ADVERTISEMENT

ಕೊಪ್ಪಳ: ಪ್ರಗತಿ ವರದಿ ನೀಡದಿದ್ದರೆ ಕ್ರಮ

ಅಧಿಕಾರಿಗಳ ಸಭೆಯಲ್ಲಿ ಜಿಲ್ಲಾಧಿಕಾರಿ ವಿಕಾಸ್‌ ಕಿಶೋರ್‌ ಸೂಚನೆ

​ಪ್ರಜಾವಾಣಿ ವಾರ್ತೆ
Published 6 ಜನವರಿ 2021, 3:53 IST
Last Updated 6 ಜನವರಿ 2021, 3:53 IST
ಕೊಪ್ಪಳದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ವಿಕಾಸ್‌ ಕಿಶೋರ್‌ ಸುರಳ್ಕರ್‌ ಮಾತನಾಡಿದರು
ಕೊಪ್ಪಳದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ವಿಕಾಸ್‌ ಕಿಶೋರ್‌ ಸುರಳ್ಕರ್‌ ಮಾತನಾಡಿದರು   

ಕೊಪ್ಪಳ: ‘ಜಿಲ್ಲೆಯ ವಿವಿಧ ಇಲಾಖೆಗಳಲ್ಲಿ ಬಾಕಿ ಇರುವ ಸರ್ಕಾರದ ಯೋಜನೆಗಳಿಗೆ ಸಂಬಂಧಿಸಿದ ಕೆಲಸವನ್ನು ಶೀಘ್ರದಲ್ಲಿ ಪೂರ್ಣಗೊಳಿಸಿ, ಡಿಸೆಂಬರ್ ಅಂತ್ಯದವರೆಗಿನ ಪ್ರಗತಿ ವರದಿ ಸಲ್ಲಿಸಬೇಕು’ ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜ.11 ರಂದು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಮ್ಮೇಳನ ಸಭೆಯ ಕುರಿತಾಗಿ ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಮುಖ್ಯಮಂತ್ರಿಗಳಾದಬಿ.ಎಸ್‌.ಯಡಿಯೂರಪ್ಪ ಅವರು ಜ.11ರಂದು ಪ್ರಾದೇಶಿಕ ಆಯುಕ್ತರು, ಜಿಲ್ಲಾಧಿಕಾರಿ ಮತ್ತು ಜಿ.ಪಂ. ಸಿಇಒಗಳೊಂದಿಗೆ ಸಭೆ ನಡೆಸುತ್ತಿದ್ದು, ಈ ಸಭೆಯಲ್ಲಿ ಜಿಲ್ಲೆಯಎಲ್ಲ ಇಲಾಖೆಗಳ ಡಿಸೆಂಬರ್ ಅಂತ್ಯದವರೆಗಿನ ಪ್ರಗತಿ ಮಾಹಿತಿ ಸಲ್ಲಿಸಬೇಕು. ಆದ್ದರಿಂದಎಲ್ಲ ಇಲಾಖೆಗಳ ಅಧಿಕಾರಿಗಳು ಡಿಸೆಂಬರ್ ಅಂತ್ಯದವರೆಗಿನ ಮಾಹಿತಿ ಸಲ್ಲಿಸಬೇಕು. ಈ ಸಂಬಂಧ ಅನೇಕ ಬಾರಿ ಸೂಚನೆ ನೀಡಿದರೂ ಅಧಿಕಾರಿಗಳು ಇದುವರೆಗೂ ಸಮರ್ಪಕವಾಗಿ ವರದಿ ನೀಡಿಲ್ಲ. ಸಂಜೆಯೊಳಗೆ ನಿಗದಿತ ನಮೂನೆಯಲ್ಲಿ ಪ್ರಗತಿ ವರದಿ ಸಲ್ಲಿಸದಿದ್ದಲ್ಲಿ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲಾಗುವುದು’ ಎಂದು ಎಚ್ಚರಿಕೆ ನೀಡಿದರು.

ADVERTISEMENT

‘ಜಲಶಕ್ತಿ ಅಭಿಯಾನ, ಜಲಾಮೃತ ಯೋಜನೆಗಳ ಪ್ರಗತಿ ವರದಿ, ಘನ ತ್ಯಾಜ್ಯ ವಿಲೇವಾರಿ, ನಿರ್ವಹಣೆಗೆ ನಿವೇಶನ ಗುರುತಿಸುವಿಕೆ, ಅಂದಾಜು ವೆಚ್ಚ ಪ್ರಮಾಣ ಪತ್ರಗಳೊಂದಿಗೆ ಯೋಜನೆಯ ಒಟ್ಟಾರೆ ವರದಿ ಸಲ್ಲಿಸಬೇಕು. ಭೂಮಿ ಖರೀದಿ ಯೋಜನೆಯಲ್ಲಿ ಬಾಕಿ ಉಳಿದ ಅರ್ಜಿಗಳನ್ನು ಶೀಘ್ರವೇ ವಿಲೇವಾರಿ ಮಾಡಬೇಕು’ ಎಂದು ಅವರು ಹೇಳಿದರು.

‘ಅಕ್ಕಿ ಸಾಗಿಸುವ ವಾಹನಗಳಿಗೆ ಕಡ್ಡಾಯವಾಗಿ ಜಿ.ಪಿ.ಎಸ್. ಅಳವಡಿಸಬೇಕು ಎಂದು ಮಾಲೀಕರಿಗೆ ಸೂಚನೆ ನೀಡಬೇಕು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬಾಲ್ಯ ವಿವಾಹ ಪ್ರಕರಣಗಳ ಕುರಿತು ಸಂಪೂರ್ಣ ವರದಿ ನೀಡಬೇಕು’ ಎಂದು ಅವರು ಸೂಚನೆ ನೀಡಿದರು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಘುನಂದನ್ ಮೂರ್ತಿ ಮಾತನಾಡಿ,‘ಅಧಿಕಾರಿಗಳು ತಮ್ಮ ಇಲಾಖೆಗೆ ಸಂಬಂಧಿಸಿದ ಯೋಜನೆಗಳು ನಿಗದಿತ ದಿನಾಂಕದೊಳಗೆ ಪೂರ್ಣಗೊಂಡ ಕುರಿತು ಮತ್ತು ಯೋಜನೆ ಅನುಷ್ಠಾನಕ್ಕೆ ಇರುವ ಸಮಸ್ಯೆಗಳ ಕುರಿತು ಮೇಲಾಧಿಕಾರಿಗಳಿಗೆ ಮಾಹಿತಿ ನೀಡಬೇಕು’ ಎಂದರು.

ಸಭೆಯಲ್ಲಿಹೆಚ್ಚುವರಿ ಜಿಲ್ಲಾಧಿಕಾರಿ ಎಂ.ಪಿ.ಮಾರುತಿ, ಜಿ.ಪಂ.ಉಪಕಾರ್ಯದರ್ಶಿ ಶರಣ ಬಸವರಾಜ, ಲೀಡ್ ಬ್ಯಾಂಕ್ ವ್ಯವಸ್ಥಾಪಕ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.