
ಅಳವಂಡಿ: ಸಮೀಪದ ಮತ್ತೂರು ಗ್ರಾಪಂ ವ್ಯಾಪ್ತಿಯ ಹನಕುಂಟಿ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಸ್ಥಗಿತಗೊಂಡಿದ್ದು, ಗ್ರಾಮಸ್ಥರಿಗೆ ಶುದ್ಧ ಕುಡಿಯುವ ನೀರು ಮರೀಚಿಕೆಯಾಗಿದೆ.
ಕೊಪ್ಪಳ ತಾಲ್ಲೂಕಿನ ಹನಕುಂಟಿ ಗ್ರಾಮ ಸೂಮಾರು 2000 ಜನಸಂಖ್ಯೆ ಹೊಂದಿದೆ. ಆದರೆ ಗ್ರಾಮದ ಜನರಿಗೆ ಶುದ್ಧ ಕುಡಿಯುವ ನೀರಿನ ಬರ ಕಾಡುತ್ತಿದೆ. ಶುದ್ಧ ಕುಡಿಯುವ ನೀರು ಪೂರೈಕೆಗೆ ಸರ್ಕಾರ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಿದ್ದು, ಅಧಿಕಾರಿಗಳ, ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದ ಸಧ್ಯ ಕುಡಿಯುವ ನೀರಿನ ಘಟಕ ಬಂದ್ ಆಗಿದೆ ಎನ್ನುತ್ತಾರೆ ಗ್ರಾಮಸ್ಥರು.
ಘಟಕ ಸ್ಥಾಪನೆಯಾದಾಗ ಕೆಲವು ದಿನ ಮಾತ್ರ ಆರಂಭ ಇತ್ತು. ಕುಡಿಯುವ ನೀರಿನ ಘಟಕ ಬಂದ್ ನಂತರ ಘಟಕದಲ್ಲಿನ ಸಾಮಾಗ್ರಿಗಳು ತುಕ್ಕು ಹಿಡಿಯುತ್ತಿವೆ ಎಂದು ಸಾರ್ವಜನಿಕರು ಆರೋಪಿಸುತ್ತಾರೆ.
ಸದ್ಯ ಗ್ರಾಮಸ್ಥರು ಕುಡಿಯಲು ಬೋರವೇರ್ ನೀರನ್ನು ಅವಲಂಬಿಸಿದ್ದಾರೆ. ಶುದ್ಧ ಕುಡಿಯುವ ನೀರಿನ ಘಟಕ ಪ್ರಾರಂಭಿಸುವಂತೆ ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಹಲವಾರು ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗುತ್ತಿಲ್ಲ ಎನ್ನುತ್ತಾರೆ ಇಲ್ಲಿನ ಗ್ರಾಮಸ್ಥರು.
‘ಬೇಸಿಗೆ ಆರಂಭವಾಗುತ್ತಿದೆ. ಈಗಾಲಾದರೂ ಸಂಬಂಧಿಸಿದ ಅಧಿಕಾರಿಗಳು ಕ್ರಮ ಕೈಗೊಂಡು ಶುದ್ಧ ಕುಡಿಯುವ ನೀರಿನ ಘಟಕ ಆರಂಭಿಸಬೇಕು. ಸಾರ್ವಜನಿಕರಿಗೆ ಕುಡಿಯುವ ನೀರು ಒದಗಿಸಬೇಕು’ ಎಂದು ನೀಲಪ್ಪ, ಮುದಿಯಪ್ಪ, ಚಂದ್ರಶೇಖರ, ಪ್ರದೀಪ, ಮಹಾಂತೇಶ, ಬಸಪ್ಪ ಒತ್ತಾಯಿಸಿದ್ದಾರೆ.
ಶುದ್ಧ ಕುಡಿಯುವ ನೀರಿನ ಘಟಕ ಬಂದ್ ಆಗಿದ್ದು ಕೂಡಲೇ ದುರಸ್ತಿಗೊಳಿಸಿ ಪುನಃ ಪ್ರಾರಂಭಿಸಿ ಜನರಿಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗುವುದುಅಕ್ಬರ್ ಪಿಡಿಒ ಗ್ರಾಪಂ ಮತ್ತೂರು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.