ADVERTISEMENT

ಆರೋಗ್ಯಯುತ ಸಮಾಜಕ್ಕೆ ಪ್ರಾಧಿಕಾರ ಅಗತ್ಯ

​ಪ್ರಜಾವಾಣಿ ವಾರ್ತೆ
Published 5 ಜನವರಿ 2018, 7:15 IST
Last Updated 5 ಜನವರಿ 2018, 7:15 IST

ಕೊಪ್ಪಳ: ‘ಆರೋಗ್ಯಯುತ ಸಮಾಜಕ್ಕೆ ಯೋಜನಾಬದ್ಧ ನಗರ ನಿರ್ಮಿಸಲು ಪ್ರಾಧಿಕಾರ ಅವಶ್ಯಕ’ ಎಂದು  ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ರಾಯರಡ್ಡಿ ಹೇಳಿದರು. ನಗರದ ಹೊಸಪೇಟೆ ರಸ್ತೆಯ ಬಳಿ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಕಚೇರಿಯ ಆವರಣದಲ್ಲಿ ಗುರುವಾರ ನಡೆದ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಕಟ್ಟಡ ಹಾಗೂ ವಾಣಿಜ್ಯ ಸಂಕೀರ್ಣ ಉದ್ಘಾಟಿಸಿ ಅವರು ಮಾತನಾಡಿದರು.

‘ಗ್ರಾಮೀಣ ಭಾಗದ ಜನರು ಉದ್ಯೋಗ, ಶಿಕ್ಷಣ, ವ್ಯಾಪಾರ ಹೀಗೆ ನಾನಾಕಾರಣಗಳಿಂದ ನಗರಕ್ಕೆ ವಲಸೆ ಹೋಗುತ್ತಿದ್ದಾರೆ. ಸ್ವಾತಂತ್ರ್ಯ ಪೂರ್ವದಲ್ಲಿ ಶೇ 11ರಷ್ಟು ಜನರು ನಗರದಲ್ಲಿ ವಾಸಿಸುತ್ತಿದ್ದರು. 2011ರಲ್ಲಿ ಈ ಪ್ರಮಾಣ ಶೇ 35ಕ್ಕೆ ಏರಿತು. ಆದರೆ ಈಗ ಶೇ 39ರಷ್ಟು ಜನರು ನಗರದಲ್ಲಿ ವಾಸಿಸುತ್ತಿದ್ದಾರೆ. ಈಗ ದೇಶದಲ್ಲಿ ಶೇ 40ರಷ್ಟು ಜನ ನಗರಗಳಲ್ಲಿದ್ದಾರೆ. ಶೇ 60ರಷ್ಟು ಜನ ಗ್ರಾಮೀಣ ಭಾಗದಲ್ಲಿ ವಾಸಿಸುತ್ತಿದ್ದಾರೆ. ಇದರಿಂದ ನಗರಗಳಲ್ಲಿ ವಾಸಿಸುವವರ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗುತ್ತಿದೆ. ಹಾಗಾಗಿ ನಗರಗಳು ಯೋಜನಾಬದ್ಧವಾಗಿ ನಿರ್ಮಿಸಲು ಪ್ರಾಧಿಕಾರವನ್ನು ಆರಂಭಿಸಲಾಗಿದೆ’ ಎಂದರು.

ಅಧ್ಯಕ್ಷತೆ ವಹಿಸಿದ್ದ ಶಾಸಕ ಕೆ.ರಾಘವೇಂದ್ರ ಹಿಟ್ನಾಳ್‍ ಮಾತನಾಡಿ, ‘₹ 3.90 ಕೋಟಿ ವೆಚ್ಚದಲ್ಲಿ ಪ್ರಾಧಿಕಾರದ ನೂತನ ಕಟ್ಟಡ ಹಾಗೂ ವಾಣಿಜ್ಯ ಸಂಕೀರ್ಣ ನಿರ್ಮಿಸಲಾಗಿದೆ. ಗಡಿಯಾರ ಕಂಬದ ನವೀಕರಣಕ್ಕೆ ₹25 ಲಕ್ಷ ಅನುದಾನ ನೀಡಲಾಗುತ್ತದೆ. ಈ ನಿಟ್ಟಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಪ್ರಾಧಿಕಾರದಿಂದ ಕೈಗೊಳ್ಳಲಾಗುತ್ತಿದೆ’ ಎಂದರು.

ADVERTISEMENT

ನಗರಸಭೆ ಅಧ್ಯಕ್ಷ ಮಹೇಂದ್ರ ಛೋಪ್ರಾ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಬಾಲಚಂದ್ರನ್‍, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎಸ್‍.ಬಿ.ನಾಗರಹಳ್ಳಿ, ಎಪಿಎಂಸಿ ಅಧ್ಯಕ್ಷ ಹನುಮಂತಪ್ಪ ಹಂಗನಕಟ್ಟಿ, ಜಿಲ್ಲಾಧಿಕಾರಿ ಎಂ.ಕನಗವಲ್ಲಿ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ರುದ್ರೇಶ್‍ ಘಾಳಿ, ನಗರಸಭೆ ಸದಸ್ಯ ಮುತ್ತುರಾಜ್‍ ಕುಷ್ಟಗಿ ಇದ್ದರು. ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೈಯ್ಯದ್ ಜುಲ್ಲು ಖಾದರ್‍ ಖಾದ್ರಿ ಪ್ರಾಸ್ತಾವಿಕ ಮಾತನಾಡಿದರು. ಸಿ.ವಿ.ಜಡಿಯವರ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.