ADVERTISEMENT

ಶ್ರವಣ ನ್ಯೂನತೆಯುಳ್ಳವರ ಮೆರವಣಿಗೆ

​ಪ್ರಜಾವಾಣಿ ವಾರ್ತೆ
Published 17 ಜುಲೈ 2012, 10:15 IST
Last Updated 17 ಜುಲೈ 2012, 10:15 IST

ಕೊಪ್ಪಳ: ಶ್ರವಣ ನ್ಯೂನತೆಗಳನ್ನು ಉಳ್ಳ ವ್ಯಕ್ತಿಗಳ ಸಮಸ್ಯೆಗಳನ್ನು ನಿವಾರಿಸಬೇಕು ಎಂದು ಒತ್ತಾಯಿಸಿ ನಗರದಲ್ಲಿ ಸೋಮವಾರ ಶ್ರವಣ ನ್ಯೂನತೆಯುವಳ್ಳವರ ಮತ್ತು ಅವರ ಪೋಷಕರ ಒಕ್ಕೂಟದ ಸದಸ್ಯರು ಪ್ರತಿಭಟನಾ ಮೆರವಣಿಗೆ ನಡೆಸಿದರು.

ಪ್ರತಿಭಟನಾಕಾರರು ಇಲ್ಲಿನ ಕೇಂದ್ರೀಯ ಬಸ್ ನಿಲ್ದಾಣದಿಂದ ಮೆರವಣಿಗೆ ಆರಂಭಿಸಿದರು. ಜಿಲ್ಲಾಡಳಿತ ಭವನಕ್ಕೆ ತೆರಳಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಒಕ್ಕೂಟದ ಅಧ್ಯಕ್ಷ ಶಿವಣ್ಣ ಅಂಗಡಿ ಮಾತನಾಡಿ, ಜಿಲ್ಲೆಯ ಸರ್ಕಾರಿ ಮತ್ತು ಖಾಸಗಿ ಶಾಲೆಗಳಲ್ಲಿ ಓದುತ್ತಿರುವ ಶ್ರವಣ ನ್ಯೂನತೆಯುಳ್ಳ ಮಕ್ಕಳಿಗಾಗಿ ಸನ್ನೆ ಭಾಷೆ ತರಬೇತಿ ಹೊಂದಿದ ಶಿಕ್ಷಕರನ್ನು ನೇಮಕ ಮಾಡಬೇಕು ಎಂದು ಒತ್ತಾಯಿಸಿದರು.

ಸರ್ಕಾರಿ ಮತ್ತು ಖಾಸಗಿ ವಲಯದ ಸಂಸ್ಥೆಗಳಲ್ಲಿ ಶ್ರವಣ ನ್ಯೂನತೆಯುಳ್ಳವರಿಗೆ ಉದ್ಯೋಗ ಕಲ್ಪಿಸಬೇಕು, ಶ್ರವಣ ನ್ಯೂನತೆ ಇರುವ ಮಕ್ಕಳಿಗೆ ಹಾಗೂ ವ್ಯಕ್ತಿಗಳಿಗೆ ಮಾಸಾಶನ ನೀಡಬೇಕು, ಜಿಲ್ಲೆಯ ಎಲ್ಲ ಆಸ್ಪತ್ರೆಗಳಲ್ಲಿ ಕಿವಿ-ಮೂಗು-ಗಂಟಲು ತಜ್ಞರನ್ನು ನೇಮಿಕ ಮಾಡಬೇಕು ಎಂದು ಒತ್ತಾಯಿಸಿದರು.

ಜಿಲ್ಲಾ ಮತ್ತು ತಾಲ್ಲೂಕು ಆಸ್ಪತ್ರೆಗಳಲ್ಲಿ ಆಡಿಯೋಗ್ರಾಫ್ ವ್ಯವಸ್ಥೆ ಮಾಡಬೇಕು, ಶ್ರವಣ ನ್ಯೂನತೆಯುಳ್ಳ ವ್ಯಕ್ತಿಗಳ ಹಕ್ಕುಗಳು ಹಾಗೂ ಅವರ ಕಲ್ಯಾಣಕ್ಕಾಗಿ ರೂಪಿಸಿರುವ ಯೋಜನೆ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ವಾರ್ತಾ ಮತ್ತು ಪ್ರಚಾರ ಇಲಾಖೆಯಿಂದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂಬುದು ಸೇರಿದಂತೆ ಒಟ್ಟು 14 ಬೇಡಿಕೆಗಳನ್ನು ಒಳಗೊಂಡ ಮನವಿ ಪತ್ರವನ್ನು ಸಲ್ಲಿಸಿದರು.

ಹ್ಯಾಟಿ-ಮುಂಡರಗಿ ಗ್ರಾಮದ ಶಿವಣ್ಣ, ಚಿಕ್ಕಸಿಂದೋಗಿಯ ಚೆನ್ನಬಸಪ್ಪ, ಹುಲಿಗಿಯ ಶಾಂತಾ, ಶ್ರೀದೇವಿ, ಸಮೂಹ ಸಾಮರ್ಥ್ಯದ ಸಿಬ್ಬಂದಿ ವಿರೂಪಾಕ್ಷಪ್ಪ ಹಾಗೂ ಪ್ರಭಾಕರ ನೇತೃತ್ವ ವಹಿಸಿದ್ದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.