ADVERTISEMENT

ಮತದಾನ ಪ್ರಜೆಗಳ ಆದ್ಯ ಕರ್ತವ್ಯ

ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಓಟರ್‌ಗ್ರಾಮ್‌: ಮತದಾನ ಜಾಗೃತಿ

​ಪ್ರಜಾವಾಣಿ ವಾರ್ತೆ
Published 26 ಮಾರ್ಚ್ 2019, 14:44 IST
Last Updated 26 ಮಾರ್ಚ್ 2019, 14:44 IST
ಕೊಪ್ಪಳದ ವೈದ್ಯಕೀಯ ಕಾಲೇಜಿನಲ್ಲಿ ಮಂಗಳವಾರ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಲೋಕಸಭಾ ಸಾರ್ವತ್ರಿಕ ಚುನಾವಣೆ ನಿಮಿತ್ತ ನಡೆದ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆರ್.ಎಸ್.ಪೆದ್ದಪ್ಪಯ್ಯ ಮಾತನಾಡಿದರು
ಕೊಪ್ಪಳದ ವೈದ್ಯಕೀಯ ಕಾಲೇಜಿನಲ್ಲಿ ಮಂಗಳವಾರ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಲೋಕಸಭಾ ಸಾರ್ವತ್ರಿಕ ಚುನಾವಣೆ ನಿಮಿತ್ತ ನಡೆದ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆರ್.ಎಸ್.ಪೆದ್ದಪ್ಪಯ್ಯ ಮಾತನಾಡಿದರು   

ಕೊಪ್ಪಳ: ಮತದಾನ ಮಾಡುವುದರ ಮೂಲಕ ಎಲ್ಲರೂ ತಮ್ಮ-ತಮ್ಮ ಆದ್ಯ ಕರ್ತವ್ಯವನ್ನು ಪಾಲಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆರ್.ಎಸ್.ಪೆದ್ದಪ್ಪಯ್ಯ ಹೇಳಿದರು.

ನಗರದ ವೈದ್ಯಕೀಯ ಕಾಲೇಜಿನಲ್ಲಿ ಮಂಗಳವಾರ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಲೋಕಸಭಾ ಸಾರ್ವತ್ರಿಕ ಚುನಾವಣೆ ನಿಮಿತ್ತ ಮತದಾನ ಮಾಡುವಂತೆ ಪ್ರೇರೇಪಿಸಲು ಓಟರ್‌ ಗ್ರಾಮ ಅಳವಡಿಸಿ, ಇವಿಎಂ ಮತದಾನ ಯಂತ್ರ ಮತ್ತು ವಿವಿ ಪ್ಯಾಟ್ ಮತ ಖಾತ್ರಿ ಯಂತ್ರಗಳ ಬಳಕೆ ಕುರಿತು ನಡೆದ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ, ಪ್ರಜೆಗಳೇ ಪ್ರಭುಗಳು, ಪ್ರಜೆಗಳ ಪ್ರತಿನಿಧಿಗಳನ್ನು ಆರಿಸಿ ಕಳುಹಿಸುವ ಮಹತ್ತರ ಜವಾಬ್ದಾರಿ ಈ ದೇಶದ ಪ್ರತಿಯೊಬ್ಬ ಮತದಾರನ ಮೇಲಿದ್ದು, ಈ ಜವಾಬ್ದಾರಿಯ ಮಹತ್ವವನ್ನು ಅರಿತು, ಎಲ್ಲ ಮತದಾರರು ತಪ್ಪದೆ ತಮ್ಮ ಮತ ಚಲಾಯಿಸಬೇಕು ಎಂದು ಮನವಿ ಮಾಡಿದರು.

ADVERTISEMENT

ನಮ್ಮದು ಸುಭದ್ರವಾದ ದೊಡ್ಡ ದೇಶ ಎಂದು ನಾವು ಹೇಳುತ್ತೇವೆ. ಆದರೆ ಮತದಾನ ಪ್ರಮಾಣ ಮಾತ್ರ ಕಡಿಮೆಯಾಗುತ್ತಿದೆ. ಆದ್ದರಿಂದ ಕಡ್ಡಾಯವಾಗಿ ಮತದಾನ ಮಾಡಿ ಮತ್ತು ಮಾಡಿಸಿ. ಎಲ್ಲರೂ ಕಡ್ಡಾಯವಾಗಿ ಮತ ಚಲಾಯಿಸಲು ಜಿಲ್ಲಾಡಳಿತದಿಂದ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಜಿಲ್ಲೆಯಾದ್ಯಂತ ಹಮ್ಮಿಕೊಳ್ಳುತ್ತಿದೆ. ಜಿಲ್ಲೆಯ ಎಲ್ಲ ಪದವಿ ಕಾಲೇಜುಗಳಲ್ಲಿ ಇಂತಹ ಅರಿವು ಕಾರ್ಯಕ್ರಮಗಳನ್ನು ಜಿಲ್ಲಾ ಸ್ವೀಪ್ ಸಿಮಿತಿಯಿಂದ ಆಯೋಜಿಸಲಾಗುತ್ತಿದೆ. ಸಾಮಾಜಿಕ ಮಾಧ್ಯಮಗಳ ಮೂಲಕವೂ ಸಹ ಮತದಾನ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.

ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಮತದಾನ ಪ್ರಮಾಣವನ್ನು ಹೆಚ್ಚಿಸಲು ಜಿಲ್ಲಾ ಸ್ವೀಪ್ ಸಮಿತಿಯು ಹಲವು ವೈವಿಧ್ಯಮಯ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಯುವ ಮತದಾರರನ್ನು ಸೆಳೆಯಲು ಸಾಮಾಜಿಕ ಜಾಲತಾಣದ ಸದುಪಯೋಗ ಪಡೆಯಲು ಮುಂದಾಗಿದ್ದು, ‘ಓಟರ್‌ಗ್ರಾಮ್’ ಎಂಬ ಸೆಲ್ಫಿ ಫ್ರೇಂ ಅನ್ನು ಬಳಸಿಕೊಂಡು, ಯುವ ಮತದಾರರಲ್ಲಿ ಮತದಾನದ ಜಾಗೃತಿ ಮೂಡಿಸಲು ಮುಂದಾಗಿದ್ದು, ಓಟರ್‌ಗ್ರಾಮ್ ಸೆಲ್ಫಿ ಫ್ರೇಂ ಚಟುವಟಿಕೆಗೆ ಇಂದಿನಿಂದ ಚಾಲನೆ ನೀಡಿದೆ. ನಾವು ಮತದಾನ ಮಾಡುವೆವು ನೀವು ಸಹ ಮತದಾನ ಮಾಡಿ ಎಂದು ತಮ್ಮ ಕೈಯ ತೋರು ಬೆರಳನ್ನು ತೋರಿಸಿದರು.

ಇದರಿಂದ ಉತ್ತೇಜನಗೊಂಡ ಕಿಮ್ಸ್‌ನ ವೈದ್ಯಕೀಯ ವಿದ್ಯಾರ್ಥಿಗಳು ಕೂಡ, ಮುಗಿಬಿದ್ದು, ಓಟರ್‌ಗ್ರಾಮ್ ಫ್ರೇಂನಲ್ಲಿ ಫೋಟೋ ತೆಗೆಯಿಸಿಕೊಂಡು, ಸಾಮಾಜಿಕ ಜಾಲತಾಣದಲ್ಲಿ ಫೋಟೋ ಶೇರ್ ಮಾಡಿದರು.

ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಕೃಷ್ಣಮೂರ್ತಿ ದೇಸಾಯಿ ಮತದಾನದ ಪ್ರತಿಜ್ಞಾವಿಧಿ ಬೋಧಿಸಿದರು. ಕಿಮ್ಸ್ ಕಾಲೇಜಿನ ಸಹಾಯಕ ಉಪನ್ಯಾಸಕ ಮಂಜುನಾಥ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಟಿ.ಕೃಷ್ಣಮೂರ್ತಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.