
ಅಳವಂಡಿ: ‘ಪಿಯು ವಿದ್ಯಾರ್ಥಿಗಳು ಪರೀಕ್ಷೆಯನ್ನು ಆತ್ಮವಿಶ್ವಾಸದಿಂದ ಎದುರಿಸಬೇಕು. ಪರೀಕ್ಷೆ ಸಂದರ್ಭದಲ್ಲಿ ದೈಹಿಕ, ಮಾನಸಿಕ ಆರೋಗ್ಯ ಬಹಳ ಮುಖ್ಯ. ಒತ್ತಡಕ್ಕೆ ಒಳಗಾಗದೇ ಧೈರ್ಯದಿಂದ ಪರೀಕ್ಷೆ ಎದುರಿಸಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಿ’ ಎಂದು ದಾವಣಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಗುರುರಾಜ ಹಂಚಿನಾಳ ಹೇಳಿದರು.
ಇಲ್ಲಿನ ಸಿದ್ದೇಶ್ವರ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಭಾನುವಾರ ದ್ವಿತೀಯ ಪಿಯು ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡಿದ್ದ ಪರೀಕ್ಷಾ ಪೂರ್ವ ಸಿದ್ಧತಾ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಬಾಗಲಕೋಟೆ ಅಂಜುಮನ್ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಪೀರಸಾಹೇಬ್ ತಪ್ಪಡಿ ಮಾತನಾಡಿ, ‘ವಿದ್ಯಾರ್ಥಿಗಳು ಪ್ರಾಮಾಣಿಕತೆ ಹಾಗೂ ಕಠಿಣ ಪರಿಶ್ರಮದಿಂದ ವ್ಯಾಸಂಗ ಮಾಡಬೇಕು. ಶಿಕ್ಷಕರ ಮಾರ್ಗದರ್ಶನದಲ್ಲಿ ಮುಂದುವರಿದಿದ್ದೇ ಆದಲ್ಲಿ ಪರೀಕ್ಷೆಯನ್ನು ಸುಲಭವಾಗಿ ಎದುರಿಸಿ ಹೆಚ್ಚಿನ ಸಾಧನೆ ಮಾಡಲು ಸಾಧ್ಯ’ ಎಂದರು.
ಪಿಯು ವಿದ್ಯಾರ್ಥಿಗಳಿಗೆ ಶಿಕ್ಷಣ ಶಾಸ್ತ್ರ, ಸಮಾಜಶಾಸ್ತ್ರ ವಿಷಯದ ಕುರಿತು ಹಾಗೂ ಪರೀಕ್ಷಾ ಪೂರ್ವತಯಾರಿ ಕುರಿತು ಮಾಹಿತಿ ನೀಡಿದರು.
ಪ್ರಕಾಶಸ್ವಾಮಿ ಇನಾಮದಾರ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಪ್ರಾಚಾರ್ಯ ಡಿ.ಜಿ.ಲಕ್ಕನಗೌಡರ, ಉಪನ್ಯಾಸಕರಾದ ನವೀನ ಇನಾಮದಾರ, ಸಿದ್ದು ಅಂಗಡಿ, ಮಲ್ಲಪ್ಪ ಅಂಬಿಗೇರ, ದೇವಮ್ಮ ಕಲಾದಗಿ, ಗಣೇಶ ಕೋಗಳಿ, ಅಂಬರೀಶ್ ಬೋಚನಹಳ್ಳಿ, ನೀಲಪ್ಪ ಅಂಗಡಿ, ಚನ್ನಯ್ಯ ಹಿರೇಮಠ ಹಾಗೂ ಇತರರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.