರಕರಣಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಚೆಕ್ಪೋಸ್ಟ್ ಗಳಲ್ಲಿ ವಾಹನಗಳ ತಪಾಸಣಾ ಕಾರ್ಯ ನಡೆಸಲಾಗುತ್ತಿದೆ.
ವಾಹನಗಳ ತಪಾಸಣೆ ಕೈಗೊಳ್ಳಬೇಕು. ಅನುಮಾನಾಸ್ಪದ ಚಟುವಟಿಕೆ ಕಂಡುಬಂದರೆ, ಕೂಡಲೇ ಕಾನೂನು ಕ್ರಮ ಕೈಗೊಳ್ಳಬೇಕು. ಚುನಾವಣೆಯನ್ನು ಮುಕ್ತ ಹಾಗೂ ನ್ಯಾಯ ಸಮ್ಮತವಾಗಿ ನಡೆಸುವ ಉದ್ದೇಶದಿಂದ ಜಿಲ್ಲಾಡಳಿತ ಎಲ್ಲ ಬಗೆಯ ಸಿದ್ಧತೆ ಕೈಗೊಂಡು, ಈಗಾಗಲೇ ಕಾರ್ಯತತ್ಪರವಾಗಿದೆ. ಈ ದಿಸೆಯಲ್ಲಿ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಇಂತಹ ಚೆಕ್ಪೋಸ್ಟ್ ಗಳಿಗೆ ಆಕಸ್ಮಿಕ ಭೇಟಿ ನೀಡಿ, ಕಾರ್ಯವೈಖರಿ ಪರಿಶೀಲಿಸುವ ಕಾರ್ಯ ಕೈಗೊಂಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.