ADVERTISEMENT

₹2 ಕೋಟಿ ವೆಚ್ಚದಲ್ಲಿ ಆನೆಗೊಂದಿ ಉತ್ಸವ

ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಉತ್ಸವದ ಪೂರ್ವಭಾವಿ ಸಭೆ

​ಪ್ರಜಾವಾಣಿ ವಾರ್ತೆ
Published 28 ಡಿಸೆಂಬರ್ 2019, 10:26 IST
Last Updated 28 ಡಿಸೆಂಬರ್ 2019, 10:26 IST
ಗಂಗಾವತಿ ತಾಲ್ಲೂಕು ಪಂಚಾಯಿತಿಯ ಮಂಥನ ಸಭಾಂಗಣದಲ್ಲಿ ಶುಕ್ರವಾರ ಶಾಸಕ ಪರಣ್ಣ ಮುನವಳ್ಳಿ ಅವರ ನೇತೃತ್ವದಲ್ಲಿ ಆನೆಗೊಂದಿ ಉತ್ಸವದ ಪೂರ್ವಭಾವಿ ಸಭೆ ನಡೆಯಿತು
ಗಂಗಾವತಿ ತಾಲ್ಲೂಕು ಪಂಚಾಯಿತಿಯ ಮಂಥನ ಸಭಾಂಗಣದಲ್ಲಿ ಶುಕ್ರವಾರ ಶಾಸಕ ಪರಣ್ಣ ಮುನವಳ್ಳಿ ಅವರ ನೇತೃತ್ವದಲ್ಲಿ ಆನೆಗೊಂದಿ ಉತ್ಸವದ ಪೂರ್ವಭಾವಿ ಸಭೆ ನಡೆಯಿತು   

ಗಂಗಾವತಿ: ಜ.9, 10 ರಂದು ನಡೆಯುವ ತಾಲ್ಲೂಕಿನ ಐತಿಹಾಸಿಕ ಆನೆಗೊಂದಿ ಉತ್ಸವವನ್ನು ಸುಮಾರು ₹2ಕೋಟಿ ವೆಚ್ಚದಲ್ಲಿ ಮಾಡಲಾಗುವುದು ಎಂದು ಶಾಸಕ ಪರಣ್ಣ ಮುನವಳ್ಳಿ ಹೇಳಿದರು.

ನಗರದ ತಾಲ್ಲೂಕು ಪಂಚಾಯಿತಿಯ ಮಂಥನ ಸಭಾಂಗಣದಲ್ಲಿ ಶುಕ್ರವಾರ ಆನೆಗೊಂದಿ ಉತ್ಸವದ ನಿಮಿತ್ತ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ಆನೆಗೊಂದಿ ಉತ್ಸವವನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಗುವುದು. ಇದಕ್ಕಾಗಿ 21 ಸಮಿತಿಗಳನ್ನು ಈಗಾಗಲೇ ರಚನೆ ಮಾಡಲಾಗಿದೆ. ಅದಕ್ಕಾಗಿ ಪ್ರತಿಯೊಂದು ಇಲಾಖೆಯ ಅಧಿಕಾರಿಗಳು ತಮಗೆ ವಹಿಸಿದ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದರು.

ADVERTISEMENT

ಉತ್ಸವದಲ್ಲಿ ಪಾಲ್ಗೋಳ್ಳುವ ಕಲಾವಿದರ ಪಟ್ಟಿಯನ್ನು ಇನ್ನೂ ಬಿಡುಗಡೆ ಮಾಡದೆ ಇರುವುದಕ್ಕೆ ಶಾಸಕರ ವಿರುದ್ಧ ಅಸಮಾಧಾನವನ್ನು ವ್ಯಕ್ತವಾಯಿತು. ಸ್ಥಳೀಯ ಕಲಾವಿದರಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದು ಹೇಳಲಾಗುತ್ತಿದೆ. ಆದರೆ, ಪಟ್ಟಿ ಬಿಡುಗಡೆಯಾಗದೇ ಇರುವುದಕ್ಕೆ ಕಲಾವಿದರು ಅಸಮಾಧಾನಗೊಂಡಿದ್ದಾರೆ ಎಂದು ಸಭೆಯಲ್ಲಿ ಹಲವರು ಆರೋಪಿಸಿದರು.

ಶಾಸಕರು ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿ ಕೂಡಲೇ ಪಟ್ಟಿ ಬಿಡುಗಡೆ ಮಾಡುವಂತೆ ತಿಳಿಸಲಾಗುವುದು ಎಂದರು. ಜೊತೆಗೆ ಜ.9 ರಂದು ಉತ್ಸವಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಚಾಲನೆ ನೀಡಲಿದ್ದು, ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ಸಚಿವ ಸಿ.ಟಿ.ರವಿ ಕಾರ್ಯಕ್ರಮದಲ್ಲಿ ಪಾಲ್ಗೋಳ್ಳಲಿದ್ದಾರೆ ಎಂದು ತಿಳಿಸಿದರು.

ಉತ್ಸವಕ್ಕೆ ಬರುವ ಸಾರ್ವಜನಿಕರಿಗೆ, ಕಲಾವಿದರಿಗೂ ಭೋಜನ ವ್ಯವಸ್ಥೆಯನ್ನು ಮಾಡಲಾಗುವುದು. ಜೊತೆಗೆ ಉತ್ಸವ ನಡೆಯುವ ಎರಡು ದಿನ ರಾತ್ರಿ 1 ಗಂಟೆಯವರೆಗೂ ಬಸ್‌ ಸೌಲಭ್ಯ ಕಲ್ಪಿಸಲಾಗುವುದು ಎಂದು ಶಾಸಕರು ಹೇಳಿದರು.

ಜ.9 ರಂದು ನಡೆಯುವ ಮೊದಲ ದಿನದ ಉತ್ಸವದ ಕಾರ್ಯಕ್ರಮದಲ್ಲಿ ಗಾಯಕ ವಿಜಯ ಪ್ರಕಾಶ, ಸ್ಥಳೀಯ ಕಲಾವಿದರಾದ ಅರ್ಜುನ ಇಟಗಿ, ಪ್ರಾಣೇಶ್‌ , ಗಂಗಮ್ಮ ಅವರ ಕಾರ್ಯಕ್ರಮ ನಡೆಯಲಿದೆ. ಜತೆಗೆ ಸಿನಿಮಾ ನಟರಾದ ಸುದೀಪ್‌ ಅಥವಾ ಯಶ್‌ ಬರುವ ನಿರೀಕ್ಷೆ ಇದೆ ಎಂದು ಹೇಳಿದರು.

ಗಂಗಾವತಿ ತಹಶೀಲ್ದಾರ್‌ ಎಲ್.ಡಿ.ಚಂದ್ರಕಾಂತ್, ಕನಕಗಿರಿ ತಹಶೀಲ್ದಾರ್‌ ರವಿ ಅಂಗಡಿ, ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಶೇಖರಗೌಡ, ತಾಲ್ಲೂಕು ಪಂಚಾಯಿತಿ ಇಒ ಡಿ.ಮೋಹನ್‌, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಮಲ್ಲಿಕಾರ್ಜುನ ಗೌಡ, ಪ್ರಮುಖರಾದ ಸಿದ್ರಾಮ್ಮಯ್ಯ ಸ್ವಾಮಿ, ಹನುಮಂತಪ್ಪ ನಾಯಕ, ಚನ್ನಬಸವಸ್ವಾಮಿ ಹಾಗೂ ತಾಲ್ಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.