ಕುಷ್ಟಗಿ: ಕೈಗಾರಿಕಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ₹ 1.30 ಲಕ್ಷ ಕೋಟಿ ಬ್ಯಾಂಕ್ ಸಾಲ ಮನ್ನಾ ಮಾಡಿದ ಪ್ರಧಾನಿ ನರೇಂದ್ರ ಮೋದಿ ರೈತರ ವಿಷಯದಲ್ಲಿ ಉದಾರ ಗುಣ ತೋರಲಿಲ್ಲ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದರು.
ಭಾನುವಾರ ಇಲ್ಲಿ ಜನಾಶೀರ್ವಾದ ಯಾತ್ರೆಯಲ್ಲಿ ಆಗಮಿಸಿ ವೇದಿಕೆ ಮೂಲಕ ಕೇವಲ ಐದು ನಿಮಿಷದ ಭಾಷಣವನ್ನು ಕೇಂದ್ರ ಸರ್ಕಾರವನ್ನು ಟೀಕಿಸುವುದಕ್ಕೆ ಬಳಸಿಕೊಳ್ಳುವ ಮೂಲಕ ನರೇಂದ್ರ ಮೋದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ರೈತರು, ಜನಸಾಮಾನ್ಯರ ಬಗ್ಗೆ ಸರ್ಕಾರಕ್ಕೆ ಯಾವುದೇ ಕಾಳಜಿ ಇಲ್ಲ. ಆದರೆ, ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ಕಾರ ರೈತರ ಸಹಕಾರ ಸಾಲ ಮನ್ನಾ ಮಾಡಿರುವುದನ್ನು ನೆನಪಿಸಿದರು.
ಸಂವಿಧಾನದ 371 ಜೆ ಕಲಂಗೆ ತಿದ್ದುಪಡಿ ತರುವ ಮೂಲಕ ಹೈದರಾಬಾದ್ ಕರ್ನಾಟಕ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ದೊರಕಿಸಿಕೊಡುವ ನಿಟ್ಟಿನಲ್ಲಿ ಹಿಂದೆ ರಾಜ್ಯ ಕಾಂಗ್ರೆಸ್ ಸರ್ಕಾರದ ಪ್ರಸ್ತಾವ ಕೇಂದ್ರದಲ್ಲಿ ಅಧಿಕಾರದಲ್ಲಿದ್ದ ಎನ್ಡಿಎ ಸರ್ಕಾರದ ಗೃಹಸಚಿವ ಲಾಲ್ಕೃಷ್ಣ ಅಡ್ವಾಣಿ ತಿರಸ್ಕರಿಸಿದ್ದರು. ಆದರೆ, ಯುಪಿಎ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮಲ್ಲಿಕಾರ್ಜುನ ಖರ್ಗೆ ಅವರ ಮನವಿ ಸ್ವೀಕರಿಸಿ ಅವಕಾಶವನ್ನು
ಕಲ್ಪಿಸಿತು ಎಂಬುದನ್ನು ಅವರು ವಿವರಿಸಿದರು.
ರಾಹುಲ್ ಗಾಂಧಿ ಅವರಿಗೆ ಮಾಜಿ ಸಚಿವ ಅಮರೇಗೌಡ ಬಯ್ಯಾಪುರ ಬೆಳ್ಳಿಗದೆ ನೀಡಿ ಸನ್ಮಾನಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಪಕ್ಷದ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ ಮಲ್ಲಿಕಾರ್ಜುನ ಖರ್ಗೆ, ಜಿ.ಪರಮೇಶ್ವರ, ವೀರಪ್ಪ ಮೊಯಿಲಿ, ಎಸ್.ಆರ್.ಪಾಟೀಲ, ಬಸವರಾಜ ರಾಯರೆಡ್ಡಿ, ಮಾಜಿ ಶಾಸಕ ಹಸನ್ಸಾಬ್ ದೋಟಿಹಾಳ, ಬ್ಲಾಕ್ ಅಧ್ಯಕ್ಷ ದೇವೇಂದ್ರಪ್ಪ, ಕೇದಾರನಾಥ ತುರಕಾಣಿ ನಿರೂಪಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.