ADVERTISEMENT

ಪ್ರತಿ ಮನೆಗೂ ತಲುಪುವ ಗುರಿ: ಮಹೇಶ ಟೆಂಗಿನಕಾಯಿ

ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ

​ಪ್ರಜಾವಾಣಿ ವಾರ್ತೆ
Published 22 ಜನವರಿ 2023, 7:20 IST
Last Updated 22 ಜನವರಿ 2023, 7:20 IST
ಕೊಪ್ಪಳದಲ್ಲಿ ಶನಿವಾರ ಬಿಜೆಪಿ ವಿಜಯ ಸಂಕಲ್ಪ ಅಭಿಯಾನ ಕಾರ್ಯಕ್ರಮದಲ್ಲಿ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ ಮಾತನಾಡಿದರು
ಕೊಪ್ಪಳದಲ್ಲಿ ಶನಿವಾರ ಬಿಜೆಪಿ ವಿಜಯ ಸಂಕಲ್ಪ ಅಭಿಯಾನ ಕಾರ್ಯಕ್ರಮದಲ್ಲಿ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ ಮಾತನಾಡಿದರು   

ಕೊಪ್ಪಳ: 'ವಿಜಯ ಸಂಕಲ್ಪ ಅಭಿಯಾನದ ಮೂಲಕ ಪ್ರತಿ ವಿಧಾನಸಭಾ ಕ್ಷೇತ್ರದ ಪ್ರತಿ ಮನೆಯನ್ನೂ ತಲುಪುತ್ತೇವೆ. ಅಂದುಕೊಂಡಿದ್ದನ್ನು ಸಾಧಿಸುತ್ತೇವೆ" ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ ಹೇಳಿದರು.

ನಗರದ 26ನೇ ವಾರ್ಡ್ನ ಗಣೇಶ ನಗರದಲ್ಲಿ ಶನಿವಾರ ಬಿಜೆಪಿ ವಿಜಯ ಸಂಕಲ್ಪ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿ ‘ಬಿಜೆಪಿ ಮತ್ತು ಬೇರೆ ಪಕ್ಷಗಳ ನಡುವೆ ಸಾಕಷ್ಟು ವ್ಯತ್ಯಾಸವಿದೆ. ಉತ್ತಮ ನಾಯಕತ್ವ ಇರುವ ಪಕ್ಷ ಹೇಗೆ ಇರುತ್ತದೆ ಎನ್ನುವುದಕ್ಕೆ ಬಿಜೆಪಿಯೇ ಸಾಕ್ಷಿ. ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಕಾರಣ. ಜಿಲ್ಲೆಯ ಐದೂ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಕರೆತರುವ ಜವಾಬ್ದಾರಿ ನಿಮ್ಮೆಲ್ಲರ ಮೇಲಿದೆ’ ಎಂದು ಕಾರ್ಯಕರ್ತರಿಗೆ ಹೇಳಿದರು.

‘ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಯಾವಾಗ ಕೂಡಿ ಇರುತ್ತಾರೊ; ಯಾವಾಗ ದೂರವಾಗುತ್ತಾರೊ ಎನ್ನುವುದು ಗೊತ್ತಾಗುವುದಿಲ್ಲ. ಜಗತ್ತಿನ ಪ್ರಮುಖ ರಾಷ್ಟ್ರಗಳು ಭಾರತದತ್ತ ವಿಸ್ಮಯದಿಂದ ನೋಡುವಂತೆ ಮೋದಿ ಮಾಡುತ್ತಿದ್ದಾರೆ. ಅಭಿಯಾನದಲ್ಲಿ ಒಂದು ಕೋಟಿ ಜನರನ್ನು ಸದಸ್ಯರನ್ನಾಗಿ ಮಾಡುವ ಗುರಿ ಹೊಂದಲಾಗಿದೆ’ ಎಂದು ತಿಳಿಸಿದರು.

ADVERTISEMENT

ಬಳ್ಳಾರಿ ವಿಭಾಗದ ಸಹ ಪ್ರಭಾರಿ ಚಂದ್ರಶೇಖರ ಹಲಗೇರಿ ಮಾತನಾಡಿ ‘ಪಕ್ಷದ ಕಾರ್ಯಕರ್ತರು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಾಧನೆಗಳನ್ನು ಜನರ ಮುಂದಿಟ್ಟು ಮತ ಕೇಳಬೇಕು. ಈಗಾಗಲೇ ಸದಸ್ಯತ್ವ ನೋಂದಣಿ ಮಾಡಿಕೊಂಡವರು ಮತ್ತೊಮ್ಮೆ ಸದಸ್ಯತ್ವ ಪಡೆಯಬೇಕು’ ಎಂದರು.

ಅಭಿಯಾನದ ಜಿಲ್ಲಾ ಸಂಚಾಲಕ ಚಂದ್ರಶೇಖರ ಕವಲೂರು ’ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಪಕ್ಷವನ್ನು ಗೆಲ್ಲಿಸುವ ಕೆಲಸವನ್ನು ಪ್ರತಿ ಕಾರ್ಯಕರ್ತನೂ ಮಾಡಬೇಕು. ರಾಜ್ಯದಲ್ಲಿ ಬಿಜೆಪಿ 160 ಕ್ಷೇತ್ರಗಳಲ್ಲಿ ಗೆಲ್ಲಲಿದೆ’ ಎಂದು ಭವಿಷ್ಯ ನುಡಿದರು.

ನಗರ ಮಂಡಲ ಅಧ್ಯಕ್ಷ ಸುನೀಲ್ ಹೆಸರೂರು, ನಗರ ಸಂಚಾಲಕ ಅಮರೇಶ ಮುರಳಿ, ನಗರಸಭೆ ಸದಸ್ಯೆ ದೇವಕ್ಕ ಲಕ್ಷ್ಣಣ ಕಂದಾರಿ, ಮುಖಂಡರಾದ ಸಿ.ವಿ ಚಂದ್ರಶೇಖರ, ಡಾ.ಕೆ.ಜಿ ಕುಲಕರ್ಣಿ, ರಾಜ್ಯ ಮಹಿಳಾ ಮೋರ್ಚಾ ಕಾರ್ಯದರ್ಶಿ ಶೋಭಾ ನಗರಿ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.