ಕೊಪ್ಪಳ: ಹೈದರಾಬಾದ್ ಕರ್ನಾಟಕಕ್ಕೆ ನೀಡಿದ 371(ಜೆ) ಕಲಂನ ಸೌಲಭ್ಯಗಳನ್ನು ಗದಗ ಜಿಲ್ಲೆಯ ರೋಣ ಹಾಗೂ ಮುಂಡರಗಿ ತಾಲ್ಲೂಕುಗಳ 60 ಗ್ರಾಮಗಳಿಗೆ ವಿಸ್ತರಿಸುವ ಸಚಿವ ಸಂಪುಟ ನಿರ್ಣಯ ಹಿಂತೆಗೆದುಕೊಳ್ಳಬೇಕು ಎಂದು ಶುಕ್ರವಾರ ಹೈದರಾಬಾದ್ ಕರ್ನಾಟಕ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಡಾ.ಶರಣಪ್ರಕಾಶ ಪಾಟೀಲರಿಗೆ ಹೈದರಾಬಾದ್ ಕರ್ನಾಟಕ ಹೋರಾಟ ಸಮಿತಿ ಪದಾಧಿಕಾರಿಗಳು ಪತ್ರ ಬರೆದಿದ್ದಾರೆ.
ಡಾ.ಡಿ.ಎಂ.ನಂಜುಡಪ್ಪ ಸಮಿತಿ ತನ್ನ ವರದಿಯಲ್ಲಿ ಕರ್ನಾಟಕದ ಯಾವುದೇ ಹಿಂದುಳಿದ, ಅತ್ಯಂತ ಹಿಂದುಳಿದ ಭಾಗಗಳ ಅಭಿವೃದ್ಧಿಗೆ ಸಂವಿಧಾನದ 371ನೇ ಕಲಂ ಸೌಲಭ್ಯಗಳನ್ನು ಕರ್ನಾಟಕ ಸರ್ಕಾರದ ಶಿಫಾರಿಸ್ಸಿನ ಮೇಲೆ ಕೇಂದ್ರ ಸರ್ಕಾರ ಮಂಜೂರು ಮಾಡಬಹುದು ಎಂದು ಹೇಳಿದೆ.
ಹಿರಿಯ ರಾಜಕಾರಣಿಗಳೂ, ಗ್ರಾಮೀಣಾಭಿವೃದ್ಧಿ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರು ಈ ಪ್ರಯತ್ನ ಮಾಡದೆ, ತಮ್ಮ ಪ್ರಭಾವ ಹಾಗೂ ಆಕ್ರಮಣಕಾರಿ ನೀತಿ ಹೇರಿ ಗದಗ ಜಿಲ್ಲೆಯ 60 ಗ್ರಾಮಗಳಿಗೆ ಸಚಿವ ಸಂಪುಟದ ನಿರ್ಣಯ ತೆಗೆದುಕೊಂಡು ಹೈದರಾಬಾದ್ ಕರ್ನಾಟಕಕ್ಕೆ ಮಂಜೂರಾಗಿರುವ ಸೌಲಭ್ಯಗಳನ್ನು ವಿಸ್ತರಿಸಿಕೊಂಡಿರುವುದು ಖಂಡನೀಯ. ಈ ನಿಟ್ಟಿನಲ್ಲಿ ಈ ಭಾಗದ ಸಂಘಟನೆಗಳು, ಸಂಘ-ಸಂಸ್ಥೆಗಳು ಪ್ರತಿಭಟನೆ ನಡೆಸಲು ಮುಂದಾಗಿವೆ ಎಂದು ಪತ್ರದಲ್ಲಿ ಅವರು ತಿಳಿಸಿದ್ದಾರೆ.
ಸಮಿತಿ ಜಿಲ್ಲಾಧ್ಯಕ್ಷ ಎಚ್.ಎಸ್.ಪಾಟೀಲ, ಕಾರ್ಯಾಧ್ಯಕ್ಷ ಪ್ರೊ.ಅಲ್ಲಮಪ್ರಭು ಬೆಟ್ಟದೂರು, ಬಸವರಾಜ ಆಕಳವಾಡಿ, ಬಿ.ಜಿ. ಕರಿಗಾರ, ಸಾಹಿತಿಗಳಾದ ಈಶ್ವರ ಹತ್ತಿ, ಎ.ಎಂ.ಮದರಿ ಸಹಮತ ವ್ಯಕ್ತಪಡಿಸಿದ್ದಾರೆ.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.