ADVERTISEMENT

‘ಪಾವಗಡಕ್ಕೆ ನೀರು; ಶಾಶ್ವತ ಪರಿಹಾರವಲ್ಲ'

​ಪ್ರಜಾವಾಣಿ ವಾರ್ತೆ
Published 6 ಜನವರಿ 2018, 10:17 IST
Last Updated 6 ಜನವರಿ 2018, 10:17 IST

ಕೊಪ್ಪಳ: 'ತುಂಗಭದ್ರಾ ಜಲಾಶಯದಿಂದ ರಾಜ್ಯ ಸರ್ಕಾರ ಪಾವಗಡ ಸೇರಿದಂತೆ ಆ ಭಾಗಕ್ಕೆ ಕುಡಿಯುವ ನೀರು ಪೂರೈಕೆಗೆ ಯೋಜನೆ ರೂಪಿಸಿದೆ. ಆದರೆ, ಇದು ಶಾಶ್ವತ ಪರಿಹಾರವಾಗುವುದಿಲ್ಲ’ ಎಂದು ಸಂಸದ ಸಂಗಣ್ಣ ಕರಡಿ ಹೇಳಿದ್ದಾರೆ.

ಈ ಕುರಿತು ಶುಕ್ರವಾರ ಹೇಳಿಕೆ ನೀಡಿರುವ ಅವರು, ‘ನದಿ ಜೋಡಣೆಗೆ ಕೇಂದ್ರ ಸರ್ಕಾರ ಯೋಜನೆ ರೂಪಿಸಿದೆ. ಕೇಂದ್ರಕ್ಕೆ ರಾಜ್ಯ ಸರ್ಕಾರ ಮನವಿ ನೀಡುವ ಮೂಲಕ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ಇತ್ತೀಚೆಗೆ ತುಂಗಭದ್ರಾ ಜಲಾಶಯದಿಂದ ಪಾವಗಡ, ಚಳ್ಳಕೆರೆ ಭಾಗಕ್ಕೆ ಕುಡಿಯುವ ನೀರನ್ನು ಪೂರೈಸಲು ಯೋಜನೆ ಅನುಷ್ಠಾನಕ್ಕೆ ಘೋಷಣೆ ಮಾಡಿದ್ದಾರೆ.

ಇದಕ್ಕಾಗಿ 2.05 ಟಿಎಂಸಿ ನೀರನ್ನು ಬಳಸಿಕೊಳ್ಳಲು ಯೋಜನೆ ರೂಪಿಸಿದ್ದಾರೆ. ತುಂಗಭದ್ರಾ ಜಲಾಶಯದಿಂದ ಜನರಿಗೆ ಕುಡಿಯುವ ನೀರು ಪೂರೈಕೆ ಮಾಡಲು ಯಾವುದೇ ಅಭ್ಯಂತರವಿಲ್ಲ. ಆದರೆ, ತುಂಗಭದ್ರಾ ಜಲಾಶಯದ ಅಚ್ಚುಕಟ್ಟು ಪ್ರದೇಶದಲ್ಲಿರುವ ಮತ್ತು ಇದೇ ಜಲಾಶಯವನ್ನು ನೀರಿನ ಮೂಲವನ್ನಾಗಿಸಿಕೊಂಡಿರುವ ಅನೇಕ ಪಟ್ಟಣ, ಗ್ರಾಮಗಳಿವೆ. ಈಗಾಗಲೇ ಸತತ ಬರಗಾಲದಿಂದ ಈ ಭಾಗಕ್ಕೂ ಅನೇಕ ಬಾರಿ ಕುಡಿಯುವ ನೀರಿನ ತತ್ವಾರ ಉಂಟಾಗಿತ್ತು’ ಎಂದು ತಿಳಿಸಿದ್ದಾರೆ.

ADVERTISEMENT

‘ಅಲ್ಲದೆ, ಇದೇ ಜಲಾಶಯದ ನೀರನ್ನು ನಂಬಿಕೊಂಡಿರುವ ಅಚ್ಚುಕಟ್ಟು ಪ್ರದೇಶದ ರೈತರು ಈಗ ನೀರಿಲ್ಲದೆ ಕೇವಲ ಒಂದೇ ಬೆಳೆ ಬೆಳೆಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಿರುವಾಗ ಮತ್ತೆ ಇರುವ ಕಡಿಮೆ ನೀರಿನಲ್ಲಿ ಮತ್ತೆ ಬೇರೆ ಜಿಲ್ಲೆಗಳಿಗೆ ತೆಗೆದುಕೊಂಡು ಹೋಗುವುದು ಸರಿಯಲ್ಲ.

ಅದು ಆ ಭಾಗಕ್ಕೆ ಶಾಶ್ವತವಾದ ಪರಿಹಾರವೂ ಆಗಲಾರದು. ಕೇಂದ್ರ ಸರ್ಕಾರ ಈಗ ನದಿ ಜೋಡಣೆ ಯೋಜನೆಗೆ ಜಿಪಿಎಸ್ ಸರ್ವೆ ಕೈಗೊಂಡಿದೆ. ಇದರಿಂದಾಗಿ ಆ ಭಾಗದಲ್ಲಿ ಸಾಕಷ್ಟು ಅನುಕೂಲ ಮತ್ತು ಶಾಶ್ವತ ಪರಿಹಾರ ಒದಗಿಸಬಲ್ಲದು. ರಾಜ್ಯ ಸರ್ಕಾರ, ಕೇಂದ್ರ ಸರ್ಕಾರಕ್ಕೆ ಈ ಕುರಿತು  ಮನವಿ ನೀಡಿ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು’ ಎಂದು ಅವರು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.